ಅಧಿಕಾರಿಗಳು ಜನರ ಬಳಿ ಹೋಗಿ ಅವರ ಕೆಲಸ ಮಾಡಿಕೊಡಬೇಕು- ಮಂಡ್ಯ ನೂತನ ಡಿಸಿ ಡಾ. ಕುಮಾರ್
ಮಂಡ್ಯ, ಜೂನ್ 19: ಜನರು ಅಧಿಕಾರಿಗಳ ಬಳಿ ಸುತ್ತಾಡದೆ, ಅಧಿಕಾರಿಗಳೇ ಜನರ ಬಳಿ ಹೋಗಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂಬುದೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ನೂತನ ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ. ಎಚ್.ಎನ್. ಗೋಪಾಲಕೃಷ್ಣ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಾನು ಸಹ ರೈತಾಪಿ ಕುಟುಂಬದಿಂದಲೇ ಬಂದಿರುವುದರಿಂದ ರೈತರ ಕಷ್ಟ-ಸುಖಗಳ ಅರಿವು ಬಲ್ಲವನಾಗಿದ್ದೇನೆ. ರೈತರ ಸಮಸ್ಯೆಗಳನ್ನು ಪರಿಹರಿಸುವುದು ನನ್ನ ಕರ್ತವ್ಯವಾಗಿದೆ ಎಂದರು.

ಈ ಹಿಂದೆ ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ವಿಜಾಪುರ, ತುಮಕೂರು ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಸೇವೆ ಸಲ್ಲಿಸಿದ್ದೇನೆ. ಕಂದಾಯ ಇಲಾಖೆಯಲ್ಲಿ ಯಾವುದೇ ತೊಂದರೆ ಇದ್ದರೂ ಪರಿಶೀಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಾರದರ್ಶಕ ಹಾಗೂ ಪ್ರತಿಸ್ಪಂಧನಾತ್ಮಕ ಆಡಳಿತವನ್ನು ನೀಡುವುದು ಮುಖ್ಯ ಗುರಿ ಎಂದು ಹೇಳಿದರು.
ಕಂದಾಯ ಇಲಾಖೆಯಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಹಾಗಾಗಿ ಜಿಲ್ಲಾಧಿಕಾರಿ ಕಛೇರಿ ಹಾಗೂ ಕಂದಾಯ ಇಲಾಖೆ ಯಾವುದೇ ಸಮಸ್ಯೆ ಇದ್ದಲ್ಲಿ ಪರೀಶಿಲನೆ ನಡೆಸಿ ಸಕಲಾತ್ಮಕವಾಗಿ ಸ್ಪಂದಿಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುವೆ. ಪಾರದರ್ಶಕವಾಗಿ ಆಡಳಿತ ನಡೆಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪಿಸುವುದು. ಈ ಮೂಲಕ ಕಡತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ಅಧಿಕಾರ ಎಂಬುದು ಸಾರ್ವಜನಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ. ರೈತರಿಗೆ ಭೂಮಿ ತಂತ್ರಾಂಶ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಕಲಾಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು.ಕೃಷಿಕರ ಸಮಸ್ಯೆಗಳನ್ನು ಆದ್ಯತೆ ನೀಡಿ ಪರಿಹರಿಸಲಾಗುವುದು. ಮಳೆಯ ಕೊರತೆಯಿಂದ ಉಂಟಾಗಬಹುದಾದ ತೊಂದರೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಮೈಷುಗರ್ ಸಕ್ಕರೆ ಕಾರ್ಖಾನೆ ಬಗ್ಗೆ ಹೆಚ್ಚೇನೂ ಮಾಹಿತಿ ಇಲ್ಲದಿದ್ದರೂ, ಆ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಿಸಿದವರೊಂದಿಗೆ ಚರ್ಚಿಸಿ ನನ್ನ ಹಂತದಲ್ಲಿ ಆಗುವಂತಹ ಕಾರ್ಯಗಳನ್ನು ಖಂಡಿತಾ ಮಾಡುತ್ತೇನೆ. ಇನ್ನು ಕೃಷ್ಣರಾಜಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಎಷ್ಟರ ಮಟ್ಟಿಗೆ ಕಡಿಮೆ ಇದೆ. ಇರುವ ನೀರನ್ನು ಕೃಷಿ ಅಥವಾ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲು ಸಾಧ್ಯವೇ ಎಂಬುದರ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ನಂತರ ಆ ಬಗ್ಗೆ ಕ್ರಮ ವಹಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.












Click it and Unblock the Notifications