ಮಂಡ್ಯ: ಅಕ್ರಮ ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಸಮರ...
ಮಂಡ್ಯ, ಮಾರ್ಚ್ 1: ರಾಜ್ಯದಲ್ಲಿ ಕಲ್ಲು ಗಣಿಗಾರಿಕೆಯಿಂದ ಅನಾಹುತಗಳು ಮೇಲಿಂದ ಮೇಲೆ ನಡೆಯುತ್ತಲೇ ಇದ್ದು, ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರದಲ್ಲಿ ನಡೆದ ಸ್ಪೋಟದ ಭೀಕರತೆ ನಮ್ಮ ಕಣ್ಣ ಮುಂದೆ ಹಾಗೆಯೇ ಉಳಿದಿದ್ದು, ಇಂತಹ ದುರ್ಘಟನೆಗಳು ಮಂಡ್ಯ ಜಿಲ್ಲೆಯಲ್ಲಿ ನಡೆಯಬಾರದು ಎಂಬ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರು ನಿಗಾವಹಿಸಿರುವುದು ಎದ್ದು ಕಾಣುತ್ತಿದೆ.
ಮಂಡ್ಯ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಇದರ ತಡೆಗೆ ಬಹಳಷ್ಟು ಹೋರಾಟಗಳು ನಡೆದಿದ್ದರೂ, ಪ್ರಯೋಜನವಾಗಿಲ್ಲ. ಕೆಆರ್ಎಸ್ ಜಲಾಶಯದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಅಣೆಕಟ್ಟೆಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ, ಜಲಾಶಯದ ಸುತ್ತಮುತ್ತ ಗಣಿಗಾರಿಕೆ ನಡೆಸದಂತೆ ಹಲವು ಸಂಘಟನೆಗಳು ಹೋರಾಟ ಮಾಡಿದ ಫಲವಾಗಿ ನಿರ್ಬಂಧ ಹೇರಲಾಗಿದೆ. ಆದರೂ ಸಂಪೂರ್ಣವಾಗಿ ನಿಂತಿದೆ ಎನ್ನುವುದು ಕಷ್ಟವೇ.
KRS ಡ್ಯಾಂ ಮೇಲೆ ಪೊಲೀಸ್ ವಾಹನ ಚಲಾಯಿಸಿದ ಯುವಕ: ಸಾಥ್ ನೀಡಿದ ಪೊಲೀಸ್ ಪೇದೆ
ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಒತ್ತಡ
ಕಲ್ಲು ಗಣಿಗಾರಿಕೆಯಿಂದ ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳು ಎದುರಾಗಿದೆ. ಆದರೆ ಹೆಚ್ಚಿನ ಗಣಿಗಾರಿಕೆಗಳನ್ನು ಪ್ರಭಾವಿಗಳೇ ನಡೆಸುತ್ತಿರುವುದರಿಂದ ಅವುಗಳಿಗೆ ಕಡಿವಾಣ ಹಾಕುವುದು ಅಷ್ಟು ಸುಲಭವಲ್ಲ. ಆದರೆ ಇದೀಗ ಸುಮಲತಾ ಅವರು ಈ ವಿಚಾರದಲ್ಲಿ ಮುಂದಡಿಯಿಟ್ಟಿದ್ದು, ಈಗಾಗಲೇ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ್ ನಿರಾಣಿ ಅವರನ್ನು ಜಿಲ್ಲೆಗೆ ಕರೆಯಿಸಿಕೊಂಡು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಸಮೀಪ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಕ್ಕೆ ಕರೆದೊಯ್ದು, ಪ್ರಸ್ತುತ ಪರಿಸ್ಥಿತಿಯನ್ನು ತೋರಿಸಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಒತ್ತಡ ಹೇರಿದ್ದಾರೆ.
ಗಣಿಗಾರಿಕೆಯ ನಿಷೇಧಕ್ಕೂ ಚಿಂತನೆ
ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಮುರುಗೇಶ್ ನಿರಾಣಿ ಅವರು ಅಕ್ರಮ ಗಣಿಗಾರಿಕೆ ಮಾಡಿದವರಿಗೆ ದಂಡ ವಿಧಿಸುವುದು ಹಾಗೂ ರಾಜಧನ ಪಾವತಿ ಮಾಡದವರ ವಿರುದ್ಧ ಕ್ರಮ ಕೈಗೊಂಡು ಅವರಿಂದ ರಾಜಧನ ವಸೂಲಿ ಮಾಡುವುದಾಗಿ ಹೇಳಿರುವುದಲ್ಲದೆ ಅಗತ್ಯವಿದ್ದರೆ, ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ನಿಷೇಧಕ್ಕೂ ಚಿಂತನೆ ನಡೆಸುತ್ತಿದ್ದು, ಈ ಸಂಬಂಧ ಅಧಿಕಾರಿಗಳು ನೀಡುವ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಅಕ್ರಮ ಸ್ಫೋಟಕಗಳ ಪತ್ತೆಗೆ ಜಂಟಿ ಕಾರ್ಯಾಚರಣೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ!
ಪ್ರಭಾವಿ ನಾಯಕರ ಕಣ್ಣು ಕೆಂಪಾಗಿಸಿದ ಸಂಸದೆ ನಡೆ
ಈ ನಡುವೆ ಅಕ್ರಮ ಗಣಿಗಾರಿಕೆಯ ವಿರುದ್ಧ ಸಂಸದೆ ಸುಮಲತಾ ಅವರು ಸಮರ ಸಾರಿರುವುದು ಗಣಿಗಾರಿಕೆ ನಡೆಸುತ್ತಿರುವ ಪ್ರಭಾವಿ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿದೆ. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಸಂಸದೆ ಸುಮಲತಾ ಅವರು, ಜಿಲ್ಲೆಯ ಜನರ ಹಿತದೃಷ್ಟಿಯಿಂದ ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ನಿಲ್ಲಿಸುವ ಶಪಥವನ್ನು ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅವರು ಏನೇನು ಹೇಳಿದ್ದಾರೆ ಎನ್ನುವುದನ್ನು ನೋಡುವುದಾದರೆ ಅವರ ಮಾತಿನಲ್ಲಿಯೇ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸುವುದೇ ಅವರ ಮೂಲ ಉದ್ದೇಶ ಎಂಬುದು ಗೊತ್ತಾಗಿ ಬಿಡುತ್ತದೆ.
ಕೆ.ಆರ್.ಎಸ್ ಡ್ಯಾಂಗೆ ತೊಡಕಾಗುವ ಭಯ
ಕೃಷ್ಣರಾಜಸಾಗರ ಅಣೆಕಟ್ಟು ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಸಕ್ರಮ ಗಣಿಗಾರಿಕೆಗಳು ವೈಜ್ಞಾನಿಕವಾಗಿ ಸರಿಯಾದ ರೀತಿಯಲ್ಲಿ ಡೈನಾಮೆಟ್ ಬಳಸದಿರುವ ಕಾರಣದಿಂದ ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಅಣೆಕಟ್ಟೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ಗಣಿಗಾರಿಕೆಯಿಂದ ಇಲ್ಲಿವರೆಗೆ ಎಷ್ಟು ರಾಜಧನ ಮತ್ತು ದಂಡ ಸರ್ಕಾರದ ಬೊಕ್ಕಸಕ್ಕೆ ಸಂಗ್ರಹವಾಗಿದೆ ಎಂಬುದನ್ನು ಪರಿಶೀಲಿಸಿ ಕೂಡಲೇ ಸಂಬಂಧಪಟ್ಟವರು ಗಣಿಗಾರಿಕೆಗಳಿಂದ ದಂಡ ವಸೂಲಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ತುಂಬಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸಕ್ರಮ ಗಣಿಗಾರಿಕೆ ನಡೆಯುತ್ತಿರುವ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಗಣಿಗಾರಿಕೆ ಹಾಗೂ ಗಣಿಗಾರಿಕೆಗೆ ಸಂಬಂಧಿಸಿದ ವಾಹನಗಳ ಧೂಳಿನಿಂದ ಅನಾರೋಗ್ಯಕ್ಕೆ ಒಳಗಾಗಿದ್ದು, ಅಂತಹ ಗ್ರಾಮಗಳಲ್ಲಿ ವಾಸಿಸುತ್ತಿರುವ ಮಕ್ಕಳಿಂದ ವಯೋವೃದ್ಧರವರೆಗೆ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕು.
ಅಕ್ರಮ ಗಣಿಗಾರಿಕೆ ಮುಕ್ತ ಜಿಲ್ಲೆಯಾಗುತ್ತಾ?
ಇನ್ನು ಈಗಾಗಲೇ ಅಕ್ರಮ ಮತ್ತು ಸಕ್ರಮ ಗಣಿಗಾರಿಕೆ ನಡೆಯುತ್ತಿರುವ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಜೀವಿಸುತ್ತಿರುವ ವನ್ಯಜೀವಿಗಳ ರಕ್ಷಣೆ ಮಾಡುವುದು ಜವಾಬ್ದಾರಿಯಾಗಿದ್ದು, ಡೈನಾಮೆಟ್ ಸಿಡಿಸಿ ಗಣಿಗಾರಿಕೆ ನಡೆಸುವುದರಿಂದ ಮುಂದಿನ ದಿನಗಳಲ್ಲಿ ಈ ಅರಣ್ಯ ಪ್ರದೇಶದಲ್ಲಿ ವಾಸಿಸುವ ವನ್ಯಜೀವಿಗಳು ನಶಿಸಿ ಹೋಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸುಮಲತಾ ಅವರ ಆಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಅಕ್ರಮ ಗಣಿಗಾರಿಕೆ ಮುಕ್ತ ಜಿಲ್ಲೆಯಾಗುತ್ತಾ ಆ ನಿಟ್ಟಿನಲ್ಲಿ ಸಂಸದೆ ಸುಮಲತಾ ಅವರ ಪಾತ್ರಗಳು ಹೇಗಿರಲಿವೆ ಎಂಬುದನ್ನು ಕಾದು ನೋಡಬೇಕಾಗಿದೆ.