ಪಿಎಫ್ಐ, ಎಸ್ಡಿಪಿಐ ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿ ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ
ಮಂಡ್ಯ, ಆಗಸ್ಟ್, 01: ರಾಜ್ಯದಲ್ಲಿ ಸಮಾಜ ವಿರೋಧಿ ಚಟುವಟಿಕೆಯಲ್ಲಿ ನಿರತವಾಗಿರುವ ಪಾಪುಲರ್ ಫ್ರೆಂಟ್ ಆಫ್ ಇಂಡಿಯಾ ಹಾಗೂ ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು.
ಎಲ್ಲ ಮಂಡಲಗಳಿಂದ ಆಗಮಿಸಿದ ಕಾರ್ಯಕರ್ತರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಿದರು. ಸಮಾಜದ್ರೋಹಿ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು, ಜನಾಂಗೀಯ ದ್ವೇಷ ಹರಡುವುದರಲ್ಲಿ ಈ ಸಂಘಟನೆಗಳು ನಿರತವಾಗಿವೆ. ದೇಶದ ಏಕತೆ ಮತ್ತು ಅಖಂಡತೆಗೆ ಧಕ್ಕೆ ಉಂಟು ಮಾಡುವ ಪೋಸ್ಟ್ಗಳನ್ನು ಬೇರೆ ಬೇರೆ ಹೆಸರಿನ ಪೇಜ್ಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಮತ್ತು ಬಹಿರಂಗವಾಗಿ ಕೋಮು ದ್ವೇಷ ಹರಡುವುದು ಮಾಡುತ್ತಿವೆ ಎಂದು ಆರೋಪಿಸಿದರು.
ಬಹಿರಂಗವಾಗಿ ಹಿಂದೂಪರ ಸಂಘಟನೆಗಳನ್ನು ನಾಶಪಡಿಸುವುದಾಗಿ ಹೇಳಿಕೆ ನೀಡುವುದು ಕೋಮು ಪ್ರಚೋದನೆ ನೀಡುವುದರಲ್ಲಿ ನಿರತವಾಗಿವೆ. ಅಕ್ರಮ ಗೋಸಾಗಾಣೆಗೆ ಕುಮ್ಮಕ್ಕು ನೀಡುವುದು, ಆರ್ಎಸ್ಎಸ್ ಬಗ್ಗೆ ಅವಹೇಳನಕಾರಿಯಾಗಿ ಟೀಕಿಸುವುದು, ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಈ ಸಂಘಟನೆಗಳು ಸಕ್ರಯವಾಗಿವೆ ಎಂದು ದೂರಿದರು. ತಕ್ಷಣ ದೇಶದ ಹಿತದೃಷ್ಠಿಯಿಂದ ಇಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇದಿಸಬೇಕು.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೂ ಮುಂಬರುವ ದಿನಗಳಲ್ಲಿ ದೇಶ ವಿರೋಧಿ ಸಂಘಟನೆಗಳನ್ನು ಕಿತ್ತುಹಾಕುವ ಕೆಲಸ ಮಾಡಬೇಕು. ಬಂಧಿತರಿಗೆ ವಿದೇಶಿ ಹಣದ ನೆರವಿನ ಬಗ್ಗೆ ಕೂಲಂಕಷ ತನಿಖೆ ನಡೆಸಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಥವಾ ಭಯೋತ್ಪಾದಕ ನಿಗ್ರಹ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಇವರಿಗೆ ಹಣಕಾಸು ನೆರವು ನೀಡುತ್ತಿರುವ ವ್ಯಕ್ತಿಗಳು ಹಾಗೂ ಸಂಘಟನೆಗಳ ಸ್ಥಿರ ಮತ್ತು ಚರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪಟ್ಟು ಹಿಡಿದಿದ್ದರು.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಹತ್ಯೆ ಆದಾಗಿನಿಂದಲೂ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಪ್ರವೀಣ್ ಹತ್ಯೆಗೈದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎನ್ನುವ ಕೂಗುಗಳು ಎದ್ದಿವೆ. ಮತ್ತೊಂದೆಡೆ ಹಿಂದೂಪರ ಸಂಘಟನೆಗಳು ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಹಠ ಹಿಡಿದು ಬೀದಿಗೆ ಇಳಿದಿವೆ. ಕಾಲೇಜು ವಿದ್ಯಾರ್ಥಿಗಳನ್ನು ಸೇರಿಸಿ ಪ್ರತಿಭಟನೆಗೆ ಇಳಿದಿವೆ. ಇದು ಒಂದು ಎರಡು ಜಿಲ್ಲೆಗಳಲ್ಲ, ರಾಜ್ಯದ ಮೂಲೆ ಮೂಲೆಗಳಲ್ಲಿಯೂ ಸಮಾಜಕ್ಕೆ ಮಾರಕವಾದ ಸಂಘಟನೆಗಳ್ನು ಬ್ಯಾನ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.












Click it and Unblock the Notifications