ಮಂಡ್ಯ : ಜೆಡಿಎಸ್ ಮುಖಂಡನ ಕೊಲೆ ನಾಲ್ವರ ಬಂಧನ
ಮಂಡ್ಯ, ಡಿಸೆಂಬರ್ 25 : ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕಾಶ್ ಅಂತ್ಯಕ್ರಿಯೆ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ, ಮಂಗಳವಾರ ಸಂಜೆ ನಡೆದಿದೆ.
ತೊಪ್ಪನಹಳ್ಳಿ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದರು. ಏಳು ಆರೋಪಿಗಳ ಪೈಕಿ ನಾಲ್ವರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಸೋಮವಾರ ಸಂಜೆ ಮದ್ದೂರಿನ ಟಿ.ಬಿ.ಸರ್ಕಲ್ನಲ್ಲಿ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ಮದ್ದೂರಿನ ಸರ್ಕಾರಿ ಆಸ್ಪತ್ರೆ ಮುಂದೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಮಂಗಳವಾರ ಸಂಜೆ ತೊಪ್ಪನಹಳ್ಳಿಯಲ್ಲಿ ಪ್ರಕಾಶ್ ಅಂತ್ಯಕ್ರಿಯೆ ನಡೆದಿದೆ. ಪ್ರಕಾಶ್ ಅವರ ಪುತ್ರ ಅಭಿಷೇಕ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ತೊಪ್ಪನಹಳ್ಳಿ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
7 ಜನರ ವಿರುದ್ಧ ಎಫ್ಐಆರ್ : ತೊಪ್ಪನಹಳ್ಳಿಯಲ್ಲಿ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೊಪ್ಪನಹಳ್ಳಿ ಗ್ರಾಮದ ಪ್ರಸನ್ನ, ಸ್ವಾಮಿ, ಮುತ್ತೇಶ್, ಶಿವರಾಜು, ಯೋಗೇಶ್, ಹೇಮಂತ್ ಸೇರಿದಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಕಾಪಾಡಬೇಕು ಎಂದು ಐಜಿಪಿ ಶರತ್ ಚಂದ್ರ ಅವರು ಜೆಡಿಎಸ್ ಕಾರ್ಯಕರ್ತರು ಮತ್ತು ಜನರಲ್ಲಿ ಮನವಿ ಮಾಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಭೇಟಿ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಹತ್ಯೆಗೊಳಗಾದ ಪ್ರಕಾಶ್ ಅವರ ಮನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications