ಮಂಡ್ಯ ಉಪ ಚುನಾವಣೆ : ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರು ಗರಂ!
ಮಂಡ್ಯ, ಅಕ್ಟೋಬರ್ 18 : ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆ ಪೈಕಿ ಹೆಚ್ಚು ಕುತೂಹಲ ಕೆರಳಿಸಿರುವುದು ಮಂಡ್ಯದ ಚುನಾವಣೆ. ಮಂಡ್ಯದ ಕಾಂಗ್ರೆಸ್ ನಾಯಕರು ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇ ಗೌಡ ಅವರನ್ನು ಬೆಂಬಲಿಸಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕು.
'ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಬೇಡ. ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸೋಣ' ಎಂದು ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚೆಲುವರಾಯಸ್ವಾಮಿ ಹೇಳಿದ್ದರು. ಆದರೆ, ಅಂತಿಮವಾಗಿ ಮೈತ್ರಿ ಮಾಡಿಕೊಂಡು ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ.
ಎಲ್.ಆರ್.ಶಿವರಾಮೇಗೌಡ ಅವರಿಗೆ ಕಾಂಗ್ರೆಸ್ ನಾಯಕರು ಬೆಂಬಲ ನೀಡಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿದರು. ಕ್ಷೇತ್ರದ ಉಪ ಚುನಾವಣೆ, ಜೆಡಿಎಸ್ ಅಭ್ಯರ್ಥಿ ಬೆಂಬಲಿಸುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಯಾರು ಪಾಲ್ಗೊಂಡಿದ್ದರು
ಮಂಡ್ಯ ಲೋಕಸಭಾ ಉಪಚುನಾವಣೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆಯ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ನಡೆಸಿದರು. ಸಭೆಯಲ್ಲಿ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ರವಿ ಗಣಿಗ, ರಾಮಕೃಷ್ಣ, ಮಧುಮಾದೇಗೌಡ, ಕೆ.ಬಿ ಚಂದ್ರಶೇಖರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ವಿವಿಧ ನಾಯಕರು ಗರಂ
ಸಭೆಯಲ್ಲಿ ಜೆಡಿಎಸ್ ನಾಯಕರು, ಕಾರ್ಯಕರ್ತರ ನಡೆ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದರು. ಮಂಡ್ಯದ ಜೆಡಿಎಸ್ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ನಾವು ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಈ ಕುರಿತು ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು.

ಹೈಕಮಾಂಡ್ ನಿರ್ಧಾರ
ದಿನೇಶ್ ಗುಂಡೂರಾವ್ ಅವರ ಬಳಿ ಅಸಮಾಧಾನವನ್ನು ಹೊರ ಹಾಕಿದ ಚೆಲುರಾಯಸ್ವಾಮಿ ಅವರು, 'ಹೈಕಮಾಂಡ್ ನಿರ್ಧಾರದಂತೆ ಜೆಡಿಎಸ್ಗೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇವೆ. ಆದರೆ, ಜೆಡಿಎಸ್ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ' ಎಂದರು. 'ಹೈಕಮಾಂಡ್ ನಿರ್ಧಾರವೇ ಅಂತಿಮ. ಹಾಗಾಗಿ ನಾವು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು' ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಪ್ರಚಾರಕ್ಕೆ ಹೋಗುವುದಿಲ್ಲ
ದಿನೇಶ್ ಗುಂಡೂರಾವ್ ಅವರ ವರ್ತನೆ ಇದೇ ರೀತಿ ಮುಂದುವರೆ ನಾವು ಯಾರು ಸಹ ಕಾಂಗ್ರೆಸ್ ಬೆಂಬಲಿಸುವುದಿಲ್ಲ ಮತ್ತು ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರವನ್ನು ನಡೆಸುವುದಿಲ್ಲ ಎಂದು ಚೆಲುವರಾಯಸ್ವಾಮಿ ಮತ್ತು ನರೇಂದ್ರ ಸ್ವಾಮಿ ಅವರು ನೇರವಾಗಿ ಹೇಳಿದರು. ಜೆಡಿಎಸ್ ನಾಯಕರ ಜೊತೆ ಪ್ರಚಾರಕ್ಕೆ ಹೋಗದಿದ್ದರೆ ಸರಿ, ಆದರೆ, ಗೊಂದಲ ಆಗದಂತೆ ನೋಡಿಕೊಳ್ಳಿ ಎಂದು ದಿನೇಶ್ ಗುಂಡೂರಾವ್ ಅವರು ಜಿಲ್ಲಾ ನಾಯಕರಿಗೆ ಸಲಹೆ ನೀಡಿದರು.

ಪಕ್ಷದ ಸೂಚನೆ ಪಾಲಿಸುತ್ತೇವೆ
ಸಭೆಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ ಅವರು, 'ಎಲ್.ಆರ್.ಶಿವರಾಮೇಗೌಡ ಅವರು ದೂರವಾಣಿ ಕರೆ ಮಾಡಿದ್ದರು. ಬೆಂಬಲ ನೀಡುತ್ತೇವೆ ಎಂದು ಹೇಳಿದ್ದೇನೆ. ಜಿಲ್ಲೆಯಲ್ಲಿ ಎರಡು ಪಕ್ಷಗಳು ಮಾತ್ರ ಇದ್ದು ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಲಿದ್ದಾರೆ. ಪಕ್ಷ ನೀಡಿದ ಸೂಚನೆಗಳನ್ನು ಮಾತ್ರ ಪಾಲಿಸುತ್ತೇವೆ. ಮುಂದೆ ಪಕ್ಷ ಮತ್ತು ಕಾರ್ಯಕರ್ತರನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದು ತಿಳಿದಿದೆ' ಎಂದು ಹೇಳಿದರು.












Click it and Unblock the Notifications