ಮಂಡ್ಯದಲ್ಲಿ ಲಾಕ್ಡೌನ್ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ
ಮಂಡ್ಯ, ಏಪ್ರಿಲ್ 28: ಸರ್ಕಾರ ಘೋಷಣೆ ಮಾಡಿರುವ ಲಾಕ್ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಜಿಲ್ಲೆಯಾದ್ಯಂತ ಪಾಲಿಸುವಂತೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಜಿಲ್ಲೆಗೆ ಹೊರಭಾಗದಿಂದ ಬಂದವರಿಗೆ ಕೋವಿಡ್-19 ಲಕ್ಷಣವಿದ್ದಲ್ಲಿ, ತಕ್ಷಣವೇ ಪರೀಕ್ಷೆ ಮಾಡಿ ಅವರನ್ನು ಫಲಿತಾಂಶ ಬರುವವರೆಗೆ ಮನೆ ಸಂಪರ್ಕ ತಡೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಇದು ಆರೋಗ್ಯ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದರು.

ಗೃಹ ರಕ್ಷಕದಳದ ಸಿಬ್ಬಂದಿ ನಿಯೋಜನೆ
ಕೋವಿಡ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಶಿಫ್ಟ್ ಪ್ರಕಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಿ, ಅವರಿಂದ ಪ್ರತಿನಿತ್ಯ ವರದಿ ಪಡೆಯಬೇಕು. ಸರ್ಕಾರದಿಂದ ಆದೇಶವಾಗಿರುವ ಬಿಗಿ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕೆಲವೊಂದಕ್ಕೆ ಸರ್ಕಾರ ಪರವಾನಿಗೆ ನೀಡಿದ್ದು, ಅಂತಹ ಕಾರ್ಯಗಳಿಗೆ ತೊಂದರೆಯಾಗದಂತೆಯೂ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹ ರಕ್ಷಕದಳದ 120 ಸಿಬ್ಬಂದಿಗಳನ್ನು ನೀಡಿದ್ದು, ಅವರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇವರನ್ನು ಬಳಸಿಕೊಂಡು ಕಠಿಣ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಮಂಡ್ಯದಲ್ಲಿ ಮೂರು ಕಡೆಗಳಲ್ಲಿ ಮಾರುಕಟ್ಟೆ
ಪ್ರತಿನಿತ್ಯ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಜನಜಂಗುಳಿಯಾಗುವ ಸಾಧ್ಯತೆ ಇರುತ್ತದೆ. ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿ, ಎಲ್ಲಿಯೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಒಂದೇ ಕಡೆ ಮಾರುಕಟ್ಟೆ ಇದ್ದರೆ ಜನರು ಅನಿವಾರ್ಯವಾಗಿ ಸೇರಬೇಕಾಗುತ್ತದೆ. ಹಾಗಾಗಿ ಮಂಡ್ಯದ ಮೂರು ಕಡೆಗಳಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು. ಹೊಳಲು ಸರ್ಕಲ್ ಬಳಿಯಿರುವ ಸಿಹಿ ನೀರಿನ ಕೊಳದ ಮುಂಭಾಗ ಮತ್ತು ಹಿಂಭಾಗದಲ್ಲಿ ಹಾಗೂ ಕಾಳಿಕಾಂಬ ದೇವಸ್ಥಾನದ ಮುಂಭಾಗದಲ್ಲಿ ಮಾರುಕಟ್ಟೆ ನಿರ್ಮಾಣ ಮಾಡುವಂತೆ ಮತ್ತು ಜಿಲ್ಲೆಯಲ್ಲಿ ಒಂದು ಆಸ್ಪತ್ರೆಯನ್ನು ಸಂಪೂರ್ಣ ಕೊರೊನಾಗೆ ಮೀಸಲಿರಿಸಿ. ಯಾವುದೇ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಇದ್ದಲ್ಲಿ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಿ ಎಂದು ಸೂಚಿಸಿದರು.

ಆಂಬ್ಯುಲೆನ್ಸ್ ಬಾಡಿಗೆ ಪಡೆಯಿರಿ
ಮಂಡ್ಯ ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲೂ ತಲಾ ಎರಡು ಆಂಬ್ಯುಲೆನ್ಸ್ ಇದೆ. ಆದಾಗ್ಯೂ ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಆಂಬ್ಯುಲೆನ್ಸ್ ಅಗತ್ಯವಿದಲ್ಲಿ, ಖಾಸಗಿಯಿಂದ ಆಂಬ್ಯುಲೆನ್ಸ್ ಬಾಡಿಗೆ ಪಡೆದುಕೊಳ್ಳಿ. ಜಿಲ್ಲೆಯಲ್ಲಿ ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಕೊರತೆ ಇಲ್ಲ. ಅಗತ್ಯವಿದ್ದಲ್ಲಿ ತಕ್ಷಣವೇ ತರಿಸಿಕೊಳ್ಳಲು ಮುಂಚಿತವಾಗಿ ಅಗತ್ಯ ಕ್ರಮ ತೆಗೆದುಕೊಂಡಿರಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಟೆಸ್ಟಿಂಗ್ ಮಾಡಿಸಬೇಕು. ಟೆಸ್ಟಿಂಗ್ ಫಲಿತಾಂಶ ಬರುವವರೆಗೆ ಅವರೆಲ್ಲರನ್ನು ಹೋಮ್ ಕ್ವಾರಂಟೈನ್ನಲ್ಲಿ ಇರುವಂತೆ ನೋಡಿಕೊಳ್ಳಬೇಕು. ಅಂತವರು ಎಲ್ಲಿಯೂ ಓಡಾಡದಂತೆ ನೋಡಿಕೊಳ್ಳುವ ಜವಾಬ್ದಾರಿ ಆರೋಗ್ಯ ಇಲಾಖೆಯದಾಗಿದೆ ಎಂದು ಹೇಳಿದರು.

ಎರಡು ಗಂಟೆಯೊಳಗೆ ಶವ ಹಸ್ತಾಂತರ
ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ನಿಂದ ಯಾರೂ ಕೂಡ ಮೃತರಾಗಬಾರದು. ಅಷ್ಟು ಜಾಗರೂಕತೆಯಿಂದ ಉಪಚಾರ ಮಾಡಬೇಕು. ಆದಾಗ್ಯೂ ಯಾರಾದರೂ ಕೋವಿಡ್-19 ನಿಂದ ಮೃತಪಟ್ಟಲ್ಲಿ ಅವರ ದೇಹವನ್ನು ಎರಡು ಗಂಟೆಯೊಳಗೆ ಕುಟುಂಬದವರಿಗೆ ಹಸ್ತಾಂತರವಾಗಬೇಕು. ಅಲ್ಲದೆ ಕೊರೊನಾ ಮಾರ್ಗಸೂಚಿ ಅನ್ವಯ ಮೃತರ ಅಂತ್ಯಸಂಸ್ಕಾರ ಗೌರವಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಜನರಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕು. ಆಟೋದಲ್ಲಿ ತೆರಳಿ ಪಟ್ಟಣ ಪ್ರದೇಶ ಹಾಗೂ ಗ್ರಾಮಗಳಿಗೆ ತೆರಳಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಬೇಕು. ಜೊತೆಗೆ ಕೊರೊನಾ ಲಕ್ಷಣ ಕಂಡುಬಂದಲ್ಲಿ ತಕ್ಷಣವೇ ತಪಾಸಣೆಗೆ ಒಳಪಡುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.












Click it and Unblock the Notifications