Breaking; ಪಾಂಡವಪುರದ ಮಾಜಿ ಶಾಸಕ ಕೆಂಪೇಗೌಡ ನಿಧನ
ಮಂಡ್ಯ, ಸೆಪ್ಟೆಂಬರ್ 08: ಮಂಡ್ಯ ಜಿಲ್ಲೆಯ ಪಾಂಡವಪುರ ಕ್ಷೇತ್ರದ ಮಾಜಿ ಶಾಸಕ ಕೆ. ಕೆಂಪೇಗೌಡ (96) ವಿಧಿವಶರಾದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ವಿವಿಧ ನಾಯಕರು ಸಂತಾಪ ಸೂಚಿಸಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕೆ. ಕೆಂಪೇಗೌಡರು ಬುಧವಾರ ನಿಧನ ಹೊಂದಿದ್ದಾರೆ. ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಮಳೆಯಿಂದ ಮಂಡ್ಯ ಜಿಲ್ಲೆಯಲ್ಲಿ 750 ಕೋಟಿ ರೂ. ಹಾನಿ, ಹಂತ ಹಂತವಾಗಿ ಪರಿಹಾರ
ಕೆ. ಕೆಂಪೇಗೌಡ ಮೂರು ಬಾರಿ ಶಾಸಕರಾಗಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದರು. ವ್ಯವಸಾಯೋತ್ಪನ್ನ ಸಹಕಾರ ಸಂಘದ ನಿರ್ದೇಶಕರಾಗಿ ಅವರು ರಾಜಕೀಯಕ್ಕೆ ಪ್ರವೇಶ ಮಾಡಿದ್ದರು.
ಮಂಡ್ಯ ಜಿಲ್ಲೆಯ ಮಳೆ ಸಂತ್ರಸ್ತರಿಗೆ ತಕ್ಷಣವೇ ಅಗತ್ಯ ಪರಿಹಾರ: ಸಚಿವ ಕೆ ಗೋಪಾಲಯ್ಯ
1983ರಲ್ಲಿ ಚಿನಕುರಳಿ ಗ್ರಾಮದ ಚೇರ್ಮನ್ ಆಗಿದ್ದರು. ಆಗ ಎದುರಾದ ವಿಧಾನಸಭೆ ಚುನಾವಣೆಯಲ್ಲಿ ಜನತಾಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. 1985ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದರು.
ಬಳಿಕ ಕಾಂಗ್ರೆಸ್ ಪಕ್ಷ ಸೇರಿದ್ದ ಕೆ. ಕೆಂಪೇಗೌಡರು 1999ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಸರಳ ಜೀವನದಿಂದಲೇ ಪ್ರಸಿದ್ಧಿ ಪಡೆದಿದ್ದರು. ಬೈಕ್, ಸರ್ಕಾರಿ ಬಸ್ನಲ್ಲಿಯೇ ಸಂಚಾರ ನಡೆಸುತ್ತಿದ್ದರು.
ಬಿಜೆಪಿ ಬಂಡಾಯ ಶಮನಕ್ಕೆ ಪಾಂಡವಪುರ ಸಕ್ಕರೆ ಕಾರ್ಖಾನೆ ಕೊಡುಗೆ!
ಡಿ. ಕೆ. ಶಿವಕುಮಾರ್ ಸಂತಾಪ; ಮಂಡ್ಯ ಜಿಲ್ಲೆ ಪಾಂಡವಪುರದ ಮಾಜಿ ಶಾಸಕ ಕೆ. ಕೆಂಪೇಗೌಡರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. "ಸರಳ ಹಾಗೂ ಸಜ್ಜನ ರಾಜಕಾರಣಿ ಕೆಂಪೇಗೌಡರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಚಿನಕುರುಳಿ ಕೆಂಪೇಗೌಡರು ಎಂದೇ ಖ್ಯಾತಿ ಪಡೆದಿದ್ದ ಅವರು ಹಿಂದೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿದ್ದರು. ಒಟ್ಟು ಮೂರು ಬಾರಿ ವಿಧಾನಸಭೆ ಪ್ರತಿನಿಧಿಸಿದ್ದರು" ಎಂದು ಹೇಳಿದ್ದಾರೆ.
"ಕೆಂಪೇಗೌಡರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ಬಂಧು ಬಳಗಕ್ಕೆ ಈ ಅಗಲಿಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಡಿ. ಕೆ. ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಚಲುವರಾಯ ಸ್ವಾಮಿ ಸಂತಾಪ; ಮಾಜಿ ಶಾಸಕಕೆ. ಕೆಂಪೇಗೌಡ ನಿಧನಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಸಂತಾಪ ಸೂಚಿಸಿದ್ದಾರೆ. ಕೆ. ಕೆಂಪೇಗೌಡ ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರ ನೋವಿನಲ್ಲಿ ನಾನೂ ಕೂಡ ಭಾಗಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.