ಕೆಆರ್ಎಸ್ ಸುತ್ತ ಟ್ರಯಲ್ ಬ್ಲಾಸ್ಟ್: ರೈತ ಸಂಘದ ನಿಲುವಿಗೆ ಬದ್ದ ಎಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ
ಕೃಷ್ಣರಾಜಸಾಗರ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವ ವಿಚಾರವಾಗಿ ರೈತ ಸಂಘದ ನಿಲುವಿಗೆ ತಾನು ಬದ್ಧನಾಗಿದ್ದೇನೆ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸ್ಪಷ್ಟಪಡಿಸಿದರು.
ಮಂಡ್ಯದಲ್ಲಿ ನಡೆದ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೋರ್ ಬ್ಲಾಸ್ಟ್ ಮಾಡಿ ಕಟ್ಟೆಗೆ ಅಪಾಯ ತರುವಂತಹ ಕೃತ್ಯಗಳು ನಡೆಯಬಾರದು. ಆದರೆ, ಆ ವ್ಯಾಪ್ತಿಯ 8 ಗ್ರಾಮ ಪಂಚಾಯಿತಿಗಳ ಜನರು ಗಣಿಗಾರಿಕೆ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಅವರಿಗೆ ವಂಚನೆಯಾಗದಂತೆ ಕೈಕುಳಿ ಗಣಿಗಾರಿಕೆಗೆ ಅವಕಾಶ ಕಲ್ಪಿಸಲು ಟ್ರಯಲ್ ಬ್ಲಾಸ್ಟ್ ಅಗತ್ಯತೆ ಇದೆ ಎಂದು ಪ್ರತಿಪಾದಿಸಿದರು.

ಈ ಜನರನ್ನು ಮುಂದಿಟ್ಟುಕೊಂಡು ಗಣಿ ಮಾಲೀಕರು ದೊಡ್ಡ ಪ್ರಮಾಣದ ಗಣಿಗಾರಿಕೆಗೆ ಕುತಂತ್ರ ನಡೆಸಿದ್ದರೆ ಅಥವಾ ಎಂಟು ಪಂಚಾಯಿತಿಯ ಜನರು ಸ್ಫೋಟ ಮಾಡಿಯೇ ಗಣಿಗಾರಿಕೆ ನಡೆಸುತ್ತೇವೆಂದರೆ ಅದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಅವರ ಪರವಾಗಿಯೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನನ್ನು ಭೇಟಿಯಾಗಿರುವುದು ಸತ್ಯ
ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವವರು ಮತ ಕೇಳುವುದಕ್ಕೆ ನನ್ನನ್ನು ಭೇಟಿಯಾಗಿರುವುದು ಸತ್ಯ. ಆದರೆ, ನನಗೆ ಬೆದರಿಕೆಯನ್ನಾಗಲೀ, ಹಣದ ಆಮಿಷವನ್ನಾಗಲಿ ಒಡ್ಡಿಲ್ಲ. ಚುನಾವಣೆಗೆ ಸ್ಪರ್ಧಿಸಿರುವವರು ಓಟು ಕೇಳುವುದು ಸಹಜ. ಅದನ್ನು ತಪ್ಪು ಎನ್ನಲಾಗುವುದಿಲ್ಲ ಎಂದು ದರ್ಶನ್ ಹೇಳಿದರು.
ನಾನೂ ಸೇರಿದಂತೆ ಇತರೆ ಕಾಂಗ್ರೆಸ್ ಶಾಸಕರನ್ನೂ ಅಭ್ಯರ್ಥಿಗಳು ಭೇಟಿಯಾಗಿದ್ದಾರೆ. ಅವರೊಂದಿಗೆ ಏನೇನು ಚರ್ಚೆ ಮಾಡಿದ್ದಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಅದನ್ನು ಆಧರಿಸಿ ಶಾಸಕ ಪಿ.ರವಿಕುಮಾರ್ ದೂರು ಕೊಟ್ಟಿರಬಹುದು ಎಂದು ಸಮರ್ಥಿಸಿಕೊಂಡರು.
ನನ್ನ ತಂದೆಯ ಕಾಲದಿಂದಲೂ ಕಾಂಗ್ರೆಸ್ ರೈತಸಂಘವನ್ನು ಬೆಂಬಲಿಸುತ್ತಾ ಬಂದಿದೆ. 2018 ಮತ್ತು 2023ರ ಚುನಾವಣೆಯಲ್ಲೂ ಕಾಂಗ್ರೆಸ್ ನನ್ನ ಬೆನ್ನಿಗೆ ನಿಂತಿದೆ. ಆ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ನನ್ನ ಮತ ಕಾಂಗ್ರೆಸ್ಗೆ ನಿಶ್ಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುಮಲತಾ ಸ್ಪರ್ಧೆ ಹೇಳಿದ್ದೇನು?
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಸಂಸದೆ ಸುಮಲತಾ ಅವರ ಬೆಂಬಲಕ್ಕೆ ರೈತಸಂಘ ನಿಂತಿತ್ತು. ಈ ಬಾರಿ ಯಾರನ್ನು ಬೆಂಬಲಿಸಬೇಕೆಂಬ ವಿಚಾರವಾಗಿ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ರೈತ ಪ್ರತಿನಿಧಿಗಳೊಂದಿಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.
ಇದು ನನ್ನೊಬ್ಬನ ನಿರ್ಧಾರವಲ್ಲ. ಪಕ್ಷದ ನಾಯಕರು ಮತ್ತು ರೈತಸಂಘದ ಮುಖಂಡರೆಲ್ಲರ ಜೊತೆ ಮಾತುಕತೆ ನಡೆಸಿ ಒಮ್ಮತದ ನಿರ್ಧಾರಕ್ಕೆ ಬರಬೇಕಿದೆ. ಅವರೆಲ್ಲರ ನಿರ್ಧಾರದಂತೆ ನಾನೂ ನಡೆಯುವುದಾಗಿ ತಿಳಿಸಿದರು.
ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬಗ್ಗೆ ವಿರೋಧ ಸೂಚಿಸುವುದು ಯಾರಿಗೂ ತರವಲ್ಲ. ರೈತರೆಂದರೆ ಕೇವಲ ಬಡವರಲ್ಲ, ವಿಲಾಸಿ ಕಾರು ಅಥವಾ ಟ್ರಾಕ್ಟರ್ ಖರೀದಿಸಲು ರೈತರು ಶಕ್ತರಾಗಬಾರದೆ, ಅವರನ್ನು ಖಲಿಸ್ತಾನಿಗೆ ಹೋಲಿಸುವುದು ಸರಿಯಾದುದಲ್ಲ. ರೈತ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದರು.
ಅನುದಾನ ವಾಪಸ್ಸು
ಮೇಲುಕೋಟೆ ದೇವಾಲಯದ ಅಭಿವೃದ್ಧಿ ಹಾಗೂ ರಸ್ತೆಗಳ ದುರಸ್ಥಿಗಾಗಿ ಈ ಹಿಂದೆ ಬಿಡುಗಡೆಯಾಗಿದ್ದ 5 ಕೋಟಿಗೂ ಹೆಚ್ಚು ಅನುದಾನ ನಿಗದಿತ ವೇಳೆಯಲ್ಲಿ ಬಳಕೆಯಾಗದ ಕಾರಣ ವಾಪಸ್ಸು ಪಡೆಯಲಾಗಿತ್ತು. ಈಗ ಆ ಅನುದಾನ ಹಿಂಪಡೆಯಲಾಗಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ವಿಶ್ವೇಶ್ವರಯ್ಯ ನಾಲೆ ಸೇರಿದಂತೆ ಕನ್ನಂಬಾಡಿ ವ್ಯಾಪ್ತಿಯ ನಾಲಾ ಜಾಲಗಳ ದುರಸ್ಥಿ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಕಳೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲೇ ಚರ್ಚೆ ನಡೆಸಿ ನಿರ್ಣಯ ಕೈಗೊಂಡು ರೈತರಿಗೆ ಮಾಹಿತಿ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.












Click it and Unblock the Notifications