ಕಮಿಷನ್ ಆರೋಪ; ಜೆಡಿಎಸ್ ಶಾಸಕರಿಗೆ ಆಣೆ ಪ್ರಮಾಣ ಮಾಡಲು ಸುಮಲತಾ ಪಂಥಾಹ್ವಾನ
ಮಂಡ್ಯ, ಅಕ್ಟೋಬರ್ 18: ಕಾಮಗಾರಿಗಳಲ್ಲಿ ಕಮೀಷನ್ ಪಡೆದಿದ್ದಾರೆಂಬ ಜೆಡಿಎಸ್ ಆರೋಪಕ್ಕೆ ತಿರುಗೇಟು ನೀಡಿರುವ ಸಂಸದೆ ಸುಮಲತಾ, ಶಾಸಕರಿಗೆ ಆಣೆ ಪ್ರಮಾಣಕ್ಕೆ ಪಂಥಾಹ್ವಾನ ನೀಡಿದ್ದಾರೆ.
ಮದ್ದೂರು ಪಟ್ಟಣದ ಪ್ರವಾಸಿ ಮಂದಿರಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸಂಸದೆ ಸುಮಲತಾ ಮತ್ತು ಬೆಂಬಲಿಗರು ಕಮಿಷನ್ ಪಡೆದಿದ್ದಾರೆ. ಒಂದು ಪಡೆದಿಲ್ಲ ಎನ್ನುವುದಾದರೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯಲ್ಲಿ ಆಣೆ ಪ್ರಮಾಣ ಮಾಡಲಿ ಎಂದು ಶಾಸಕರಾದ ಸಿ.ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಂಸದೆ, ಆಣೆ ಪ್ರಮಾಣಕ್ಕೆ ನಾನು ಸಿದ್ಧಳಿದ್ದೇನೆ ಎಂದು ಘೋಷಿಸಿದರು.
ನಾನೇನು ಪ್ರಮಾಣ ಮಾಡುವುದಾಗಿ ಕರೆದಿರಲಿಲ್ಲ. ಅವರೇ ಕರೆದಿದ್ದರು. ನಾನು ಯಾವಾಗಲೂ ಸಿದ್ದಳಾಗಿದ್ದೇನೆ. ಅವರೇ ಸೇರಿಸಲಿ, ಶಾಸಕರು ಯಾರ್ಯಾರಿದ್ದಾರೋ ಎಲ್ಲರೂ ಬರಲಿ ಎಂದು ಸವಾಲು ಹಾಕಿದರು.
ಚುನಾವಣೆಗಳಲ್ಲಿ ಸೋತು ಸೋತು ಕೊನೆಗೊಮ್ಮೆ ಗೆದ್ದು ಬಂದಿದ್ದಾರೆ. ಇದೇ ಕೊನೆ ಎಂದು ತೀರ್ಮಾನಕ್ಕೆ ಬಂದಿರುವಾಗ ಯಾರು ಏನು ಮಾಡಲು ಸಾಧ್ಯ. ನಾವು ಮಾತನಾಡಬಾರದು. ನಮ್ಮ ಕೆಲಸಗಳು ಮಾತನಾಡಬೇಕು. ಅದು ಬಿಟ್ಟು ಗಾಳಿಯಲ್ಲಿ ಗುಂಡು ಹಾರಿಸುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ಯಾರು ಏನು ಬೇಕಾದರೂ ಹೇಳಬಹುದು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಅಭಿವೃದ್ಧಿ ಕೆಲಸದ ಪಟ್ಟಿ ಕೊಡುತ್ತೇನೆ
ಭಾವನೆಗಳಲ್ಲಿ ಅಹಂಕಾರ ತುಂಬಿಕೊಂಡಿರುತ್ತೋ ಅಲ್ಲಿ ಇಂತಹ ಮಾತುಗಳು ಬರುತ್ತವೆ. ಅಲ್ಲಿ ವಿವೇಚನೆ ದೂರವಾಗಿರುತ್ತದೆ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದರೆ ಜನರಿಗೆ ಗೊತ್ತಾಗಿದೆ ಎಂದ ಅವರು, ನಾನು ಸಂಸದೆಯಾಗಿ ಅಧಿಕಾರಕ್ಕೆ ಬರುವ ಮುನ್ನ ಅವರು ಶಾಸಕರಾಗಿದ್ದರು. ಅವರದ್ದೇ ಸರಕಾರ ಅಧಿಕಾರದಲ್ಲಿತ್ತು. ಅವರ ತಾಲೂಕಿನಲ್ಲಿ ಏನೇನು ಲೋಪದೋಷಗಳು, ಸಮಸ್ಯೆಗಳು ಇವೆ. ಅದಕ್ಕೆಲ್ಲಾ ಉತ್ತರ ಇಲ್ಲ. ಯಾವ್ಯಾವ ಯೋಜನೆಗಳನ್ನು ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಜಿಲ್ಲೆಯ ಅಭಿವೃದ್ಧಿಯನ್ನು ಹೇಗೆ ಮಾಡಿದ್ದಾರೆ ಎಂಬುದರ ಬಗ್ಗೆ ದಾಖಲೆ ಕೊಡಿ, ಆಡಳಿತ ಪಕ್ಷದಲ್ಲಿದ್ದವರು ನೀವು. ನಾನು ಯಾವ ಪಕ್ಷದಲ್ಲೂ ಇಲ್ಲ. ಪಕ್ಷೇತರ ಸಂಸದೆಯಾಗಿದ್ದೇನೆ. ಆದರೂ ನಾನೇನು ಈ ಜಿಲ್ಲೆಗೆ ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂಬುದರ ಬಗ್ಗೆ ಪಟ್ಟಿ ಕೊಡುತ್ತೇನೆ ಎಂದು ಹೇಳಿದರು.

ಅಕ್ಟೋಬರ್ 15 ರಿಂದ ಎಲ್ಲರಿಗೂ ಪರಿಹಾರ
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು ರೂ. 780 ಕೋಟಿಗೂ ಹೆಚ್ಚು ಹಾನಿಯಾಗಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಕೆ.ಆರ್. ಪೇಟೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳೇ 600 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. 15 ರಿಂದ ಒಂದು ತಿಂಗಳೊಳಗೆ ಎಲ್ಲರಿಗೂ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.

ತಕ್ಷಣವೇ ಪರಿಹಾರ ಕಷ್ಟಸಾಧ್ಯ
ಕಳೆದ 75 ವರ್ಷಗಳಿಂದ ಈ ಪ್ರಮಾಣದಲ್ಲಿ ಮಳೆ ಬಂದಿಲ್ಲ. ಈ ರೀತಿಯ ಮಳೆಯನ್ನು ಯಾರೂ ನೋಡಿಯೂ ಇಲ್ಲ . ಪ್ರತಿಯೊಂದಕ್ಕೂ ತಕ್ಷಣ ಪರಿಹಾರ ಕಷ್ಟಸಾಧ್ಯ. ಎಲ್ಲೆಲ್ಲಿ ಯಾರು ಯಾರಿಗೆ ನಷ್ಟ ಆಗಿದೆ. ಅದಕ್ಕೆ ತಕ್ಕ ಪರಿಹಾರ ಕೊಡಿಸಬೇಕು ಎಂಬುದು ನಮ್ಮ ಒತ್ತಾಯವೂ ಆಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೇಂದ್ರ ಸರಕಾರ ಎನ್ಡಿಆರ್ಎಫ್ ಮೂಲಕ ಪರಿಹಾರ ನೀಡುತ್ತದೆ. ರಾಜ್ಯ ಸರ್ಕಾರವೂ ಸಹ ಪರಿಹಾರ ನೀಡುತ್ತಿದೆ. ಮುಖ್ಯಮಂತ್ರಿಗಳು ಭರವಸೆ ನೀಡಿದಂತೆ ಪರಿಹಾರ ಕಾರ್ಯ ಶೀಘ್ರ ಪ್ರಾರಂಭವಾಗಲಿದೆ ಎಂದು ಹೇಳಿದರು.

ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ
ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಡಾ.ನಿರ್ಮಲಾನಂದನಾಥ ಸ್ವಾಮಿಗಳ ಬೇಡಿಕೆಯಿಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯಗಳಲ್ಲಿ ಒಕ್ಕಲಿಗ ಸಮುದಾಯವೂ ಒಂದಾಗಿದೆ. ಅಲ್ಲೂ ಸಹಾ ಒಂದಷ್ಟು ಬೇಡಿಕೆಗಳಿವೆ. ಅದರಲ್ಲೂ ನ್ಯಾಯ ಇದೆ ಎನ್ನಿಸುತ್ತದೆ. ಮೀಸಲಾತಿ ಕೇಳುವುದು ತಪ್ಪಿಲ್ಲ. ಅದನ್ನು ಚರ್ಚೆ ಮಾಡಿ ಯಾವ ರೀತಿ ನಿರ್ವಹಣೆ ಮಾಡಬೇಕು ಎಂಬುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಶಶಿಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಪಿ. ಅಮರ್ಬಾಬು, ಕೋಣಸಾಲೆ ಜಯರಾಮು ಇತರರಿದ್ದರು.












Click it and Unblock the Notifications