ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಕುರಿತಂತೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ ಕ್ಷೇತ್ರದ ಅಭ್ಯರ್ಥಿ ಸೇರಿದಂತೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿಗೆ ಬಿಡುಗಡೆಯಾಗಲಿದೆ. ಮಂಡ್ಯದಲ್ಲಿ ನಾನು ಆಕಾಂಕ್ಷಿತ ಅಭ್ಯರ್ಥಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ಕುಮಾರ್ ಹೇಳಿದರು.
ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಡ್ರೀಮ್ ಕೆಫೆ ರೆಸ್ಟೋರೆಂಟ್ ಉದ್ಘಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನರು ನಮ್ಮ ಕುಟುಂಬದ ಮೇಲೆ ಸಾಕಷ್ಟು ಅಭಿಮಾನ ಹೊಂದಿದ್ದಾರೆ. ಆದ್ದರಿಂದ ನನ್ನನ್ನು ಲೋಕಸಭೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ನಾನು ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದೇನೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ ಎಂದರು.

ಈ ಬಾರಿ ಚುನಾವಣೆ ರಾಜಕೀಯದಿಂದ ದೂರ ಇದ್ದೇನೆ, ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಚುನಾವಣೆಗೆ ಸ್ಪರ್ಧಿಸಲ್ಲ, ನಾನು ಒಂದು ವರ್ಷದ ಹಿಂದೆ ಹೇಳಿದ್ದು ಇದೇ ಮಾತು ಈಗ ಹೇಳುತ್ತಿರುವುದು ಇದೇ ಮಾತು ಎಂದು ಎಲ್ಲಾ ಗೊಂದಲ್ಲಕ್ಕೂ ತೆರೆ ಎಳೆದರು.
ಪಕ್ಷ ಸಂಘಟನೆ ಮಾಡುತ್ತೇನೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನನಗೆ ಪಕ್ಷ ಜವಬ್ದಾರಿ ನೀಡಿದೆ. ಪಕ್ಷ ಸಂಘಟನೆ ವಿಚಾರವಾಗಿ ಎಲ್ಲಾ ಕ್ಷೇತ್ರಗಳಿಗೂ ಪ್ರವಾಸ ಮಾಡುತ್ತೇನೆ. ಮಂಡ್ಯದ ಎಲ್ಲಾ ಕ್ಷೇತ್ರಗಳಿಗೂ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಸಂಘಟನೆ ಮಾಡುತ್ತೇನೆ ಜಿಲ್ಲೆಗೆ ಭೇಟಿ ಸಂಬಂಧ ಇನ್ನೂ ದಿನಾಂಕ ನಿಗದಿಪಡಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸ್ಪರ್ಧೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಮಂಡ್ಯ ಕ್ಷೇತ್ರ ಒಂದೆ ಅಲ್ಲಾ ರಾಜ್ಯದ ಹಲವು ಜಿಲ್ಲೆಗಳಿಂದ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಅವರ ಸ್ಪರ್ಧೆಯ ಬಗ್ಗೆ ನನಗೆ ಮಾಹಿತಿ ಇಲ್ಲ, ಅವರು ರಾಜ್ಯ ರಾಜಕಾರಣದಲ್ಲಿಯೇ ಉಳಿಯಬೇಕು ಎನ್ನುವುದು ಸಹ ಕೆಲವು ಶಾಸಕರು, ಮುಖಂಡರ ಅಭಿಪ್ರಾಯವಾಗಿದೆ ಎಂದರು.
ದೇಶದಲ್ಲಿ ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಗಳನ್ನಾಗಿ ಮಾಡಬೇಕೆನ್ನುವುದು ಎಲ್ಲರು ಆಸೆಯಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಹ ಮೋದಿಯವನ್ನು ಒಪ್ಪಿ ನಾವು ಎನ್ಡಿಎ ಒಕ್ಕೂಟಕ್ಕೆ ಸೇರ್ಪಡೆಗೊಂಡಿದ್ದೇವೆ. ಸಚಿವ ಅಮಿತ್ ಶಾ ಅವರು ಮೈಸೂರಿನಲ್ಲಿ ಬಿಜೆಪಿ ಕೋರ್ಕಮಿಟಿ ಸಭೆ ನಡೆಸಿ ಬಿಜೆಪಿ ಮುಖಂಡರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ಕೇಳಿಬಂದಿದೆ. ನಮ್ಮಲ್ಲಿ ಯಾವುದೇ ಅಪಸ್ವರಗಳಿಲ್ಲ ಮುಂದಿನ ದಿನಗಳಲ್ಲಿ ಎಲ್ಲವನ್ನು ಸರಿದೂಗಿಸಿಕೊಂಡು ಚುನಾವಣೆಗೆ ಹೋಗುತ್ತೇವೆ ಎಂದರು.
ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳಿಗೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ಹಲವು ನಾಯಕರ ಆಕಾಂಕ್ಷಿತರ ದಂಡೇ ಇದೆ. ಅಭ್ಯರ್ಥಿಯನ್ನು ತೀರ್ಮಾನಿಸುವ ಜವಬ್ದಾರಿ ಪಕ್ಷ ವರಿಷ್ಠರು, ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು ಎಂದರು.
ಕೇವಲ ಮಂಡ್ಯ ಕ್ಷೇತ್ರ ಮಾತ್ರವಲ್ಲಿ ಒಂದೇ ಬಾರಿ ರಾಜ್ಯದ ಕ್ಷೇತ್ರಗಳ ಬಿಜೆಪಿ+ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮದ್ದೂರಿನಲ್ಲಿ ಶಾಸಕ ಉದಯ್ ಗೌಡ ಹೇಳಿಕೆಗೆ ಕಾಲವೇ ಉತ್ತರಿಸಲಿದೆ ಎಂದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಮಂಡ್ಯ ಲೋಕಸಭೆಗೆ ನಮ್ಮ ಪಕ್ಷದ ನಾಯಕರಾದ ಎಚ್.ಡಿ.ದೇವೇಗೌಡ, ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡಬೇಕು ಎನ್ನುವುದು ನಮ್ಮ ಎಲ್ಲಾ ನಾಯಕ ಬೇಡಿಕೆಯಾಗಿದೆ. ಕಳೆದ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಅನ್ಯಾಯವಾಗಿತ್ತು ಅವರಿಗೆ ಈ ಚುನಾವಣೆಯಲ್ಲಿ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.












Click it and Unblock the Notifications