ಮಂಡ್ಯ: ಹಣ ಡಬಲ್ ಮಾಡುವ ಹೆಸರಿನಲ್ಲಿ ಮಹಿಳೆಗೆ ₹70 ಲಕ್ಷ ವಂಚನೆ; ಆರೋಪಿ ಬಂಧನ, ₹43 ಲಕ್ಷ ವಶ
ಮಂಡ್ಯ : ಹಣ ದ್ವಿಗುಣಗೊಳಿಸುವುದಾಗಿ ಮಹಿಳೆಯನ್ನು ನಂಬಿಸಿ 70 ಲಕ್ಷ ರೂ. ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ತಿಳಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದ ಕುಪ್ಪಂ ನಿವಾಸಿ ಶಿವ. ಬಿ. ಅಲಿಯಾಸ್ ಶಿವಬುಡ್ಡಪ್ಪ ಅಲಿಯಾಸ್ ಸೂರ್ಯ ಆಲಿಯಾಸ್ ಅಜಯ್ ಅಲಿಯಾಸ್ ಗೋವರ್ಧನ್ ಅಲಿಯಾಸ್ ಸಾಂಭಶಿವ (42) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.

ಆಂಧ್ರದ ಕುಪ್ಪಂ ನಿವಾಸಿ ಶಿವ ಚಾಮರಾಜನಗರ ಸಿಂಗಾನಲ್ಲೂರು ಗ್ರಾಮದ ಮಹಿಳೆಯನ್ನು ಮದುವೆಯಾಗಿ ವಾಸವಾಗಿದ್ದು, ಈತ ಬೆಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿಂಷಾಪುರ ಗ್ರಾಮದ ಎಸ್. ಮೇರಿ ಎಂಬಾಕೆಯನ್ನು ನಂಬಿಸಿ ವಂಚಿಸಿದ್ದ.
₹1 ಕೋಟಿ ಕೊಟ್ಟರೆ ₹25 ಕೋಟಿ ವಾಪಸ್!
ಶಿವ ಅಲಿಯಾಸ್ ಸಾಂಭಶಿವ ಮಳವಳ್ಳಿ ತಾಲೂಕು ಹೆಬ್ಬಣಿ ಗ್ರಾಮದ ನಿರ್ವಾಣೇಶ್ವರ ವಿರಕ್ತ ಮಠದ ಶ್ರೀ ಶಂಭುಲಿಂಗಸ್ವಾಮೀಜಿಯನ್ನು ಪರಿಚಯ ಮಾಡಿಕೊಂಡಿದ್ದ. ಅವರ ಮೂಲಕ ಶಿಂಷಾಪುರ ಗ್ರಾಮದ ಶ್ಯಾಲೋಮ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ಗೆ ಸೇರಿದ ಎಸ್. ಮೇರಿ ಅವರನ್ನು ಪರಿಚಯಿಸಿಕೊಂಡಿದ್ದ. ಬಳಿಕ ಆಕೆಗೆ 1 ಕೋಟಿ ರೂ. ನೀಡಿದರೆ ನಾನು 25 ಕೋಟಿ ಮಾಡಿಕೊಡುವುದಾಗಿ ನಂಬಿಸಿದ್ದ. ಈ ವೇಳೆ ನೋಟಿನ ಅಳತೆಗೆ ಬಿಳಿ ಪೇಪರ್ಗಳನ್ನು ಕಟ್ ಮಾಡಿ ಸಿದ್ಧಪಡಿಸಿಕೊಂಡು ಒಂದು ಚೀಲದಲ್ಲಿ ತಂದಿದ್ದ. ಈ ಸಂದರ್ಭದಲ್ಲಿ ಜಾದೂ ಪ್ರದರ್ಶನದ ಮಾದರಿ ತೋರಿಸಿ ನಂಬಿಸಿದ್ದ.
ಈತನನ್ನು ನಂಬಿದ ಎಸ್. ಮೇರಿ ಅವರು ತನ್ನ ಸ್ನೇಹಿತರು, ಬಂಧುಗಳಿಂದ ಹಣವನ್ನು ಸಾಲ ಪಡೆದು ಸುಮಾರು 70 ಲಕ್ಷ ಸಂಗ್ರಹಿಸಿದ್ದರು. ಬಳಿಕ ಜನವರಿ 1ರಂದು ಹಣ ಕೊಡುವುದಾಗಿ ಹೇಳಿ ಮನೆಗೆ ಕರೆಸಿಕೊಂಡಿದ್ದರು.
70 ಲಕ್ಷ ಹಣವನ್ನು ಆತನಿಗೆ ತೋರಿಸಿದರು. ಮನೆಗೆ ಬರುವ ಮುನ್ನ ಆರೋಪಿ ಸಿಹಿ ಪೊಂಗಲ್ ಮತ್ತು ಜ್ಯೂಸ್ನ್ನು ತಂದಿದ್ದ. ಜ್ಯೂಸ್ನಲ್ಲಿ ಪ್ರಜ್ಞೆ ತಪ್ಪಿಸುವ ಪೌಡರನ್ನು ಹಾಕಿ ಮೇರಿಯವರಿಗೆ ಕುಡಿಯಲು ಕೊಟ್ಟಿದ್ದ. ಆಕೆ ಕುಡಿದ ಸ್ವಲ್ಪ ಹೊತ್ತಿನಲ್ಲೇ ಮೂರ್ಚೆ ಹೋಗಿದ್ದರು. ಆರೋಪಿ ಶಿವ ಅಲಿಯಾಸ್ ಸಾಂಭಶಿವ ತಕ್ಷಣ 70 ಲಕ್ಷ ರೂ. ಹಣವಿದ್ದ ಬ್ಯಾಗನ್ನು ತೆಗೆದುಕೊಂಡು ಪರಾರಿಯಾಗಿದ್ದ.
ತಾನು ಮೋಸ ಹೋಗಿರುವುದಾಗಿ ಅರಿತ ಎಸ್. ಮೇರಿ ಅವರು ಜ. 26ರಂದು ಬೆಳಕವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿ ಪತ್ತೆಗೆ ಮಳವಳ್ಳಿ ಡಿವೈಎಸ್ಪಿ ಹಾಗೂ ಹಲಗೂರು ಸಿಪಿಐ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿತ್ತು. ಈ ತಂಡ ಕಾರ್ಯಾಚರಣೆ ನಡೆಸಿ ಮೈಸೂರಿನಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂತು. ಆರೋಪಿಯಿಂದ ₹43,88,500 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು 7 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಯತೀಶ್ ತಿಳಿಸಿದರು.
ಆರೋಪಿ ನ್ಯಾಯಾಂಗ ಬಂಧನಕ್ಕೆ
ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಹಣವನ್ನು ವಶಪಡಿಸಿಕೊಳ್ಳಲು ಮುಂದಾಗಿರುವುದಾಗಿ ತಿಳಿಸಿದ ಅವರು, ಆರೋಪಿ ಎಗರಿಸಿದ ಹಣದಿಂದ ಮೈಸೂರಿನಲ್ಲಿ ಮನೆಯೊಂದನ್ನು ಬೋಗ್ಯಕ್ಕೆ ಪಡೆದಿದ್ದಾನೆ. ಜೊತೆಗೆ ಮನೆಗೆ ಅಗತ್ಯವಾದ ಪೀಠೋಪಕರಣಗಳು ಇತರೆ ಸಾಮಗ್ರಿಗಳನ್ನೂ ಖರೀದಿಸಿದ್ದಾನೆ. ಈ ಪ್ರಕರಣ ಸೇರಿದಂತೆ ಈತನ ಮೇಲೆ ವಿವಿಧೆಗಳಲ್ಲಿ 11 ಪ್ರಕರಣ ಇರುವುದಾಗಿ ತಿಳಿಸಿದರು.












Click it and Unblock the Notifications