ಹಲಗೂರು ಹೆದ್ದಾರಿಯಲ್ಲಿ ಅಂಗಡಿಯಲ್ಲಿದ್ದವನ ಕೊಚ್ಚಿ ಕೊಂದ ದುಷ್ಕರ್ಮಿಗಳು
ಮಂಡ್ಯ, ಆಗಸ್ಟ್ 7: ಮಂಡ್ಯ ಜಿಲ್ಲೆಯ ಮಳವಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಬುಧವಾರ ನಾಲ್ವರು ದುಷ್ಕರ್ಮಿಗಳು ಸೇರಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಾಳಿಂಬ ಗ್ರಾಮದ ಮೂವತ್ತು ವರ್ಷದ ರಾಮು ಕೊಲೆಯಾದ ವ್ಯಕ್ತಿ.
ರಾಮು ಅವರು ಹಲಗೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಬಿ. ಕೆ. ಪ್ರಾವಿಷನ್ ಸ್ಟೋರ್ ನಲ್ಲಿ ವ್ಯಾಪಾರ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಿಂದ ಬಂದ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರಿಂದ ರಾಮು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿದ್ದ ರಾಮು ಅವರನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇಡಲಾಗಿದೆ. ಹಲಗೂರು ಪೊಲೀಸರು ಕೊಲೆ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.

ಮುಸುಕು ಹಾಕಿಕೊಂಡು ಬಂದ ದುಷ್ಕರ್ಮಿಗಳು ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಈ ಘಟನೆಯು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿದೆ.












Click it and Unblock the Notifications