ಮಂಡ್ಯದಲ್ಲಿ ಆತಂಕವಿಲ್ಲದೆ SSLC ಪರೀಕ್ಷೆ ಬರೆಯಲು ಸಿದ್ಧತೆ
ಮಂಡ್ಯ, ಜೂನ್ 04: ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ ಬೆನ್ನಲ್ಲೇ ಮಂಡ್ಯದಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ಮುಂಜಾಗೃತಾ ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ವ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.
ಜೂನ್ 25 ರಿಂದ ಜುಲೈ 3ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಜಿಲ್ಲೆಯಲ್ಲಿ 11,099 ಬಾಲಕರು, 10,161 ಬಾಲಕಿಯರು ಸೇರಿದಂತೆ 21,260 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಸಂಬಂಧ 82 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, 449 ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಇನ್ನು ಪರೀಕ್ಷೆ ಕುರಿತಂತೆ ಜಿಪಂ ಸಿಇಓ ಕೆ.ಯಾಲಕ್ಕಿಗೌಡ ಮಾಹಿತಿ ನೀಡಿದ್ದು, ಅದರ ಸಾರಾಂಶ ಹೀಗಿದೆ...
'ಕೊರೊನಾ ನಡುವೆ ಕಲಿಕೆ': ಶಾಲಾ ಆರಂಭದ ಬಗ್ಗೆ ಸುರೇಶ್ ಕುಮಾರ್ ಮಾಹಿತಿ
ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಕೆ
ಯಾವುದೇ ಪರೀಕ್ಷಾ ಕೇಂದ್ರಗಳು ಕಂಟೈನ್ಮೆಂಟ್ ಝೋನ್ ಪ್ರದೇಶದಲ್ಲಿ ನಡೆಯುವುದಿಲ್ಲ. ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಟಿವಿ ಅಳವಡಿಸಲಾಗಿದ್ದು, ಪ್ರತಿ ಕೊಠಡಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೂಚನೆಯಂತೆ ಗರಿಷ್ಠ 18 ರಿಂದ 20 ವಿದ್ಯಾರ್ಥಿಗಳನ್ನು 3 ಅಡಿಗಳ ಸಾಮಾಜಿಕ ಅಂತರ ಕಾಯ್ದುಕೊಂಡು ಪೀಠೋಪಕರಣಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಎರಡು ಕೊಠಡಿಗಳನ್ನು ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದ್ದು, ಥರ್ಮಲ್ ಸ್ಕಾನಿಂಗ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ
ಪರೀಕ್ಷಾ ಸಂದರ್ಭದಲ್ಲಿ ಯಾವುದಾದರೂ ಪರೀಕ್ಷಾ ಕೇಂದ್ರದ ನಿರ್ದಿಷ್ಟ ಪ್ರದೇಶ ಕಂಟೈನ್ಮೆಂಟ್ ಝೋನ್ ಘೋಷಣೆಯಾದಲ್ಲಿ ಪರೀಕ್ಷಾ ಕೇಂದ್ರವನ್ನೇ ಮಾರ್ಪಾಡು ಮಾಡಲು ಪ್ರತಿ ತಾಲೂಕಿನಲ್ಲಿ ಎರಡು ಶಾಲೆಗಳನ್ನು ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನಾಗಿ ಕಾಯ್ದಿರಿಸಲಾಗಿದೆ. ಹೊರ ಜಿಲ್ಲೆ, ಹೊರ ತಾಲೂಕಿನ ವಲಸೆ, ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅವರು ವಾಸವಿರುವ ಸ್ಥಳದ ಸಮೀಪದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಿಂದ ಹೊರಗೆ ಪರೀಕ್ಷೆ ಬರೆಯಲು 134 ವಿದ್ಯಾರ್ಥಿಗಳು ಹಾಗೂ ಹೊರ ಜಿಲ್ಲೆಯಿಂದ 225 ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೆ ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ತಲಾ 1 ಮತ್ತು ಸ್ಥಳೀಯ ದಾನಿಗಳ ನೆರವಿನಿಂದ ಮತ್ತೊಂದು ಒಟ್ಟು 2 ಮಾಸ್ಕ್ಗಳನ್ನು ವಿತರಿಸಲು ಕ್ರಮ ವಹಿಸಲಾಗಿದೆ.
ಶುದ್ಧ ಕುಡಿಯುವ ನೀರಿನ ವ್ಯವಸ್ಥೆ
ಪರೀಕ್ಷಾ ಕೇಂದ್ರದ ದ್ವಾರದಲ್ಲಿ 150 ರಿಂದ 200 ವಿದ್ಯಾರ್ಥಿಗಳಿಗೆ ಒಂದರಂತೆ ತಪಾಸಣಾ ಕೇಂದ್ರವನ್ನು ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ, ವೀಕ್ಷಕರು, ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗಿದೆ. ಮೊಬೈಲ್ ಸ್ವಾಧೀನಾಧಿಕಾರಿ ಕೇಂದ್ರದ ಪ್ರವೇಶ ದ್ವಾರದಲ್ಲೇ ಎಲ್ಲ ಸಿಬ್ಬಂದಿಯ ಮೊಬೈಲ್ಗಳನ್ನು ತನ್ನ ಸ್ವಾಧೀನಕ್ಕೆ ಪಡೆಯಲು ಕ್ರಮ ವಹಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಸಿಬ್ಬಂದಿ ಮಾಸ್ಕ್ ಧರಿಸಿ ಬರುವುದು ಕಡ್ಡಾಯ. ಕೇಂದ್ರಗಳ ಸಿಬ್ಬಂದಿಗೆ ರೋಗಲಕ್ಷಣಗಳು ಕಂಡುಬಂದಲ್ಲಿ ಅವರನ್ನು ಕೈಬಿಟ್ಟು ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸೂಚನೆ ನೀಡಿದ್ದೇವೆ. ವಿದ್ಯಾರ್ಥಿಗಳಿಗೆ ಮನೆಯಿಂದಲೇ ಶುದ್ಧ ಕುಡಿಯುವ ನೀರಿನ ಬಾಟಲ್ ತರಲು ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲೂ ಶುದ್ಧ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ.
ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ನೇಮಕ
ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ನೇಮಕ ಮಾಡಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರಯಾಣಕ್ಕೆ ತೊಂದರೆಯಾದಲ್ಲಿ ಖಾಸಗಿ ಶಾಲಾ ವಾಹನ ವ್ಯವಸ್ಥೆ ಮಾಡುವುದಕ್ಕೆ ಕ್ರಮ ವಹಿಸಲಾಗಿದೆ. ಪ್ರತಿ ಶಾಲೆಯಿಂದ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳು ಯಾವುದೇ ಕಾರಣದಿಂದ ಪರೀಕ್ಷೆಗೆ ಗೈರು ಹಾಜರಾಗದಂತೆ ವಿದ್ಯಾರ್ಥಿವಾರು ಕ್ರಿಯಾಯೋಜನೆ ರೂಪಿಸುವಂತೆ ಶಾಲಾ ಮುಖ್ಯ ಶಿಕ್ಷಕರು, ಮುಖ್ಯ ಅಧೀಕ್ಷಕರಿಗೆ ಸೂಚನೆ ನೀಡಿದ್ದು, ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿರುವುದಾಗಿ ತಿಳಿಸಿದ್ದಾರೆ.