ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲೇ ಭುಗಿಲೆದ್ದಿತು ಸಿಎಂ ವಿರುದ್ಧ ಆಕ್ರೋಶ
Recommended Video
ಮಂಡ್ಯ, ಜುಲೈ 9: ವಿಧಾನಸಭೆ ಚುನಾವಣೆ ವೇಳೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳನ್ನೇ ಗೆಲ್ಲಿಸಿದ್ದ ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.
ವಿಧಾಸಭಾ ಚುನಾವಣಾ ಪ್ರಚಾರಗಳಲ್ಲಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿ ಇದೀಗ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಕುಮಾರಸ್ವಾಮಿ ವಿರುದ್ಧ ಮಂಡ್ಯದ ರೈತರು ತಿರುಗಿ ಬಿದ್ದಿದ್ದಾರೆ.
ಬೆಂಗಳೂರಲ್ಲಿ ರೈತರಿಂದ ಬೃಹತ್ ಪ್ರತಿಭಟನೆ, ಬಂಧನ
ಈ ಸಂಬಂಧ ರಾಜ್ಯ ರೈತ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕುಮಾರಸ್ವಾಮಿ, ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾ ಸಮಿತಿ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್, ಪ್ರಧಾನ ಕಾರ್ಯದರ್ಶಿ ಬೊಮ್ಮೇಗೌಡ ನೇತೃತ್ವದಲ್ಲಿ ಧರಣಿ ನಡೆಸಿ ಮಾತನಾಡಿದ ರೈತ ಮುಖಂಡರು, ಸರಕಾರ ಕೂಡಲೇ ಕೃಷಿಕರ ಎಲ್ಲ ಸಾಲಗಳನ್ನು ಹಾಗೂ ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಮೈಷುಗರ್ ಮತ್ತು ಪಿಎಸ್ ಎಸ್ ಕೆ ಕಾರ್ಖಾನೆಗಳನ್ನು ಕೂಡಲೇ ಆರಂಭಿಸಬೇಕು. ಕಬ್ಬು ಸರಬರಾಜು ಮಾಡಿರುವ ರೈತರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನೂತನ ಸಾಲಿನ ಕಬ್ಬಿನ ದರ ನಿಗದಿ ಮಾಡಿ, ಕಾರ್ಖಾನೆ ಆರಂಭಿಸಬೇಕು. ಮುಂಗಾರು ಮಳೆ ಉತ್ತಮವಾಗಿದ್ದು, ಕೂಡಲೇ ಸಬ್ಸಿಡಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ರಸ ಗೊಬ್ಬರವನ್ನು ವಿತರಿಸಬೇಕು, ಕಡಿತ ಮಾಡಿರುವ ಅಕ್ಕಿಯನ್ನು ಪಡಿತರ ಚೀಟಿದಾರರಿಗೆ ನೀಡಬೇಕು ಎಂದು ಆಗ್ರಹಿಸಿದರು.