ಮಂಡ್ಯ; ಮೇಲುಕೋಟೆ ವೈರಮುಡಿ ಉತ್ಸವ, ತೆಪ್ಪೋತ್ಸವಕ್ಕೆ ತಯಾರಿ
ಮಂಡ್ಯ, ಮಾರ್ಚ್ 12; "ಸರ್ಕಾರದ ತೀರ್ಮಾನದಂತೆ ಈ ಬಾರಿ ಐತಿಹಾಸಿಕ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಉತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುವುದು ಹಾಗೂ ಮಾರ್ಚ್ 18 ರಂದು ತೆಪ್ಪೋತ್ಸವ ಸಹ ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ" ಎಂದು ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ.
ಮೇಲುಕೋಟೆ ವೈರಮುಡಿ ಉತ್ಸವದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿದ ಶಾಸಕರು, "ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿಕೊಂಡು ಉತ್ಸವಕ್ಕೆ ಬೇಕಾದಂತಹ ಸಕಲ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ" ಎಂದರು.
"ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮಾರ್ಚ್ 14ರಂದು ನಡೆಯುವ ವೈರಮುಡಿ ಬ್ರಹೋತ್ಸವಕ್ಕೆ ಆಗಮಿಸಿ ದಳವಾಯಿ ಕೆರೆಗೆ ಬಾಗಿನವನ್ನು ಅರ್ಪಿಸಿ ನಂತರ ದೇವರ ದರ್ಶನ ಮಾಡಿ ಪುಷ್ಪಾರ್ಚನೆ ಸಲ್ಲಿಸುವರು. ಮೇಲುಕೋಟೆಯಲ್ಲಿನ ಕೆಲವು ಸರ್ಕಾರಿ ಕಾಮಗಾರಿಗೆ ಶಂಕು ಸ್ಥಾಪನೆ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳನ್ನು ಉದ್ಘಾಟಿಸುವರು" ಎಂದು ಸಿ. ಎಸ್. ಪುಟ್ಟರಾಜು ತಿಳಿಸಿದ್ದಾರೆ.

"ಚೆಲುವನಾರಾಯಣ ಸ್ವಾಮಿಯ ವೈರಮುಡಿ ಮಹೋತ್ಸವದ ದಿನದಂದು ಸುಮಾರು 10 ಲಕ್ಷ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಭಕ್ತಾದಿಗಳಿಗೆ ಯಾವುದೇ ರೀತಿಯ ಕುಂದುಕೊರತೆಯಾಗದಂತೆ ಎಲ್ಲರಿಗೂ ದೇವರ ದರ್ಶನ ಮಾಡಲು ಅನುಕೂಲ ಮಾಡಿಕೊಡಲಾಗುತ್ತದೆ" ಎಂದರು.
ವೈರಮುಡಿ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳು ಅಗತ್ಯ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ದಳವಾಯಿ ಕೆರೆಗೆ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ ಸ್ಥಳವನ್ನು ಶುಕ್ರವಾರ ಪರಿಶೀಲಿಸಿದರು.
ಜಿಲ್ಲಾಡಳಿತದ ತಯಾರಿ; ಮಾರ್ಚ್ 9 ರಿಂದ 21ರ ತನಕ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಉತ್ಸವವನ್ನು ವಿಜೃಂಭಣೆಯಿಂದ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕರೆ ನೀಡಿದ್ದಾರೆ. ಶ್ರೀ ಚಲುವರಾಯಸ್ವಾಮಿ ವೈರಮುಡಿ ಉತ್ಸವ ಆಚರಣೆ ಕುರಿತು ಪ್ರವಾಸಿ ಮಂದಿರದಲ್ಲಿ ಅವರು ಪೂರ್ವಭಾವಿ ಸಭೆ ನಡೆಸಿದರು.
ಉತ್ಸವ ಯಶಸ್ವಿಯಾಗಿ ನಡೆಯಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೆಲಸ ಮಾಡಬೇಕು. ಮಹೋತ್ಸವಕ್ಕೆ ಆಗಮಿಸುವ ಎಲ್ಲಾ ಭಕ್ತರಿಗೆ ಅನುಕೂಲವಾಗುವಂತೆ ಸಾರಿಗೆ ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ, ಹಾಗೂ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇವಾಲಯದ ಸಮೀಪ ಆಂಬುಲೆನ್ಸ್ ಮತ್ತು ವೈದ್ಯಕೀಯ ತಂಡವನ್ನು ನಿಯೋಜನೆ ಮಾಡಬೇಕು. ವಾಹನಗಳ ಪಾರ್ಕಿಂಗ್, ಬ್ಯಾರಿಕೇಡ್, ರಸ್ತೆ ದುರಸ್ತಿ, ಉತ್ಸವಗಳ ನಿರ್ವಹಣೆ, ದೀಪಾಲಂಕಾರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಉತ್ಸವದ ಅವಧಿಯಲ್ಲಿ ಸ್ವಚ್ಛತೆ ಕಾಪಾಡಲು ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಗತ್ಯಕ್ರಮ ಕೈಗೊಳ್ಳಬೇಕು. ಜಾತ್ರಾ ಮಹೋತ್ಸವ ಮುಗಿಯುವ ಹೆಚ್ಚುವರಿ ಸಿಬ್ಬಂದಿ ಮತ್ತು ಪೌರಕಾರ್ಮಿಕರನ್ನು ನೇಮಿಸಿ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.
ವೈರಮುಡಿ ಬ್ರಹೋತ್ಸವ; ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಪ್ರತಿವರ್ಷ ಹಲವಾರು ಉತ್ಸವ ನಡೆಯುತ್ತದೆ. ಆದರೆ ಹತ್ತು ದಿನಗಳ ಕಾಲ ನಡೆಯುವ ಚೆಲುವರಾಯಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಅತ್ಯಂತ ಪ್ರಮುಖವಾದದ್ದು, ಬ್ರಹ್ಮೋತ್ಸವವು ಪ್ರತಿ ವರ್ಷವೂ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ನಡೆಯುತ್ತದೆ. ಇದನ್ನು ನೋಡಲು ಲಕ್ಷಾಂತರ ಜನರು ಆಗಮಿಸುತ್ತಾರೆ.
ವೈರಮುಡಿ ಎಂದರೆ ವಜ್ರ. ಬ್ರಹ್ಮೋತ್ಸವ ನಡೆಯುವ ಸಂದರ್ಭದಲ್ಲಿ ಮೇಲುಕೋಟೆ ಚೆಲುವರಾಯಸ್ವಾಮಿಗೆ ವೈರಮುಡಿ ಕಿರೀಟ ಹಾಕಲಾಗುತ್ತದೆ. ಅಲ್ಲದೇ ಮೈಸೂರು ಅರಸರು ಅರ್ಪಣೆ ಮಾಡಿದ ರಾಜಮುಡಿ, ಗಂಡಭೇರುಂಡ ಪದಕ, ಶಂಖ, ಚಕ್ರ, ಗಧೆ, ಪದ್ಮಪೀಠ, ಕರ್ಣಕುಂಡಲ ಸೇರಿದಂತೆ 14 ಆಭರಣಗಳನ್ನು ಹಾಕಲಾಗುತ್ತದೆ.












Click it and Unblock the Notifications