ಶ್ರೀರಂಗಪಟ್ಟಣ ಕಾಂಗ್ರೆಸ್ ಟಿಕೆಟ್ಗೆ ಪೈಪೋಟಿ!
ಮಂಡ್ಯ, ನವೆಂಬರ್ 22 : ಚುನಾವಣೆ ಘೋಷಣೆಯಾಗುವ ಮೊದಲೇ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗೆ ಪೈಪೋಟಿ ಆರಂಭವಾಗಿದೆ. ಜೆಡಿಎಸ್ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಸಹ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಶ್ರೀರಂಗಪಟ್ಟಣದ ಪ್ರವಾಸಿ ಮಂದಿರಲ್ಲಿ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಅವರು ಬೆಂಬಲಿಗರ ಸಭೆ ನಡೆಸಿದ್ದಾರೆ. '2018ರ ಚುನಾವಣೆಗೆ ಕ್ಷೇತ್ರದಿಂದ ತಾವು ಸ್ಪರ್ಧಿಸುವುದು ಖಚಿತ' ಎಂದು ಹೇಳಿದ್ದಾರೆ.

ಇಂಡುವಾಳು ಸಚ್ಚಿದಾನಂದ ಅವರ ಹೇಳಿಕೆಯಿಂದಾಗಿ ಜೆಡಿಎಸ್ ಶಾಸಕ ರಮೇಶ ಬಂಡಿಸಿದ್ದೇಗೌಡ ಅವರಿಗೆ ಟಿಕೆಟ್ ಕೈ ತಪ್ಪುವುದೇ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಜೆಡಿಎಸ್ನಿಂದ ಅಮಾನತುಗೊಂಡಿರುವ ರಮೇಶ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರಿ ಮುಂದಿನ ಚುನಾವಣೆಗೆ ಸ್ಪರ್ಧಿಸುವ ತಯಾರಿಯಲ್ಲಿದ್ದಾರೆ.
'ಕಳೆದ 10 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಹಳ್ಳಿ-ಹಳ್ಳಿ ಸುತ್ತಿ ಪಕ್ಷ ಸಂಘಟನೆ ಮಾಡಿದ್ದೇನೆ. ಪಕ್ಷದ ಸಮಾವೇಶಗಳನ್ನು ಯಶಸ್ವಿಯಾಗಿ ಮಾಡಿದ್ದೇನೆ. ಆದ್ದರಿಂದ, ಈ ಬಾರಿ ಟಿಕೆಟ್ ಸಿಗಲಿದೆ' ಎಂದು ಇಂಡುವಾಳು ಸಚ್ಚಿದಾನಂದ ಹೇಳಿದ್ದಾರೆ.
'ರಮೇಶ್ ಬಂಡಿಸಿದ್ದೇಗೌಡ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ. ಅವರು ಹೋದಕಡೆ 2018ರ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಹತ್ತಾರು ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡಿದ ಅವರನ್ನು ಕಾರ್ಯಕರ್ತರು ಒಪ್ಪುವುದಿಲ್ಲ' ಎಂದು ತಿಳಿಸಿದ್ದಾರೆ.
ಶ್ರೀರಂಗಪಟ್ಟಣದ ಕಾಂಗ್ರೆಸ್ ಮುಖಂಡ ರವೀಂದ್ರ ಶ್ರೀಕಂಠಯ್ಯ ಅವರು ಪಕ್ಷ ತೊರೆದಿದ್ದಾರೆ. ಅವರನ್ನು ಜೆಡಿಎಸ್ ಗೆ ಬರುವಂತೆ ಎಚ್.ಡಿ.ಕುಮಾರಸ್ವಾಮಿ ಆಹ್ವಾನಿಸಿದ್ದಾರೆ.












Click it and Unblock the Notifications