ರಮ್ಯಾ ಮುಂದಿನ ರಾಜಕೀಯ ನಡೆ : ಯಾರು, ಏನು ಹೇಳಿದರು?
ಮಂಡ್ಯ, ನವೆಂಬರ್ 29 : ಮಾಜಿ ಸಂಸದೆ, ನಟಿ ರಮ್ಯಾ ಇಂದು 35ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ದಿನವೇ ರಮ್ಯಾ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.
ರಮ್ಯಾ ಅವರು ಸದ್ಯ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಆಪ್ತರ ಜೊತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಅವರು ಮಾತುಕತೆ ನಡೆಸಿದ್ದು, ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಕ್ಷೇತ್ರದಿಂದ ರಮ್ಯಾ ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. 'ರಮ್ಯಾ ಚುನಾವಣೆಗೆ ಸ್ಪರ್ಧಿಸಿದರೆ ಸ್ವಾಗತ. ಹೈಕಮಾಂಡ್ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುವೆ' ಎಂದು ಮಂಡ್ಯ ಶಾಸಕ ಅಂಬರೀಶ್ ಮಂಗಳವಾರ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ರಮ್ಯಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ. ಜಿಲ್ಲಾ ರಾಜಕಾರಣಕ್ಕೆ ರಮ್ಯಾ ಅವರ ಅಗತ್ಯವಿದೆ ಎಂದು ಜಿಲ್ಲೆಯ ಕಾರ್ಯಕರ್ತರು, ರಮ್ಯಾ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ರಮ್ಯಾ ಅವರು ಅಧಿಕೃತವಾಗಿ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

ರಮ್ಯಾ ಮಂಡ್ಯ ರಾಜಕಾರಣಕ್ಕೆ ಬರಬೇಕು
'ನಮ್ಮ ನೆಚ್ಚಿನ ರಾಜಕಾರಣಿಯಾದ ರಮ್ಯಾ ಮಂಡ್ಯ ರಾಜಕೀಯಕ್ಕೆ ಬರಬೇಕು. ಜಿಲ್ಲೆಯ ಯಾವುದಾದರೂ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸಲಿ' ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ನಿರ್ದೇಶಕ ಶಶಿಕುಮಾರ್ ಮನವಿ ಮಾಡಿದ್ದಾರೆ.

ರಮ್ಯಾ ಸ್ಪರ್ಧೆ ಮಾಡಿದರೆ ಸ್ವಾಗತಿಸುವೆ
'ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ರಮ್ಯಾ, ಸೌಮ್ಯ, ಸುಮಾ ಯಾರೇ ಬಂದರೂ ಓಕೆ. ಪಕ್ಷ ಟಿಕೆಟ್ ಕೊಟ್ಟರೆ ನಾನು ಸ್ಪರ್ಧಿಸುತ್ತೇನೆ. ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರಲು ಹೈಕಮಾಂಡ್ ಒಪ್ಪಿಗೆ ಪಡೆಯಬೇಕು. ರಮ್ಯಾ ಅವರಿಗೆ ಟಿಕೆಟ್ ನೀಡಿದರೆ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಅದು ಪಕ್ಷದ ಕೆಲಸ' ಎಂದು ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ಹೇಳಿದರು.

ಡಿ.ಕೆ.ಸುರೇಶ್ ಹೇಳಿದ್ದೇನು?
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ರಮ್ಯಾ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಹಲವು ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ರಮ್ಯಾ ಅವರು ರಾಜ್ಯ ರಾಜಕಾರಣಕ್ಕೆ ಬರುವ ಆಸಕ್ತಿ ಹೊಂದಿದ್ದರೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ' ಎಂದು ಹೇಳಿದ್ದಾರೆ.

ಆಪ್ತರ ಬಳಿ ರಮ್ಯಾ ಮಾತುಕತೆ
'ಪಕ್ಷದ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮಾತ್ರ ಸೂಚನೆ ನೀಡಿದೆ. ಆದ್ದರಿಂದ, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ರಮ್ಯಾ ಆಪ್ತರ ಬಳಿ ಹೇಳಿದ್ದಾರೆ' ಎಂಬ ಸುದ್ದಿಗಳು ಹರಿದಾಡುತ್ತಿವೆ.












Click it and Unblock the Notifications