ಬಸ್ ದುರಂತದ ಅನುದಾನಕ್ಕೆ ಪ್ರಚಾರ ಬೇಡ: ಸುಮಲತಾ
ಮಂಡ್ಯ, ಜೂನ್ 13 : ಕಳೆದ ವರ್ಷ ಮಂಡ್ಯದ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ನಡೆದ ಭೀಕರ ಬಸ್ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಕೇಂದ್ರ ಸರ್ಕಾರ ತಲಾ 2 ಲಕ್ಷ ಘೋಷಣೆ ಮಾಡಿದೆ. ಈ ವಿಷಯವೇ ಸಾಮಾಜಿಕ ಜಾಲತಾಣದಲ್ಲಿ ಈಗ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಇದು ಸುಮಲತಾ ಬೆಂಬಲಿಗರು ಹಾಗೂ ಜೆಡಿಎಸ್ ಬೆಂಬಲಿಗರ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.
ಒಂದೆಡೆ ಕೇಂದ್ರದಿಂದ ಹಣ ಕೊಡಿಸಿದ್ದು ಸುಮಲತಾ ಎಂದು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರೆ, ಮತ್ತೊಂದೆಡೆ ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಕಿಡಿಕಾರಿದ್ದಾರೆ. ಕೇಂದ್ರದಿಂದ ಪರಿಹಾರದ ಹಣ ಕೊಡಿಸಿದ್ದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸುಮಲತಾ ಅಲ್ಲ ಎಂದು ಒಂದರ ಮೇಲೊಂದರಂತೆ ಪೋಸ್ಟ್ ಹಾಕಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, 'ನನಗೆ ಆ ಕ್ರೆಡಿಟ್ ಬೇಡ' ಎಂದು ಸ್ಪಷ್ಟಪಡಿಸಿದ್ದಾರೆ. ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪುವುದು ಮುಖ್ಯ. ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತದೆ. ಆ ರೀತಿ ತಪ್ಪು ಯಾರೂ ಮಾಡಬಾರದು. ನಾನಂತೂ ಆ ತಪ್ಪು ಮಾಡುವುದಿಲ್ಲ ಎಂದರು.

ನಾನು ಆ ಬಸ್ ದುರಂತವನ್ನು ಪ್ರಚಾರಕ್ಕೆ ಬಳಸುವುದಿಲ್ಲ. ಹಿಂದಿನಿಂದಲೂ ನಾನು ಸಾಕಷ್ಟು ಬಾರಿ ಹೇಳಿದ್ದೇನೆ, ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕು. ನಾವು ನಮ್ಮ ಸಾಧನೆಗಳ ಬಗ್ಗೆ ಮಾತಾಡಬಾರದು. ಯಾರೇ ಮಾಡಿರಲಿ ಅದನ್ನು ಹೇಳಿಕೊಳ್ಳಬಾರದು. ಈ ವಿಚಾರದಲ್ಲಿ ಯಾರು ಬೇಕಾದರೂ ಕ್ರೆಡಿಟ್ ತೆಗೆದುಕೊಳ್ಳಲಿ ನನಗೆ ಆ ಬಗ್ಗೆ ಬೇಸರವಿಲ್ಲ ಎಂದು ತಿಳಿಸಿದ್ದಾರೆ.












Click it and Unblock the Notifications