ಕೆಆರ್ಎಸ್ ಸುತ್ತಮುತ್ತ 20 ಕಿ.ಮೀ.ಯಲ್ಲಿ ಗಣಿಗಾರಿಕೆ ನಿಷೇಧ
ಮಂಡ್ಯ, ಅಕ್ಟೋಬರ್ 09 : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ (ಕೆಆರ್ಎಸ್) ಜಲಾಶಯದ 20 ಕಿ.ಮೀ.ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಮಂಗಳವಾರ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಅಧಿಕಾರಿಗಳ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಷೇಧಿಸುವಂತೆ ಪ್ರಕೃತಿ ವಿಕೋಪ ಕೇಂದ್ರ ನೀಡಿರುವ ವರದಿಯನ್ನು ಆಧರಿಸಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
'ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಬಾರಿ ಸ್ಪೋಟಗಳನ್ನು ಬಳಸಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವರದಿಗಳಿವೆ. ಈ ಭಾಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಕೂಡ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತಂತೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ವರದಿ ನೀಡಬೇಕು' ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

'ನೀರಾವರಿ ಇಲಾಖೆಯೊಂದಿಗೆ ಸಂಪರ್ಕ ಇಟ್ಟುಕೊಂಡು ಗಣಿಗಾರಿಕೆಯಿಂದ ಜಲಾಶಯಕ್ಕೆ ಆಗಬಹುದಾದ ತೊಂದರೆ ಕುರಿತಂತೆ ಸಮಗ್ರ ಅಧ್ಯಯನ ವರದಿಯನ್ನು ಸಂಬಂಧಪಟ್ಟ ಅಧಿಕಾರಿಗಳು ನೀಡಬೇಕು. ಸಾರ್ವಜನಿಕರು ಗಣಿಗಾರಿಕೆ ನಿಷೇಧ ಕುರಿತಂತೆ ನೀಡುವ ಯಾವುದೇ ದೂರುಗಳನ್ನು ಸಮಗ್ರವಾಗಿ ಪರಿಶೀಲಿಸಲು 3 ತಂಡಗಳನ್ನು ರಚಿಸಲಾಗಿದೆ' ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಕೆಆರ್ಎಸ್ ವ್ಯಾಪ್ತಿಯ ಹಿನ್ನೀರಿನ ಭಾಗದಲ್ಲಿ ಕೆ.ಆರ್.ನಗರ ತಾಲೂಕು ಹೊಂದಿಕೊಂಡಂತೆ ಕೆಲವು ಗ್ರಾಮಗಳಲ್ಲಿ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ವರದಿಗಳಿವೆ. ಈ ಕುರಿತಂತೆ ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಗಣಿಗಾರಿಕೆ ನಿಷೇಧಿಸುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ.
ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸುವ ಬಗ್ಗೆ ರೈತರು, ಜನಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಸಾಕಷ್ಟು ದೂರುಗಳನ್ನು ಮಾಧ್ಯಮಗಳ ಮೂಲಕ ಹೇಳಿರುವುದು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲು ಜಿಲ್ಲಾಡಳಿತ ನಿರ್ಧರಿಸಿದೆ.












Click it and Unblock the Notifications