ಎಲ್ಲ ದೇಗುಲಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಲು ಮುಜರಾಯಿ ಸಚಿವರ ಸೂಚನೆ
ಮಂಡ್ಯ, ಸೆಪ್ಟೆಂಬರ್ 12: ಮಂಡ್ಯದ ಗುತ್ತಲಿನ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ನಿನ್ನೆ ನಡೆದಿದ್ದ ಹಿನ್ನೆಲೆಯಲ್ಲಿ ಇಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನವನ್ನು ವೀಕ್ಷಣೆ ಮಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಪರಶುರಾಮ್ ಅವರ ಬಳಿ ಮಾಹಿತಿ ಕಲೆ ಹಾಕಿದರು. ಕೊಲೆ ಮಾಡಿದವರನ್ನು ಶೀಘ್ರ ಪತ್ತೆ ಹಚ್ಚುವಂತೆ ಸೂಚನೆ ನೀಡಿದರು.
ನಂತರ ಮಾತನಾಡಿದ ಅವರು, "ನಿನ್ನೆ ಮಂಡ್ಯದ ದೇವಸ್ಥಾನದಲ್ಲಿ ನಡೆದ ಈ ಬರ್ಬರ ಹತ್ಯೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮುಜರಾಯಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆಯ ಆಯುಕ್ತರಿಗೆ ತಿಳಿಸಿದ್ದೇನೆ. ಇನ್ನು ಮುಂದೆ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪ್ರತಿ ತಿಂಗಳು ಹುಂಡಿ ತೆಗೆಯಬೇಕು" ಎಂದು ಆದೇಶಿಸಿದರು.

ಕೊಲೆಯಾದ ಮೂವರ ಕುಟುಂಬಕ್ಕೆ ಸಾಂತ್ವನ ಹೇಳಿ, ತಲಾ ಐದು ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದರು. ಸಚಿವ ನಾರಾಯಣಗೌಡ ಹಾಗೂ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ ಅವರೂ ಸಚಿವರ ಜೊತೆಗಿದ್ದರು.












Click it and Unblock the Notifications