ಕೆಆರ್ಎಸ್ ಸುತ್ತ ಗಣಿಗಾರಿಕೆ; ಕೇಂದ್ರ ಸಚಿವರನ್ನು ಭೇಟಿಯಾದ ಸುಮಲತಾ
ಮಂಡ್ಯ, ಜುಲೈ 20; ಕೆಆರ್ಎಸ್ ಜಲಾಶಯದ ಸುತ್ತ-ಮುತ್ತ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಂಡ್ಯ ಸಂಸದೆ ಸುಮಲತಾ ಗಣಿಗಾರಿಕೆ ವಿಚಾರದ ಕುರಿತು ಕೇಂದ್ರ ಸಚಿವರಿಗೆ ಮನವಿಯೊಂದನ್ನು ಮಾಡಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ಸುಮಲತಾ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿದರು. ಕೆಆರ್ಎಸ್ ಜಲಾಶಯದ ಸುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡಿದರು.
ಅಕ್ರಮ ಕಲ್ಲು ಗಣಿಕಾರಿಕೆಯಿಂದ ಕೆಆರ್ಎಸ್ ಜಲಾಶಯಕ್ಕೆ ಬಂದೊದಗಿರುವ ಅಪಾಯವನ್ನು ಸಚಿವರಿಗೆ ವಿವರಿಸಿದರು. ಈ ವಿಚಾರವಾಗಿ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.

ಕೆಆರ್ಎಸ್ ಜಲಾಶಯದ ವಿಚಾರ ಕರ್ನಾಟಕದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಕಲ್ಲುಗಣಿಯಲ್ಲಿ ಸ್ಫೋಟಕಗಳನ್ನು ನಡೆಸುವುದರಿಂದ ಡ್ಯಾಂಗೆ ಅಪಾಯವಾಗುತ್ತದೆ ಎಂಬ ಕೂಗು ಬಹಳದಿನಗಳಿಂದ ಇದೆ.
ಜಲಾಶಯದ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆಯೂ ಚರ್ಚೆ ನಡೆಸಿದೆ.
ಕೆಆರ್ಎಸ್ ಅಪಾಯದ ಬಗ್ಗೆ ಸುಮಲತಾ ಎತ್ತಿದ್ದ ಪ್ರಶ್ನೆ ರಾಜಕೀಯ ಬಣ್ಣ ಪಡೆದಿತ್ತು. ಜೆಡಿಎಸ್ ನಾಯಕರು ಸುಮಲತಾ ವಿರುದ್ಧ ವಾಕ್ಸಮರ ನಡೆಸಿದ್ದರು. ಬಳಿಕ ಈ ವಿಚಾರ ತಣ್ಣಗಾಗಿದೆ. ಆದರೆ ಸುಮಲತಾ ಗಣಿಗಾರಿಕೆ ವಿಚಾರವನ್ನು ಕೇಂದ್ರದ ತನಕ ತೆಗೆದುಕೊಂಡು ಹೋಗಿದ್ದಾರೆ.
ಗಣಿಗಾರಿಕೆ ಸ್ಥಗಿತ; ಕೆಆರ್ಎಸ್ ಸುತ್ತ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಹೇಳಿದ್ದರು. "ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಮಾಡಲು ಅವಕಾಶವಿದೆ. ತಕ್ಷಣವೇ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ" ಎಂದು ಸಚಿವರು ಹೇಳಿದ್ದಾರೆ.
"ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜನರ ನೆರವನ್ನೂ ಪಡೆಯಬೇಕು, ಅಕ್ರಮವಾಗಿ ಗಣಿಗಾರಿಕೆ ನಡೆದರೆ ಜನಸಾಮಾನ್ಯರಿಗೆ ತಿಳಿಯುತ್ತದೆ. ಸಹಾಯವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ" ಎಂದು ಸಚಿವರು ತಿಳಿಸಿದ್ದರು.
"ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ಆರ್ಟಿಓ, ಕಂದಾಯ, ಪಂಚಾಯತ್ ರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಪೋರ್ಸ್ ರಚನೆಯಾಗಬೇಕು" ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.












Click it and Unblock the Notifications