ಚೆಲುವರಾಯಸ್ವಾಮಿ ಜೊತೆ ಸಿ.ಟಿ.ರವಿ ಇಸ್ಪೀಟ್ ಆಟ: ವೈರಲ್ ಫೋಟೋ ಹಿಂದಿನ ಅಸಲಿಯತ್ತು ಏನು?
ಮಂಡ್ಯ, ಏಪ್ರಿಲ್ 4 : ಮಂಡ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಒಳ ಒಪ್ಪಂದ ಆಗಿದೆಯಾ ಎಂಬ ಚರ್ಚೆ ವ್ಯಾಪಕವಾಗಿ ಕೇಳಿಬರುತ್ತಿದೆ. ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಹಾಗೂ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಇಸ್ಪೀಟ್ ಆಡುತ್ತಿರುವ ಫೋಟೋ ವೈರಲ್ ಆಗುತ್ತಿರವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ಬಿಜೆಪಿ ಶಾಸಕ ಸಿ.ಟಿ ರವಿ ಹಾಗೂ ಚಲುವರಾಯಸ್ವಾಮಿ ಫೋಟೋವನ್ನು ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು ಕಾಂಗ್ರೆಸ್ಸಿಗರೇ ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂದು ಆರೋಪ ಮಾಡುತ್ತಿದ್ದರು. ಆದರೆ ಈಗ ಯಾರು ಬಿಜೆಪಿಯ ಬಿ ಟೀಮ್ ಎಂದು ತಿಳಿಯುತ್ತದೆ ಎಂದು ಆರೋಪಿಸುತ್ತಿದ್ದಾರೆ.

ಈ ಫೋಟೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ದಿನದಿಂದ ದಿನಕ್ಕೆ ಚುನಾವಣಾ ಕಾವು ರಂಗೇರುತ್ತಿದೆ. ಇಂತಹ ಹೊತ್ತಿನಲ್ಲಿ ಈ ಫೋಟೋ ವೈರಲ್ ಆಗಿರುವುದು ಬಿಸಿ ಬಿಸಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಎಐಸಿಸಿ ಸದಸ್ಯ ಹಾಗೂ ನಾಗಮಂಗಲ ಕ್ಷೇತ್ರ ಪ್ರಭಾವಿ ಮುಖಂಡರೂ ಆದ ಎನ್. ಚಲುವರಾಯಸ್ವಾಮಿ ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರೊಂದಿಗೆ ಇಸ್ಪೀಟ್ ಆಟ ಆಡುತ್ತಿದ್ದಾರೆ. ಇದನ್ನೇ ಜೆಡಿಎಸ್ನ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಮಾಡುವ ಮೂಲಕ ವಾಗ್ದಾಳಿ ನಡೆಸುತ್ತಿದ್ದಾರೆ.
ಚುನಾವಣೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಿನಲ್ಲಿ ಇಂತಹ ಗೊಂದಲ ಏರ್ಪಟ್ಟಿರುವುದು ಸಹಜವಾಗಿ ಇರಿಸು ಮುರಿಸು ಉಂಟಾಗಿದೆ ಎಂದೇ ಹೇಳಬಹುದಾಗಿದ್ದು, ಇದು ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆಯ ರಾಜಕಾರಣ ಎಂದೇ ಆರೋಪಿಸಲಾಗುತ್ತಿದೆ.

ಇಡೀ ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಸಮರ ಸಾರುತ್ತಿದ್ದರೆ, ಮಂಡ್ಯದಲ್ಲಿ ಮಾತ್ರ ಬಿಜೆಪಿಯೊಂದಿಗೆ ಕಾಂಗ್ರೆಸ್ ಒಂದು ರೀತಿಯಲ್ಲಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದೇ ಹೇಳಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಬೆಂಬಲ ನೀಡಿ ಅವರ ಗೆಲುವಿಗೆ ಕಾರಣರಾಗಿದ್ದರು.
ಅದೇ ರೀತಿ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲೂ ಬಿಜೆಪಿಯ ಬಿ ಟೀಮ್ನಂತೆ ಕಾಂಗ್ರೆಸ್ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣದಲ್ಲಿ ಆರೋಪಗಳು ವೈರಲ್ ಆಗುತ್ತಿವೆ.
ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಅವರೊಟ್ಟಿಗೆ ಬಿಜೆಪಿಯ ಸಿ.ಟಿ. ರವಿ ಅವರು ಯಾವಾಗ ಇಸ್ಪೀಟ್ ಆಡಿದ್ದರು, ಇದು ಯಾವ ಕಾಲದ ಫೋಟೋ ಎಂಬುದು ಇನ್ನು ತಿಳಿದುಬಂದಿಲ್ಲವಾದರೂ, ಇದು ಕಳೆದ ಮೂರ್ನಾಲ್ಕು ವರ್ಷಗಳ ಹಿಂದಿನ ಫೋಟೋ ಎಂದೇ ಹೇಳಲಾಗುತ್ತಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಫೋಟೋದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಸಹ ಇರಬಹುದು ಎನ್ನಲಾಗಿದ್ದು, ಇದು ಚೆಲುವರಾಯಸ್ವಾಮಿ ಅವರು ಜೆಡಿಎಸ್ನಲ್ಲಿದ್ದಾಗ ತೆಗೆದ ಫೋಟೋವಾಗಿರಬಹುದು ಎಂದು ಹೇಳಲಾಗುತ್ತಿದೆಯಾದರೂ, ಇದರಲ್ಲಿರುವ ಮತ್ತೊಬ್ಬ ವ್ಯಕ್ತಿ ನಿಧನರಾಗಿದ್ದಾರೆ ಎನ್ನಲಾಗಿದೆ.
ಜೆಡಿಎಸ್ನ ಈ ಆರೋಪಕ್ಕೆ ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಅಥವಾ ಬಿಜೆಪಿ ಮುಖಂಡ ಸಿ.ಟಿ. ರವಿ ಅವರೇ ಉತ್ತರ ನೀಡಬೇಕಾಗಿದೆ. ಅವರ ಉತ್ತರ ಬಳಿಕವಷ್ಟೇ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಆದರೆ ಸದ್ಯ ಫೋಟೋ ವೈರಲ್ ಆಗುತ್ತಿದ್ದು, ಕಾಂಗ್ರೆಸ್- ಬಿಜೆಪಿ ನಾಯಕರ ನಡುವೆ ಒಳ ಒಪ್ಪಂದವಿದೆ ಎಂದು ಜೆಡಿಎಸ್ ಟೀಕೆ ಮಾಡುತ್ತಿದೆ.












Click it and Unblock the Notifications