ಮಂಡ್ಯ: ಮಳೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಗೇಟ್ ಮುರಿದು ಒಳ್ಳ ನುಗ್ಗಿ ಆಕ್ರೋಶ
ಮಂಡ್ಯ, ಅಕ್ಟೋಬರ್ 17 : ಮಳೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ರೂಪಿಸುವಂತೆ ಒತ್ತಾಯಿಸಿ ನಗರದ ಬೀಡಿ ಕಾಲೋನಿ ನಿವಾಸಿಗಳು ಪ್ರತಿಭಟನೆ ನಡೆಸಿದರಲ್ಲದೆ, ಜಿಲ್ಲಾಧಿಕಾರಿ ಕಚೇರಿ ಗೇಟ್ ಮುರಿದು ಒಳ್ಳ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.
ಕಳೆದ ಮೂರು ದಿನಗಳಿಂದ ಮಂಡ್ಯ ನಗರದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಕಾಲೋನಿಯಲ್ಲಿ ಮಂಡಿಯುದ್ದ ನೀರು ನಿಂತು ಇಲ್ಲಿನ ನಿವಾಸಿಗಳು ಬಹಳ ತೊಂದರೆ ಅನುಭವಿಸುತ್ತಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಭಾನುವಾರ ಭೇಟಿ ನೀಡಿ ಶಾಶ್ವತ ಪರಿಹಾರ ರೂಪಿಸಲಾಗುವುದು, ಇದಕ್ಕಾಗಿ ತಾತ್ಕಾಲಿಕವಾಗಿ 1.2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿ ಹೋಗಿದ್ದರು.
ಆದರೆ, ಇಲ್ಲಿನ ನಿವಾಸಿಗಳ ಆಕ್ರೋಶದ ಕಟ್ಟೆ ಒಡೆದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೆ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡು ಏಕಾಏಕಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಪ್ರಯತ್ನಿಸಿದರು. ಈ ಸಂದರ್ಭ ಪೊಲೀಸರು ಗೇಟ್ ಹಾಕಿದರೂ ಇದನ್ನು ಲೆಕ್ಕಿಸದೆ ಗೇಟ್ ಮುರಿದು ಒಳನುಗ್ಗಿ ಆವರಣದಲ್ಲಿ ಧರಣಿ ಕುಳಿತರು.

ನಾವು ಸಂಕಷ್ಟ ಅನುಭವಿಸುತ್ತಿದ್ದರೂ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುತ್ತಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ಸಮಸ್ಯೆ ಆಲಿಸಬೇಕೆಂದು ಪಟ್ಟು ಹಿಡಿದರು. ಆದರೆ, ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದರಿಂದಾಗಿ, ಪ್ರತಿಭಟನಾಕಾರರು ಆವರಣದಲ್ಲೇ ಊಟ ಮಾಡಿ ಸಂಜೆಯವರೆಗೂ ಧರಣಿಯನ್ನು ಮುಂದುವರಿಸಿದ್ದರು.
ಶಾಶ್ವತ ಪರಿಹಾರಕ್ಕೆ ಕ್ರಮ
ಕೆರೆಯಂಗಳದ ಬಡಾವಣೆಯಲ್ಲಿ ನಮಗೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದೀರಿ, ಸುಮಾರು ಎರಡು ಸಾವಿರ ಕುಟಂಬಗಳು ಅಲ್ಲಿವೆ. ಆದರೆ, ಯಾವುದೇ ಮೂಲಸೌಕರ್ಯ ಒದಗಿಸಿಲ್ಲ. ಮಿಗಿಲಾಗಿ ಮಳೆ ಬಂದಾಗ ಬಡಾವಣೆ ಕೆರೆಯಂತಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಮುಂದಾಗಿಲ್ಲ. 'ಮೊನ್ನೆ ಜಿಲ್ಲಾ ಉಸ್ತುವಾರಿ ಸಚಿವರ ನಾಮಕಾವಸ್ತೆಗೆ ಭೇಟಿ ಹೋದರು. ಮುಖ್ಯಮಂತ್ರಿಗಳು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಿ ಹಣ ಬಿಡುಗಡೆಯಾಗಿದೆ ಎನ್ನುತ್ತಾರೆ, ಆದರೆ ಪ್ರತಿ ಬಾರಿಯೂ ಇದನ್ನೆ ಹೇಳುತ್ತಿದಾರೆ ಹೊರತು ಕ್ರಮ ಮಾತ್ರ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಎಡಿಸಿ ಮಾತಿಗೂ ಬಗ್ಗಲಿಲ್ಲ
ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು ಅವರು ಧರಣಿ ಸ್ಥಳಕ್ಕೆ ಬಂದು ಜಿಲ್ಲಾಧಿಕಾರಿಗಳು ಬಂದ ನಂತರ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರೂ, ನೀರು ಸರಾಗವಾಗಿ ಹರಿಯಲು ಪೈಪುಗಳನ್ನು ಅಳವಡಿಸುವವರೆಗೂ ಧರಣಿಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟುಹಿಡಿದಿದ್ದರು.












Click it and Unblock the Notifications