ಸಂಸದ ಡಿ.ಕೆ. ಸುರೇಶ್ ಸೇರಿದಂತೆ ನಮ್ಮ ಕುಟುಂಬದ ಯಾರೊಬ್ಬರೂ ರಾಜ್ಯ ರಾಜಕಾರಣಕ್ಕೆ ಬರಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ನನ್ನನ್ನು ಹೊರತುಪಡಿಸಿ ನಮ್ಮ ಕುಟುಂಬದ ಯಾರೊಬ್ಬರು ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಅನ್ನುವ ವಿವರ ಇಲ್ಲಿದೆ.
ಮದ್ದೂರು, ಫೆಬ್ವರಿ, 12: ಸಂಸದ ಡಿ.ಕೆ. ಸುರೇಶ್ ರಾಜ್ಯ ರಾಜಕಾರಣಕ್ಕೆ ಬರಲ್ಲ, ಆತನೂ ಸೇರಿದಂತೆ ಈಗಾಗಲೇ ಲೋಕಸಭಾ ಸದಸ್ಯರಾಗಿರುವ ಯಾರೂ ರಾಜ್ಯ ರಾಜಕಾರಣಕ್ಕೆ ಬರುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮದ್ದೂರಿನಲ್ಲಿ ಹೇಳಿದರು.
ಪಟ್ಟಣದ ಕ್ರೀಡಾಂಗಣದಲ್ಲಿ ಕೆಪಿಸಿಸಿ ವತಿಯಿಂದ ನಡೆದ ಪ್ರಜಾಧನಿ ವೇದಿಕೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಡಿ.ಕೆ. ಸುರೇಶ್ ಲೋಕಸಭಾ ಸದಸ್ಯರಾಗಿರುವುದರಿಂದ ಅವರನ್ನು ಮುಂದಿನ ವಿಧಾನಸಭಾ ಚುನಾವಣೆಗೆ ಕಣಕ್ಕಿಳಿಸುವ ಅವಕಾಶಗಳಿಲ್ಲ. ನನ್ನನ್ನು ಹೊರತುಪಡಿಸಿ ಡಿ.ಕೆ. ಸುರೇಶ್ ಮತ್ತು ನಮ್ಮ ಕುಟುಂಬದವರು ಯಾರೂ ರಾಜ್ಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಕಟ್ಟಿಹಾಕುವ ಅವಶ್ಯಕತೆ ನಮಗಿಲ್ಲ. ರಾಜಕಾರಣ ಮಾಡಬೇಕು. ಆದರೆ, ಅವರನ್ನು ಯಾಕೆ ಕಟ್ಟಿಹಾಕಬೇಕು? ಎಂದು ಮರು ಪ್ರಶ್ನೆ ಹಾಕಿದರು.
ಕುಮಾರಸ್ವಾಮಿಯವರ ಪಂಚರತ್ನ ಯಾತ್ರೆಯನ್ನು ನಾವು ಕಟ್ಟಿಹಾಕಲಿಲ್ಲ. ಕಾಂಗ್ರೆಸ್ ನಡೆಸಿದ ಮೇಕೆದಾಟು ಯೋಜನೆಯನ್ನು ತಡೆಹಿಡಿಯಲು ಬಿಜೆಪಿ ನಡೆಸಿದ ಕುತಂತ್ರ ಫಲಿಸಲಿಲ್ಲ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ಗಾಂಧಿ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಬಿಜೆಪಿ ನಡೆಸಿದ ಪ್ರಯತ್ನ ವ್ಯರ್ಥವಾಯಿತು ಎಂದು ವ್ಯಂಗ್ಯವಾಡಿದರು.

ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ
ಕಾವೇರಿ ಜಲಾನಯನ ಪ್ರದೇಶದ ಜನರಿಗೆ ನೀರಿನ ನ್ಯಾಯ ಒದಗಿಸುವ ಉದ್ದೇಶದಿಂದ ಕಾಂಗ್ರೆಸ್ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪಾದಯಾತ್ರೆ ನಡೆಸಿದೆ. ಈ ಹೊರತು ಇದರಿಂದ ಬೇರೆ ದುರುದ್ದೇಶ ನಮ್ಮಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. ಸಂಸದೆ ಸುಮಲತಾ ಸೇರಿದಂತೆ ಯಾವ ನಾಯಕರೂ ಕಾಂಗ್ರೆಸ್ ಸೇರಬೇಕೆಂಬ ಇಚ್ಚೆ ಇದ್ದರೆ ನಮ್ಮ ಪಕ್ಷದ ಧ್ಯೇಯೋದ್ದೇಶಗಳ ಪ್ರಕಾರ ಪಕ್ಷ ಸೇರುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದರು.
ಸುಮಲತಾ ಆರೋಪಕ್ಕೆ ತಿರುಗೇಟು
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರಿಂದ ಕಾಂಗ್ರೆಸ್ಗೆ ಟಿಕೆಟ್ ಕೈತಪ್ಪಿತು ಎಂದು ಸಂಸದೆ ಸುಮಲತಾ ಆರೋಪಕ್ಕೆ ತಿರುಗೇಟು ನೀಡಿದ ಡಿ.ಕೆ. ಶಿವಕುಮಾರ್, ನಾನು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಬೆಂಬಲವಾಗಿ ನಿಂತು ಸಚಿವನಾಗಿದ್ದೆ. ಮಂಡ್ಯದಲ್ಲಿ ಏಳು ಮಂದಿ ಜೆಡಿಎಸ್ ಶಾಸಕರಿದ್ದರೂ, ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ಆಶೀರ್ವಾದ ಮಾಡಿದ್ದೆ. ಹೀಗಾಗಿ ಕುಮಾರಸ್ವಾಮಿಯವರಿಗೆ ದ್ರೋಹ ಮಾಡಲು ಇಷ್ಟವಿಲ್ಲದೆ ಚುನಾವಣೆಯಲ್ಲಿ ಬೇರೆ ಕ್ಷೇತ್ರಕ್ಕೆ ಅವಕಾಶ ಮಾಡಿಕೊಡುವಂತೆ ಸುಮಲತಾ ಅವರಿಗೆ ತಿಳಿಸಿದ್ದು ನಿಜ ಎಂದು ಒಪ್ಪಿಕೊಂಡರು.

ನಾನೂ ಸೇರಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಚುನಾವಣೆಯನ್ನು ನಡೆಸುತ್ತಿದ್ದೇವೆ. ನಮ್ಮ ಈ ಮೂವರ ಮುಖ ನೋಡಿಕೊಂಡು ರಾಜ್ಯದ ಜನರು ಚುನಾವಣೆಯಲ್ಲಿ ಆಶೀರ್ವಾದ ಮಾಡಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications