ಚಲುವರಾಯಸ್ವಾಮಿ ಜೊತೆ ದಿನೇಶ್ ಗುಂಡೂರಾವ್ ಸಭೆ
ಮಂಡ್ಯ, ಏಪ್ರಿಲ್ 11 : ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಗೊಂದಲ ಇನ್ನೂ ಬಗೆಹರಿದಿಲ್ಲ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಚಲುವರಾಯಸ್ವಾಮಿ ಸೇರಿದಂತೆ ಇತರ ನಾಯಕರ ಜೊತೆ ಸಭೆ ನಡೆಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಗುರುವಾರ ದಿನೇಶ್ ಗುಂಡೂರಾವ್ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಭೇಟಿ ಮಾಡಿದರು. ಲೋಕಸಭಾ ಚುನಾವಣಾ ಪ್ರಚಾರ, ಏ.13ರ ರಾಹುಲ್ ಗಾಂಧಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಿದರು.

ಸಚಿವ ಜಮೀರ್ ಅಹ್ಮದ್ ಖಾನ್, ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ನರೇಂದ್ರ ಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ರಘುವೀರ್ ಗೌಡ ಅವರು ದಿನೇಶ್ ಗುಂಡೂರಾವ್ ಅವರ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಬೆಂಬಲಿಸುವ ವಿಚಾರದಲ್ಲಿ ಚಲುವರಾಯಸ್ವಾಮಿ ಅವರು ಸಿದ್ದರಾಮಯ್ಯ ಜೊತೆ ಸಭೆ ನಡೆಸಿದ್ದರು. ಮೈತ್ರಿ ಧರ್ಮ ಪಾಲನೆ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಇನ್ನೂ ಗೊಂದಲವಿದೆ.
ಏ.13ರಂದು ಮಂಡ್ಯಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಆಗಮಿಸುತ್ತಿದ್ದಾರೆ. ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಅವರು ರೋಡ್ ಶೋ ನಡೆಸಲಿದ್ದು, ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಎರಡು ದಿನದಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಪುತ್ರನ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಕೆಲವು ಕಾಂಗ್ರೆಸ್ ನಾಯಕರು ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪಗಳು ಇವೆ.












Click it and Unblock the Notifications