ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮನೆಗೆ ಹೋಗಲಿವೆ; ಕಟೀಲ್
ಮಂಡ್ಯ, ನವೆಂಬರ್, 04: ಕಾಂಗ್ರೆಸ್ ಪಕ್ಷದಲ್ಲಿ ತಮ್ಮವರನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಜನವರಿ-ಫೆಬ್ರವರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ನ ಮನೆ ಖಾಲಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಂಡ್ಯದಲ್ಲಿ ಭವಿಷ್ಯ ನುಡಿದರು.
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೇರೆ ಪಕ್ಷಗಳ ಮುಖಂಡರನ್ನು ಆಹ್ವಾನಿಸುತ್ತಿದ್ದಾರೆ. ಮೊದಲು ತಮ್ಮ ಪಕ್ಷದವರನ್ನು ಹಿಡಿದಿಟ್ಟುಕೊಳ್ಳಲಿ, ನಂತರ ಬೇರೆಯವರನ್ನು ಆಹ್ವಾನಿಸಲಿ. ಕಾಂಗ್ರೆಸ್ ಮೇಲೆ ಅವರ ಶಾಸಕರಿಗೆ ವಿಶ್ವಾಸ ಇಲ್ಲ, ಒಬ್ಬ ಮಾಜಿ ಸಿಎಂಗೆ ಚುನಾವಣೆಯಲ್ಲಿ ನಿಲ್ಲಲು ಕ್ಷೇತ್ರವಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರ ಇಲ್ಲದಿರುವಾಗ ಪಕ್ಷದ ಶಾಸಕರಿಗೆ ನೆಲೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಪಕ್ಷ ಬಿಡಲು ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.
ಜಗತ್ತೇ ಬುಡಮೇಲಾದರೂ ಪಕ್ಷದಿಂದ ಹೊರ ಹೋದವರನ್ನು ಮತ್ತೆ ವಾಪಸ್ಸು ಕರೆದುಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಡಿ. ಕೆ. ಶಿವಕುಮಾರ್ ಅವರ ಹೇಳಿಕೆಯಿಂದ ಪಕ್ಷ ಅತಂತ್ರ ಸ್ಥಿತಿಯಲ್ಲಿದೆ ಎಂಬುದು ಗೊತ್ತಾಗುತ್ತೆ. ಹೊರ ಹೋದವರನ್ನು ಕರೆಯುವುದಿಲ್ಲ ಎಂದು ಹೇಳಿದ್ದವರು ಮತ್ತೆ ಈಗ ವಾಪಸ್ಸು ಕರೆಯುತ್ತಿದ್ದಾರೆ ಎಂದರೆ, ಕಾಂಗ್ರೆಸ್ನವರ ಪರಿಸ್ಥಿತಿ ಹೇಗಿರಬೇಕು ಎಂಬುದು ತಿಳಿಯುತ್ತದೆ ಎಂದರು.

ನಿರಂತರವಾಗಿ ಸಂಘಟನಾ ಕಾರ್ಯ
ಮಂಡ್ಯ ಜಿಲ್ಲೆಯಲ್ಲೂ ಸಂಘಟನೆ ಭದ್ರವಾಗಿದೆ. ಸಂಘಟನಾ ಕಾರ್ಯ ಕಾಣುವಂತೆ ಮಾಡುವುದಿಲ್ಲ. ನಾವು ಬೇರೆಯವರ ರೀತಿ ಬಂಡೆ, ಹುಲಿಯಾ ಎಂದು ರಾಜಕಾರಣ ಮಾಡುವುದಿಲ್ಲ. ಸಂಘಟನಾ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಅದರಲ್ಲಿ ಯಾವುದೇ ಕೊರತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಅನೇಕ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಲು ಬೇರೆ ಬೇರೆ ಹಂತಗಳಲ್ಲಿ ಮಾತುಕತೆ ನಡೆಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಬಗ್ಗೆ ಜನರಿಗೆ ನಿರಾಸೆ
ಹಳೇ ಮೈಸೂರು ಭಾಗದಲ್ಲಿ ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ ಕಳೆಗುಂದಿತ್ತು. ಅದರಲ್ಲೂ ವಿಶೇಷವಾಗಿ ಮಂಡ್ಯದಲ್ಲಿ ಉಪ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಶಾಸಕರು ಆಯ್ಕೆಯಾಗುವ ಮೂಲಕ ಶಕ್ತಿ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂರ್ನಾಲ್ಕು ಜನ ಶಾಸಕರು ಆಯ್ಕೆ ಆಗುತ್ತಾರೆ. ಕಾಂಗ್ರೆಸ್ ಬಗ್ಗೆ ಜನರಿಗೆ ನಿರಾಸೆ ಉಂಟಾಗಿದೆ. ಜೆಡಿಎಸ್ ಕುಟುಂಬಕ್ಕೆ ಸೀಮಿತವಾಗಿದೆ.

ಬೊಮ್ಮಾಯಿ ಅವರಿಂದ ಉತ್ತಮ ಆಡಳಿತ
ಎರಡೂ ಪಕ್ಷಗಳನ್ನು ತೊರೆದು ಜನ ನಮ್ಮ ಪಕ್ಷದತ್ತ ಬರುತ್ತಿದ್ದಾರೆ. ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ಉತ್ತಮ ಆಡಳಿತವನ್ನು ನೀಡುತ್ತಿದೆ. ಯೋಜನೆ, ಅನುಷ್ಠಾನ ಅಭಿವೃದ್ಧಿ ಕಾರ್ಯಗಳು ಜನಮನ ಸೆಳೆಯುತ್ತಿದೆ. ರಾಜ್ಯದಲ್ಲೂ ಸಹ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಉತ್ತಮವಾಗಿ ಆಡಳಿತ ನೀಡುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಜನ ನಮ್ಮ ಪಕ್ಷದ ಪರವಾಗಿ ಇದ್ದಾರೆ ಎಂದು ಹೇಳಿದರು.

ಸರ್ಕಾರ ತನಿಖೆಯನ್ನು ತೀವ್ರಗೊಳಿಸಿದೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ತಮ್ಮನ ಮಗನ ಸಾವು ಅನುಮಾನಾಸ್ಪದವಾಗಿದೆ. ಈ ದುರ್ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಈ ಬಗ್ಗೆ ನಮ್ಮ ಸರ್ಕಾರ ತನಿಖೆಯನ್ನು ತೀವ್ರಗೊಳಿಸಿದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಎಲ್ಲಾ ಹಂತದಲ್ಲೂ ತನಿಖೆ ನಡೆಸುತ್ತಿದ್ದಾರೆ. ಬಹಳಷ್ಟು ಅನುಮಾನಗಳು ಇವೆ. ನಮಗೂ ಸಹ ಈ ಸಾವಿನ ಬಗ್ಗೆ ಅನುಮಾನ ಇದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಜಿಲ್ಲಾ ಉಸ್ತುವಾರಿ ಜಗದೀಶ್ ಹಿರೇಮನಿ, ಮುಖಂಡರಾದ ಡಾ. ಸಿದ್ದರಾಮಯ್ಯ, ಇಂದ್ರೇಶ್, ಮುನಿರಾಜು, ಅರುಣ್ಕುಮಾರ್, ಸುರೇಶ್, ಎಸ್.ಪಿ. ಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.











Click it and Unblock the Notifications