Mandya Riot: ಬಾಲ ಕತ್ತರಿಸದಿದ್ದರೆ ಇಂದಿನ ಪುಂಡರೇ ನಾಳಿನ ಉಗ್ರವಾದಿಗಳು: ಆರ್.ಅಶೋಕ
ಬೆಂಗಳೂರು, ಸೆಪ್ಟಂಬರ್ 12: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿವೆ. ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಅವರು ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮಂಡ್ಯದಲ್ಲಿ ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ ನಡೆದಿದೆ. ಹಿಂದೂ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲೆಸೆದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ ಮೂರ್ತಿ ಮೇಲೆ ಕಲ್ಲು, ಚಪ್ಪಲಿ ತೂರಾಡಿದ್ದಾರೆ. ಇದರಿಂದ ನಾಗಮಂಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ನಲ್ಲಿ ಆರ್.ಅಶೋಕ ಅವರು, ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಸಹಿಸಲು ಸಾಧ್ಯವಿಲ್ಲದ್ದು. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ
ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹದ್ದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಇದೊಂದು ಪೂರ್ವನಿಯೋಜಿತ ದಾಂಧಲೆ
ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗಿದ್ದಾರೆ.

ಇದೆಲ್ಲ ನೋಡಿದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಆಕ್ರೋಶ ಹೊರ ಹಾಕಿದರು.
ಕಾಂಗ್ರೆಸ್ನಿಂದ ಇಂಥವರಿಗೆ ಪ್ರೋತ್ಸಾಹ
ತೊಂದರೆಗೀಡಾದವರು ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಬಂದರೆ, ಅವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ ಮಾಡಿದ್ದಾರೆ. ನಾಗಮಂಗದಲ್ಲಿ ದಬ್ಬಾಳಿಕೆ ನಡೆಸುತ್ತಾರೆಂದರೆಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಅಂದಾಜಿಸಬಹುದೆಂದು ಹೇಳಿದರು.
ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ ಎಂದು ಅವರು ಆರೋಪಿಸಿದರು.
ಇಂದಿನ ಪುಂಡರೇ ನಾಳೆ ಉಗ್ರವಾದಿಗಳಾಗುತ್ತಾರೆ: ಅಶೋಕ
ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳನ್ನು ಈ ಕೊಡಲೇ ಬಂಧಿಸಬೇಕು. ಅವರೆಲ್ಲನ್ನು ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.












Click it and Unblock the Notifications