ಲೋಕಸಭಾ ಚುನಾವಣೆ: 'ಒಟ್ಟಾಗಿ ಕೆಲಸ ಮುಂದುವರೆಸೋಣ', ಪ್ರಧಾನಿಗಳ ಮಾತಿಗೆ ಸುಮಲತಾ ಸಮ್ಮತಿ
ಬೆಂಗಳೂರು, ಫೆಬ್ರವರಿ 09: 2024ರ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಪೈಪೋಟಿ ಆರಂಭವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಎರಡು ಬಣಗಳು ಹೋರಾಟ ಆರಂಭಿಸಿವೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿಯಾಗಿದ್ದು, ಸೀಟು ಹಂಚಿಕೆ ಅಂತಿಮವಾಗದಿದ್ದರೂ ಮಂಡ್ಯ ಕ್ಷೇತ್ರದ ರಾಜಕೀಯ ಮಾತ್ರ ರಂಗೇರಿದೆ. ಈ ನಡುವೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ರಧಾನಿಗಳ ಭೇಟಿ ಬಗ್ಗೆ ಖುಷಿ ಹಂಚಿಕೊಂಡಿರುವ ಸುಮಲತಾ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಸಮಯ ನೀಡಿದ್ದಕ್ಕಾಗಿ ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸುಮಲತಾ, "ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು.
ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ.
ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.

ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.
ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.
17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ. ಈ ಬಾರಿಯ ತಮ್ಮ ಭೇಟಿ ಸಂಧರ್ಭದಲ್ಲಿ "ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ" ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ.
ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ" ಎಂದು ಸಂಸದೆ ಸುಮಲತಾ ಬರೆದುಕೊಂಡಿದ್ದಾರೆ.












Click it and Unblock the Notifications