Modi Mandya Visit: ಜನಶಕ್ತಿ ಸಂಘಟನೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದೇಕೆ?, ವಿವರ ಇಲ್ಲಿದೆ
ಮಂಡ್ಯ, ಮಾರ್ಚ್, 12: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲು ಬಂದಿದ್ದ ಜನಶಕ್ತಿ ಸಂಘಟನೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೋದಿ ಅವರು ರೋಡ್ ಶೋ ತೆರಳುವ ಮಾರ್ಗ, ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜನಶಕ್ತಿ ಸದಸ್ಯರು ಸೇರಿದ್ದರು. ಆಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಮಹಿಳೆಯರ ಮೇಲೆ ದೌರ್ಜನ್ಯ ನಿಲ್ಲಬೇಕು
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು. ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ರದ್ದುಪಡಿಸಬೇಕು. ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಸದಸ್ಯರು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಳ್ಳಿ, ಮನವಿ ಪತ್ರ ಹರಿದುಹಾಕಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಬಲವಂತವಾಗಿ ಪ್ರತಿಭಟನಾಕಾರರನ್ನು ವಾಹನದೊಳಗೆ ತಳ್ಳಿಕೊಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದರು.

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಧಾರವಾಡಕ್ಕೆ ಆಗಮಿಸಲಿದ್ದು, ಇಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಜ್ಯದ ಮೊದಲ ಐಐಟಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಭಾನುವಾರ ಮಧ್ಯಾಹ್ನ (ಮಾರ್ಚ್ 12)2:55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿಯವರು ಆಗಮಿಸಲಿದ್ದಾರೆ. ನಂತರ 3 ಗಂಟೆಗೆ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಐಐಟಿಯತ್ತ ಪ್ರಯಾಣ ಮಾಡಲಿದ್ದಾರೆ. 3:20ಕ್ಕೆ ಐಐಟಿಯ ತಾತ್ಕಾಲಿಕ ಹೆಲಿಪ್ಯಾಡ್ಗೆ ಆಗಮಿಸುವ ಅವರು, 3:25ಕ್ಕೆ ರಸ್ತೆ ಮೂಲಕ ಐಐಟಿಗೆ ಆಗಮಿಸಲಿದ್ದಾರೆ.
ಐಐಟಿ ಸೌಧಕ್ಕೆ ಪ್ರವೇಶ ಮಾಡಲಿರುವ ಮೋದಿ
ಇನ್ನು 3:30ಕ್ಕೆ ಐಐಟಿ ಸೌಧಕ್ಕೆ ಪ್ರವೇಶ ಮಾಡಿ, 3:30 ರಿಂದ 3:45ರವರೆಗೆ ಐಐಟಿ ಕ್ಯಾಂಪಸ್ ವೀಕ್ಷಣೆ ಮಾಡಲಿದ್ದಾರೆ. ಇನ್ನು 3:50ಕ್ಕೆ ಐಐಟಿ ಸೌಧಕ್ಕೆ ಭೇಟಿ ನೀಡಲಿದ್ದು, ಸಂಜೆ 4 ರಿಂದ 5 ಗಂಟೆಯವರೆಗೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಂಜೆ 5 ಗಂಟೆ 5 ನಿಮಿಷಕ್ಕೆ ನಿರ್ಗಮಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಐಐಟಿ ಉದ್ಘಾಟನೆಗಾಗಿ ಧಾರವಾಡಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಜಯದೇವ ಹೃದ್ರೋಗ ಸಂಸ್ಥೆಯು ಇನ್ನು ಉತ್ತರ ಕರ್ನಾಟಕದ ಜನತೆಗೆ ಹುಬ್ಬಳ್ಳಿಯಲ್ಲಿ ಲಭ್ಯವಾಗಲಿದೆ. ರಾಜ್ಯ ಸರ್ಕಾರದಿಂದ 11 ಹೆಕ್ಟೇರ್ ಪ್ರದೇಶದಲ್ಲಿ ಈ ಸಂಸ್ಥೆ ಸ್ಥಾಪನೆಗೆ 250 ಕೋಟಿ ರೂಪಾಯಿ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮಗಳ ವಿವರ ಇಲ್ಲಿದೆ
ಜಲಜೀವನ ಮಿಷನ್ ಯೋಜನೆಯಡಿ ಸವದತ್ತಿಯ ರೇಣುಕಸಾಗರ ಜಲಾಶಯದಿಂದ 1042.34 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಎಲ್ಲ 144 ಗ್ರಾಮ ಪಂಚಾಯ್ತಿಗಳ 388 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲಜೀವನ ಮಿಷನ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರದ ವಿವೇಕ ಯೋಜನೆಯಡಿ ನಮ್ಮ ಜಿಲ್ಲೆಯಲ್ಲಿ 295 ಶಾಲಾ ಕೊಠಡಿಗಳನ್ನು ನಿರ್ಮಿಸಲು 42.15 ಕೋಟಿ ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.












Click it and Unblock the Notifications