ವೈರಮುಡಿ ಬ್ರಹ್ಮೋತ್ಸವ; ಹೊರ ರಾಜ್ಯ, ಜಿಲ್ಲೆಗಳ ಭಕ್ತರಿಗೆ ನಿಷೇಧ
ಮಂಡ್ಯ, ಮಾರ್ಚ್ 15; "ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ಆಚರಣೆ ಮಾಡಲಾಗುತ್ತದೆ. ಹೊರ ರಾಜ್ಯ, ಹೊರ ಜಿಲ್ಲೆ ಮತ್ತು ಮಂಡ್ಯದ ಇತರೆ ತಾಲೂಕುಗಳಿಂದ ಭಕ್ತರು ಬರದಂತೆ ನಿರ್ಬಂಧಿಸಲಾಗಿದೆ" ಎಂದು ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವತಿ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮೇಲುಕೋಟೆಯ ವೈರಮುಡಿ ಬ್ರಹ್ಮೋತ್ಸವ ಆಚರಣೆಯ ಪೂರ್ವಭಾವಿ ಸಭೆ ನಡೆಯಿತು. ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ವೈರಮುಡಿ ಬ್ರಹ್ಮೋತ್ಸವ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಮಾರ್ಚ್ 19 ರಿಂದ 31ರ ತನಕ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಮಾರ್ಚ್ 24ರಂದು ಶ್ರೀ ಚಲುವನಾರಾಯಣ ಸ್ವಾಮಿಗೆ ವೈರಮುಡಿ ಕಿರೀಟಧಾರಣ ಮಹೋತ್ಸವ ನಡೆಯಲಿದೆ. ಪ್ರತಿ ವರ್ಷ ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದರು.

ಭಕ್ತಾಧಿಗಳ ದರ್ಶನಕ್ಕೆ ದೇವಾಲಯದ 2 ಪ್ರವೇಶ ದ್ವಾರದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಪ್ರವೇಶದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗುತ್ತದೆ ಹಾಗೂ ನೆಗೆಟಿವ್ ವರದಿ ಬಂದವರಿಗೆ ಸೀಲ್ ಹಾಕಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ವೈರಮುಡಿ ಆಚರಣೆಯಲ್ಲಿ 2000 ಕ್ಕಿಂತ ಹೆಚ್ಚಿನ ಭಕ್ತಾಧಿಗಳು ಸೇರದಂತೆ ವ್ಯವಸ್ಥೆ ಮಾಡಲಾಗಿದೆ. ದೇವಾಲಯದ ಪ್ರಾಂಗಣದೊಳಗೆ ಒಂದು ಬಾರಿಗೆ ನೂರಕ್ಕಿಂತ ಹೆಚ್ಚು ಜನರಿಗೆ ಪ್ರವೇಶವಿಲ್ಲ.
ದೇವಾಲಯದದಲ್ಲಿ ನಿಯೋಜಿಸಿರುವ ಅರ್ಚಕರು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ಹೊರತುಪಡಿಸಿ, ಹೆಚ್ಚುವರಿ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ದೇವಾಲಯದ ಆವರಣದಲ್ಲಿ ಗುಂಪು ಸೇರುವುದು ಹಾಗೂ ರಾತ್ರಿ ವೇಳೆಯಲ್ಲಿ ವಾಸ್ತವ್ಯ ಹೂಡುವುದನ್ನು ನಿರ್ಬಂಧಿಸಲಾಗಿದೆ. ಒಳ ಮತ್ತು ಹೊರ ಆವರಣದಲ್ಲಿ ಯಾವುದೇ ರೀತಿಯ ಸಾಮೂಹಿಕ ಭೋಜನ ವ್ಯವಸ್ಥೆ, ಪ್ರಸಾದ ವಿತರಣೆ ಇರುವುದಿಲ್ಲ. ಸುತ್ತಮುತ್ತಲಿನ ಪ್ರದೇಶದಲ್ಲಿ ಹೊಟೇಲ್ ತೆರೆಯದಂತೆ ಜಿಲ್ಲಾಡಳಿತ ಸೂಚಿಸಿದೆ.
ಬ್ರಹ್ಮೋತ್ಸವ ಮುಂಜಾನೆ 3 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ರಾತ್ರಿ 12 ಗಂಟೆಯೊಳಗೆ ಮುಗಿಯುವಂತೆ ಕ್ರಮ ಕೈಗೊಳ್ಳಲಾಗಿದೆ. ಜನರು ಜಿಲ್ಲಾಡಳಿತದ ಜೊತೆ ಸಹಕರಿಸಿ, ಸ್ಥಳದಲ್ಲಿ ಮಾಸ್ಕ್ ಧರಿಸಿ, ನಿಯೋಜಿಸಿರುವ ಸ್ಯಾನಿಟೈಸರ್ ಬಳಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆಯಬೇಕು ಎಂದು ಮನವಿ ಮಾಡಲಾಗಿದೆ.












Click it and Unblock the Notifications