ಮಂಡ್ಯ ಉಪ ಚುನಾವಣೆ : ಬೇಳೂರು ಗೋಪಾಲಕೃಷ್ಣ ವಿರುದ್ಧ ಎಫ್ಐಆರ್
ಮಂಡ್ಯ, ನವೆಂಬರ್ 04 : ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಬೇಳೂರು ಗೋಪಾಲಕೃಷ್ಣ ವಿರುದ್ಧ ದೂರು ನೀಡಿದ್ದರು.
ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಮಂಡ್ಯ ಉಪ ಚುನಾವಣೆಯ ಮತದಾನ ಶನಿವಾರ ಮುಕ್ತಾಯಗೊಂಡಿದ್ದು, 53.93ರಷ್ಟು ಮತದಾನ ನಡೆದಿದೆ.
ಬೇಳೂರು ಗೋಪಾಲಕೃಷ್ಣ ಅವರು ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಕಣದಿಂದ ಹಿಂದೆ ಸರಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಡಾ.ಸಿದ್ದರಾಮಯ್ಯ ಅವರು ದೂರು ನೀಡಿದ್ದರು.
ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಡಾ.ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಎಲ್.ಆರ್.ಶಿವರಾಮೇಗೌಡ ಅವರು ಕಣದಲ್ಲಿದ್ದರು. ನವೆಂಬರ್ 6ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ...

ಹೇಳಿಕೆಯಿಂದ ಹಿನ್ನಡೆ ಉಂಟಾಗಲಿದೆ
ಮಂಡ್ಯ ಲೋಕಸಭಾ ಉಪ ಚುನಾವಣಾ ಕಣದಿಂದ ನಾನು ಹಿಂದೆ ಸರಿಯುತ್ತೇನೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿಕೆ ಕೊಟ್ಟಿದ್ದಾರೆ. ಇದರಿಂದ ನನಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಆದ್ದರಿಂದ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಬೇಳೂರು ಗೋಪಾಲಕೃಷ್ಣ ವಿರುದ್ಧ ಡಾ.ಸಿದ್ದರಾಮಯ್ಯ ದೂರು ನೀಡಿದ್ದರು.

ಡಾ.ಸಿದ್ದರಾಮಯ್ಯಗೆ ಕರೆ
'ಬೇಳೂರು ಗೋಪಾಲಕೃಷ್ಣ ಅವರು ನನಗೆ ಕರೆ ಮಾಡಿ ಕಣದಿಂದ ಹಿಂದೆ ಸರಿಯುತ್ತೀರಾ?' ಎಂದು ಪ್ರಶ್ನಿಸುತ್ತಿದ್ದಾರೆ. ಅವರು ಯಾರು?, ಯಾವ ಪಕ್ಷದಲ್ಲಿದ್ದಾರೆ? ಎಂಬುದು ನನಗೆ ತಿಳಿದಿಲ್ಲ' ಎಂದು ಡಾ.ಸಿದ್ದರಾಮಯ್ಯ ಅವರು ಹೇಳಿದ್ದರು.

ಕಣದಿಂದ ಹಿಂದೆ ಸರಿಯುವುದಿಲ್ಲ
'ನಾನು ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕಾರ್ಯಕರ್ತರಲ್ಲಿ, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಲಾಗುತ್ತಿದೆ. ಆದರೆ, ನಾನು ಹಿಂದೆ ಸರಿಯುತ್ತಿಲ್ಲ' ಎಂದು ಡಾ.ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದರು.

ಮತದಾನ ಮುಗಿದಿದೆ
ನವೆಂಬರ್ 3ರಂದು ಮಂಡ್ಯ ಉಪ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, 53.93ರಷ್ಟು ಮತದಾನ ನಡೆದಿದೆ. ನವೆಂಬರ್ 6ರ ಮಂಗಳವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications