Sumalatha; ಮಂಡ್ಯ ರಾಜಕೀಯ ಶುಕ್ರವಾರ ಸಿಗಲಿದೆ ಬ್ರೇಕಿಂಗ್ ನ್ಯೂಸ್!
ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಮಾರ್ಚ್ 10ರ ಶುಕ್ರವಾರ ಸುದ್ದಿಗೋಷ್ಠಿ ಕರೆದಿದ್ದಾರೆ. ಮಂಡ್ಯ ಮತ್ತು ರಾಜ್ಯ ರಾಜಕೀಯದಲ್ಲಿ ಬ್ರೇಕಿಂಗ್ ನ್ಯೂಸ್ ಒಂದು ಬರಲಿದೆ.
ಮಂಡ್ಯ, ಮಾರ್ಚ್ 09; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮಂಡ್ಯದ ರಾಜಕಾರಣ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲಾ ರಾಜಕೀಯದಲ್ಲಿ ಒಂದಷ್ಟು ಬದಲಾವಣೆಗಳು ಆಗುವ ಸಾಧ್ಯತೆ ಕಂಡು ಬರುವ ಸೂಚನೆ ಸಿಕ್ಕಿದೆ. ಸದ್ಯ ಎಲ್ಲರ ದೃಷ್ಠಿ ಸಂಸದೆ ಸುಮಲತಾ ಮುಂದಿನ ನಡೆಯತ್ತ ನೆಟ್ಟಿದೆ. ಇಂತಹ ಸಂದರ್ಭದಲ್ಲಿಯೇ ಪತ್ರಿಕಾಗೋಷ್ಠಿ ಕರೆಯಲಾಗಿದೆ.
ಮಂಡ್ಯದ ನಿವಾಸದಲ್ಲಿ ಸಂಸದೆ ಸುಮಲತಾ ಶುಕ್ರವಾರ ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ. ಸುಮಲತಾ ರಾಜ್ಯ ರಾಜಕೀಯಕ್ಕೆ ಬರುತ್ತಾರೆ, ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಇದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 12ಕ್ಕೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಈ ಪತ್ರಿಕಾಗೋಷ್ಠಿ ಕುತೂಹಲಕ್ಕೆ ಕಾರಣವಾಗಿದೆ.

ಸುಮಲತಾ ಕಳೆದ ವಾರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್. ಎಂ. ಕೃಷ್ಣ ಭೇಟಿಯಾಗಿದ್ದರು. ಬಳಿಕ ಬೆಂಗಳೂರಿನ ಜೆ. ಪಿ. ನಗರದ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ್ದರು. ಆ ಸಭೆಯಲ್ಲಿಯೇ ಬಿಜೆಪಿ ಸೇರುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಶುಕ್ರವಾರ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಅವರು ಬಿಜೆಪಿ ಸೇರುವ ಕುರಿತು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.
ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಭಾನುವಾರ ಮಂಡ್ಯಕ್ಕೆ ಭೇಟಿ ನೀಡಿದ್ದರು. ಆಗ ಸುಮಲತಾ ಅವರನ್ನು ಭೇಟಿ ಮಾಡಿದ್ದರು. ಬಳಿಕ ಮಾತನಾಡಿದ್ದ ಪ್ರಹ್ಲಾದ್ ಜೋಶಿ, "ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಪರವೇ ಇದ್ದಾರೆ. ಲೋಕಸಭೆಯಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿದ್ದರೂ, ಸುಮಲತಾ ಅವರು ಲೋಕಸಭೆಯಲ್ಲಿ ಬಿಜೆಪಿಯ ಹಲವು ನಿರ್ಣಯಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಹೀಗಾಗಿ ಸುಮಲತಾ ಅವರು ಬಿಜೆಪಿ ಪರವೇ ಇದ್ದಾರೆ" ಎಂದು ಮಾತ್ರ ಹೇಳಿದ್ದರು.

ಹಲವು ದಿನಗಳಿಂದ ಸುದ್ದಿ; ಮಂಡ್ಯ ಸಂಸದೆ ಸುಮಲತಾ ರಾಜ್ಯ ರಾಜಕೀಯಕ್ಕೆ ಬರುತ್ತಾರಾ? ಎಂಬ ಚರ್ಚೆ ಹಲವು ದಿನಗಳಿಂದ ನಡೆಯುತ್ತಿದೆ. ಅವರ ಬೆಂಬಲಿಗರು ಬಿಜೆಪಿಯತ್ತ ಮುಖ ಮಾಡುತ್ತಿರುವುದರಿಂದಾಗಿ ಅಂತೆ-ಕಂತೆಗಳ ಸುದ್ದಿಗಳಂತೂ ಹಬ್ಬಿವೆ. ಆದರೆ ಇದುವರೆಗೆ ಸುಮಲತಾ ಅಂಬರೀಶ್ ಮಾತ್ರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ, ಸ್ಪಷ್ಟನೆಯನ್ನೂ ನೀಡುತ್ತಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ ನೀಡಿತ್ತು. ಸಿ. ಪಿ. ಯೋಗೇಶ್ವರ್ ಸೇರಿದಂತೆ ಕೆಲವು ನಾಯಕರು ಸುಮತಾ ಬಿಜೆಪಿಗೆ ಬರುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದರು. ಮಾರ್ಚ್ 12ಕ್ಕೆ ನರೇಂದ್ರ ಮೋದಿ ಆಗಮನಕ್ಕಿಂತಲೂ ಮೊದಲೇ ಸುಮಲತಾ ಬಿಜೆಪಿ ಸೇರುತ್ತಾರಾ? ಎಂಬುದು ಸದ್ಯದ ಪ್ರಶ್ನೆಯಾಗಿದೆ.
2024ರಲ್ಲಿ ಲೋಕಸಭಾ ಚುನಾವಣೆ ಇದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮಣಿಸಿ ಪ್ರಾಬಲ್ಯ ಸಾಧಿಸುವುದು ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಕಷ್ಟವಾಗಲಿದೆ. ಅಲ್ಲದೇ ಮಂಡ್ಯ ಜಿಲ್ಲೆಯಲ್ಲಿ ಪ್ರಬಲ ನಾಯಕರ ಕೊರತೆಯನ್ನು ಬಿಜೆಪಿ ಎದುರಿಸುತ್ತಿದ್ದು, ಸುಮಲತಾ ಪಕ್ಷ ಸೇರುವುದಕ್ಕೆ ಹೈಕಮಾಂಡ್ನಿಂದಲೇ ಒಪ್ಪಿಗೆ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸುಮಲತಾ ಬಿಜೆಪಿ ಸೇರಿ ರಾಜ್ಯ ರಾಜಕೀಯಕ್ಕೆ ಬಾರದಿದ್ದರೂ ಪುತ್ರ ಅಭಿಷೇಕ್ರನ್ನು ರಾಜಕೀಯಕ್ಕೆ ಕರೆತಂದು ಮದ್ದೂರಿನಿಂದ ಕಣಕ್ಕಿಳಿಸಲಾಗುತ್ತದೆ ಎಂಬ ವದಂತಿಗಳು ಜೋರಾಗಿವೆ.
ಜೆಡಿಎಸ್ ಶಾಸಕನ ಹೇಳಿಕೆ; ಗುರುವಾರ ಮೈಸೂರಿನಲ್ಲಿ ಮಾತನಾಡಿದ ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು, "ನಾಳೆಯೇ ಸುಮಲತಾ ಬಿಜೆಪಿ ಸೇರಲಿದ್ದಾರೆ" ಎಂದು ಹೇಳುವ ಮೂಲಕ ಕುತೂಹಲ ಹುಟ್ಟು ಹಾಕಿದ್ದಾರೆ. ನರೇಂದ್ರ ಮೋದಿ ಮಾರ್ಚ್ 12ರಂದು ಮದ್ದೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆ ಮಾಡಲಿದ್ದಾರೆ, ಬಳಿಕ ಮಂಡ್ಯದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೂ ಮೊದಲು ಸುಮಲತಾ ಬಿಜೆಪಿಗೆ ಸೇರಲಿದ್ದಾರೆಯೇ? ಕಾದು ನೋಡಬೇಕಿದೆ.
ಇನ್ನು 2019ರ ಲೋಕಸಭೆ ಚುನಾವಣೆ ನೆನಪು ಮಾಡಿಕೊಂಡರೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದರು. ಅನುಕಂಪದ ಅಲೆ, ಕುಟುಂಬ ರಾಜಕಾರಣದ ಆಕ್ರೋಶ, ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ಸಹಕಾರ, ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ನಿಖಿಲ್ ಕುಮಾರಸ್ವಾಮಿ ಸೋಲಿಸಿದರು. ಸುಮಲತಾರನ್ನು ನಮ್ಮೂರಿನ ಹೆಣ್ಣುಮಗಳಂತೆ ನೋಡಿದ ಜನರು ಬೆಂಬಲ ನೀಡಿದರು. ಇಡೀ ಸರ್ಕಾರವೇ ಅವರ ವಿರುದ್ಧ ಕ್ಷೇತ್ರಕ್ಕೆ ಬಂದು ಕೆಲಸ ಮಾಡಿದರೂ ನಿಖಿಲ್ ಸೋಲು ಕಂಡರು.












Click it and Unblock the Notifications