ಕೃಷ್ಣರಾಜಸಾಗರ ಜಲಾಶಯದ ಬಳಿ ಟ್ರಯಲ್ ಬ್ಲಾಸ್ಟ್: ಆತಂಕ ಬೇಡ ಎಂದ ಸಚಿವ ಚಲುವರಾಯಸ್ವಾಮಿ
ಮಂಡ್ಯ : ಕೃಷ್ಣರಾಜಸಾಗರ ಜಲಾಶಯದ ಬಳಿ ಟ್ರಯಲ್ ಬ್ಲಾಸ್ಟ್ ನಡೆಸುವ ವಿಚಾರವಾಗಿ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ರೈತರ ಅಭಿಪ್ರಾಯಕ್ಕೆ ವಿರುದ್ಧವಾಗಿ ಮತ್ತು ಜಿಲ್ಲೆಯ ಜನರ ಹಿತವನ್ನು ಕಡೆಗಣಿಸಿ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.
ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಮೈಷುಗರ್ ಕಾರ್ಖಾನೆ ಕುರಿತು ಆಯೋಜಿಸಿದ್ದ ರೈತಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ನಾನು ಉದ್ಯಮಿಯಲ್ಲ, ವ್ಯಾಪಾರಿಯೂ ಅಲ್ಲ. ಸ್ವಹಿತ, ಅಧಿಕಾರಕ್ಕೆ ಅಂಟಿಕೂರುವ ವ್ಯಕ್ತಿಯೂ ನಾನಲ್ಲ. ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತವಾದ ತೀರ್ಮಾನವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳುವುದಾಗಿ ಹೇಳಿದರು.

ಕೆಆರ್ಎಸ್ ಅಣೆಕಟ್ಟು ಸುರಕ್ಷತೆಯನ್ನು ಕಡೆಗಣಿಸಿ ಟ್ರಯಲ್ ಬ್ಲಾಸ್ಟ್ ಮಾಡಲೇಬೇಕೆಂಬ ಹಠ ನನಗಾಗಲೀ, ಸರ್ಕಾರಕ್ಕೆ ಅಥವಾ ಜಿಲ್ಲಾಡಳಿತಕ್ಕಾಗಲೀ ಇಲ್ಲ. ಟ್ರಯಲ್ ಬ್ಲಾಸ್ಟ್ನಿಂದ ಗಣಿಗಾರಿಕೆಗೆ ಅವಕಾಶ ದೊರೆತಲ್ಲಿ ಅಪಾಯ ಸೃಷ್ಟಿಯಾಗಬಹುದೆಂಬ ಆತಂಕ ರೈತರಲ್ಲಿದೆ. ಟ್ರಯಲ್ ಬ್ಲಾಸ್ಟ್ ನಡೆಸುವುದಕ್ಕೆ ಹೈಕೋರ್ಟ್ ಆದೇಶ ಮಾಡಿದೆ. ಅದನ್ನು ತಡೆಯಲು ಏನು ಮಾಡಬೇಕೆಂಬ ಬಗ್ಗೆ ನಾವೂ ಆಲೋಚಿಸುತ್ತಿದ್ದೇವೆ. ಅದಕ್ಕಾಗಿ ಅಡ್ವೋಕೇಟ್ ಜನರಲ್ ಅಭಿಪ್ರಾಯವನ್ನು ಪಡೆಯಲಿದ್ದೇವೆ. ಅಣೆಕಟ್ಟು ಸುರಕ್ಷತಾ ಸಮಿತಿ ಕಾಯಿದೆಯನ್ನು ಜೊತೆಗಿಟ್ಟುಕೊಂಡೇ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿಕೊಡಲಿದ್ದೇವೆ ಎಂದರು.
ಎಲ್ಲರ ಒಪ್ಪಿಗೆ ಪಡೆದೇ ಮುಂದಿನ ಹೆಜ್ಜೆ
ಒಮ್ಮೆ ಟ್ರಯಲ್ ಬ್ಲಾಸ್ಟ್ ನಡೆಸಲೇಬೇಕಾದ ಅನಿವಾರ್ಯತೆ ಎದುರಾದರೆ ಮತ್ತೆ ನಿಮ್ಮೆಲ್ಲರ ಜೊತೆ ಸಭೆ ನಡೆಸಿ ಅಭಿಪ್ರಾಯವನ್ನು ಪಡೆದು ಮುಂದಿನ ಹೆಜ್ಜೆ ಇಡಲಿದ್ದೇವೆ. ಮುಂದಿನ ಹತ್ತು ವಾರಗಳೊಳಗೆ ಏನೇನು ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದೋ ಅವೆಲ್ಲವನ್ನೂ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದರು.ಕೆಆರ್ಎಸ್ ಅಣೆಕಟ್ಟು ಬಳಿ ಪರೀಕ್ಷಾರ್ಥ ಸ್ಪೋಟ ನಡೆಸಿ 10 ವಾರದೊಳಗೆ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಸಭೆಯ ಗಮನಕ್ಕೆ ತಂದರು.
20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವ ಜಿಲ್ಲಾಧಿಕಾರಿ ಆದೇಶ ಪ್ರಶ್ನಿಸಿ 17 ಮಂದಿ ಕ್ರಷರ್ ಮಾಲೀಕರು 2021ರಲ್ಲಿ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 2022 ಡಿಸೆಂಬರ್ 1ರಂದು ಗಣಿಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ವೈಜ್ಞಾನಿಕ ವರದಿ ಪಡೆದು, ಟ್ರಯಲ್ ಬ್ಲಾಸ್ಟ್ ನಡೆಸಿ ನಂತರ ಅನುಮತಿ ನೀಡುವಂತೆ ತಿಳಿಸಿತ್ತು.
ಅಣೆಕಟ್ಟು ಸುರಕ್ಷತಾ ಸಮಿತಿ ವರದಿ ಆಧರಿಸಿ ಕಾವೇರಿ ನೀರಾವರಿ ನಿಗಮದವರು ಜಾರ್ಖಂಡ್ನ ಧನಾಬಾದ್ನಲ್ಲಿರುವ ಸಿಐಎಂಎಆರ್ ತಂಡವನ್ನು ಕರೆಸಿ ಮೇ 25, 2022ರಲ್ಲಿ ಟ್ರಯಲ್ ಬ್ಲಾಸ್ಟ್ಗೆ ಮುಂದಾದಾಗ ರೈತರಿಂದ ವಿರೋಧ ವ್ಯಕ್ತವಾಗಿತ್ತು.
ಮತ್ತೆ ಕೆಆರ್ಎಸ್ ಬಳಿ ಗಣಿಗಾರಿಕೆಗೆ ಅನುಮತಿ ನೀಡುವಾಗ ಜಿಲ್ಲಾಧಿಕಾರಿಗಳು ಟ್ರಯಲ್ ಬ್ಲಾಸ್ಟ್ ನಡೆಸಿ ಅನುಮತಿ ನೀಡಬೇಕು ಎಂದು ರಾಜ್ಯಸರ್ಕಾರದ ಸಮಿತಿ ನಿರ್ಧಾರ ಕೈಗೊಂಡು 25 ಕಿ.ಮೀ. ವ್ಯಾಪ್ತಿಯಲ್ಲಿ ಗಣಿ ನಿಷೇಧ ಜಾರಿಗೊಳಿಸಿತು.
ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಗಣಿ ಮಾಲೀಕರು ಹೋದಾಗ ಜನವರಿ 1, 2024ರಲ್ಲಿ ಕೆಆರ್ಎಸ್ ಅಣೆಕಟ್ಟು ವ್ಯಾಪ್ತಿಯ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿತು. ಅದರ ಮರುದಿನವೇ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದಾಗ ಟ್ರಯಲ್ ಬ್ಲಾಸ್ಟ್ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿತ್ತು. ಅದರಂತೆ ಕಾವೇರಿ ನೀರಾವರಿ ನಿಗಮದವರು 18 ರಿಂದ 20 ಲಕ್ಷ ರು. ಖರ್ಚು ಮಾಡಿ ವಿಜ್ಞಾನಿಗಳ ತಂಡವನ್ನು ಕರೆಸಿದ್ದರು. ಆದರೆ, ಟ್ರಯಲ್ ಬ್ಲಾಸ್ಟ್ಗೆ ವಿರೋಧ ಎದುರಾಗಿದ್ದರಿಂದ ನಡೆಯಲಿಲ್ಲ. ಇದೀಗ ಹೈಕೋರ್ಟ್ 10 ವಾರಗಳೊಳಗೆ ಟ್ರಯಲ್ ಬ್ಲಾಸ್ಟ್ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications