ಮಂಡ್ಯ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಅಸಮಾಧಾನ!
ಮಂಡ್ಯ, ಅಕ್ಟೋಬರ್ 13 : ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದೆ. ಆದರೆ, ಸ್ಥಳೀಯ ನಾಯಕರು ಅಭ್ಯರ್ಥಿ ಡಾ.ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಗೆ ಪರಿಚಯವೇ ಇಲ್ಲದ ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಪಕ್ಷದ ಕೆಲವು ಕಾರ್ಯಕರ್ತರು ಇದನ್ನು ಖಂಡಿಸಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣ ಗೌಡ ಮೇಲೆ ಹಲ್ಲೆ ಮಾಡಲು ಪ್ರಯತ್ನ ನಡೆಸಿದ್ದಾರೆ.
ನವೆಂಬರ್ 3ರಂದು ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಒಮ್ಮತದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಾಗಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಮಂಡ್ಯ ಜಿಲ್ಲೆಯ ಚುನಾವಣೆ ಉಸ್ತುವಾರಿಯಾಗಿದ್ದಾರೆ. ಅವರು ಡಾ.ಸಿದ್ದರಾಮಯ್ಯ ಅವರನ್ನು ಗುರುವಾರ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಲೋಕಸಭೆ ಉಪ ಚುನಾವಣೆಗೆ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು.

ಡಾ.ಸಿದ್ದರಾಮಯ್ಯ ಅಭ್ಯರ್ಥಿ
ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಡಾ.ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿ. ಆದರೆ, ವಲಸಿಗರಿಗೆ ಟಿಕೆಟ್ ನೀಡಲಾಗಿದೆ. ಜಿಲ್ಲೆಗೆ ಪರಿಚಯವೇ ಇಲ್ಲದ ವ್ಯಕ್ತಿಗೆ ಹೇಗೆ ಟಿಕೆಟ್ ನೀಡಿದಿರಿ? ಎಂದು ಕೆಲವು ಮುಖಂಡರು, ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ಥಳೀಯರಲ್ಲದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಕೆ.ನಾಗಣ್ಣ ಗೌಡ ಮೇಲೆ ಹಲ್ಲೆ ಮಾಡಲು ಪ್ರಯತ್ನ ನಡೆಸಿದರು.

ಪರಿಣಾಮ ಎದುರಿಸಬೇಕಾಗುತ್ತದೆ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ. ಈ ಸಮಯದಲ್ಲಿ ಉಪ ಚುನಾವಣೆ ಗೆಲ್ಲಲು ಬಿಜೆಪಿಗೆ ಉತ್ತಮ ಅವಕಾಶವಿತ್ತು. ಆದರೆ, ಸ್ಥಳೀಯರಲ್ಲದ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆ ಮೇಲೆಯೂ ಇದು ಪರಿಣಾಮ ಬೀರಲಿದೆ. ಹೊರಗಿನವರಿಗೆ ಟಿಕೆಟ್ ಸಿಗಲು ಜಿಲ್ಲಾ ಘಟಕದ ಅಧ್ಯಕ್ಷ ಕೆ.ನಾಗಣ್ಣ ಅವರೇ ಕಾರಣ ಎಂದು ಕಾರ್ಯಕರ್ತರು ಆರೋಪಿಸಿದರು.

ಯಾರು ಸಿದ್ದರಾಮಯ್ಯ?
ಡಾ.ಸಿದ್ದರಾಮಯ್ಯ ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ. 1967ರಲ್ಲಿ ಶ್ರೀರಂಪಟ್ಟಣ, 1983ರಲ್ಲಿ ಮಂಡ್ಯ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ದೊಡ್ಡಬೋರೇಗೌಡರ ಪುತ್ರ. ಜುಲೈನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದ ಅವರು ಈಗ ರಾಜಕಾರಣಕ್ಕೆ ಧುಮುಕಿದ್ದಾರೆ. ಗುರುವಾರ ಆರ್.ಅಶೋಕ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ಮೋದಿ ಅವರ ಆಕರ್ಷಣೆ
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರ ಸೇವೆಯಿಂದ ಆಕರ್ಷಿತನಾಗಿದ್ದೇನೆ. ಪಕ್ಷದಲ್ಲಿ ಗುರುತಿಸಿಕೊಳ್ಳುವ ಆಸೆ ಇತ್ತು. ಸರ್ಕಾರಿ ಸೇವೆಗೆ ಸೇರುವ ಮುನ್ನ ಎಬಿವಿಪಿಯಲ್ಲಿದೆ. ದತ್ತಾತ್ರೇಯ ಹೊಸಬಾಳೆ ಅವರ ಜೊತೆಗೂ ಕೆಲಸ ಮಾಡಿದ್ದೇನೆ. ಈಗ ಸೇವೆಯಿಂದ ನಿವೃತ್ತನಾಗಿದ್ದು, ಪಕ್ಷ ಸೇರಿದ್ದೇನೆ' ಎಂದು ಹೇಳಿದರು.

ಅಶ್ವತ್ಥ ನಾರಾಯಣ ಹೆಸರಿತ್ತು
ಮಂಡ್ಯ ಉಪ ಚುನಾವಣೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಇತ್ತು. ಈ ಕುರಿತು ಆರ್.ಅಶೋಕ ಅವರು ಹೇಳಿಕೆ ನೀಡಿದ್ದು, 'ಅಶ್ವತ್ಥ ನಾರಾಯಣ ಅವರ ಹೆಸರು ಇದ್ದರೂ ಅಂತಿಮವಾಗಿ ಸಿದ್ದರಾಮಯ್ಯ ಅವರು ಅಭ್ಯರ್ಥಿಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿಯೇ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ಅಶ್ವತ್ಥ ನಾರಾಯಣ ಅವರು ಪಕ್ಷದ ಶಿಸ್ತಿನ ಸಿಪಾಯಿ, ಬೇಸರಪಟ್ಟುಕೊಳ್ಳುವುದಿಲ್ಲ' ಎಂದು ಹೇಳಿದರು.

ಅಭ್ಯರ್ಥಿ ಯಾರು?
ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆದರೆ, ಅಭ್ಯರ್ಥಿ ಯಾರು ಎಂಬುದು ಇನ್ನೂ ಘೋಷಣೆಯಾಗಿಲ್ಲ. ಅಕ್ಟೋಬರ್ 17 ನಾಮಪತ್ರವನ್ನು ಸಲ್ಲಿಸಲು ಕೊನೆಯ ದಿನವಾಗಿದೆ.












Click it and Unblock the Notifications