ಏ.13ರಂದು ನಿಖಿಲ್ ಪರವಾಗಿ ರಾಹುಲ್ ಗಾಂಧಿ ರೋಡ್ ಶೋ
Recommended Video

ಮಂಡ್ಯ, ಏಪ್ರಿಲ್ 10 : ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಆದರೆ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
'ಏಪ್ರಿಲ್ 13ರಂದು ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೆ.ಆರ್.ನಗರದಲ್ಲಿ ರಾಹುಲ್ ಗಾಂಧಿ ಅವರು ರೋಡ್ ಶೋ ನಡೆಸಲಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
'ಮೈತ್ರಿ ಅಭ್ಯರ್ಥಿ ನಿಖಿಲ್ ಅವರನ್ನು ಗೆಲ್ಲಿಸುವ ಸಂಬಂಧ ಅಗತ್ಯ ಕಾರ್ಯತಂತ್ರ ರೂಪಿಸಿದ್ದೇವೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಪರ ಕಾಂಗ್ರೆಸ್ನ ಯಾವೊಬ್ಬ ನಾಯಕನೂ ಇಲ್ಲ' ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಕೆ.ಆರ್.ನಗರದಲ್ಲಿ ರೋಡ್ ಶೋ ನಡೆಸಿದ ಬಳಿಕ ರಾಹುಲ್ ಗಾಂಧಿ ಅವರು ಪಕ್ಷದ ಜಿಲ್ಲಾ ನಾಯಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ. ಕೆ.ಆರ್.ನಗರ ಕ್ಷೇತ್ರ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿದ್ದರೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತದೆ.
ನಿಖಿಲ್ ಕುಮಾರಸ್ವಾಮಿ ಬೆಂಬಲಿಸುವ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ಕಾಂಗ್ರೆಸ್-ಜೆಡಿಎಸ್ ನಾಯಕರಲ್ಲಿ ಗೊಂದಲ ಇನ್ನೂ ಮುಂದುವರೆದಿದೆ. ಚಲುವರಾಯಸ್ವಾಮಿ ಸೇರಿದಂತೆ ಇತರ ಹಲವು ನಾಯಕರು ನಿಖಿಲ್ ಬೆಂಬಲಿಸಲು ಒಪ್ಪಿಗೆ ನೀಡಿಲ್ಲ.
ಕೆ.ಆರ್.ನಗರದಲ್ಲಿ ರೋಡ್ ಶೋ ನಡೆಸಿದರೆ ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿಯೂ ಪರಿಣಾಮ ಬೀರಲಿದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರವಾಗಿದೆ.












Click it and Unblock the Notifications