ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ-ಸಚಿವ ಮಧು ಬಂಗಾರಪ್ಪ
ಮಂಡ್ಯ, ಆಗಸ್ಟ್ 18: ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದರೂ ಸಹ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿನ ಶಿಕ್ಷಕರ ಕೊರತೆ ನಿಗಿಸಲು ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಹೊಸಹಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪೂರಕ ಪೋಷಣ ಪೌಷ್ಠಿಕ ಆಹಾರ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, 30 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿದರೂ ಸಹ ಶಿಕ್ಷಕರ ಕೊರತೆ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.

ಒಂದನೇ ತರಗತಿಯಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿತ್ತು. ಬಿಸಿಯೂಟದ ವೇಳೆ ಜೊತೆಗಿದ್ದ ಒಂಭತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ಕೊಡಲು ಸಾಧ್ಯವಾಗುತ್ತಿರಲಿಲ್ಲ. ವಿದ್ಯಾರ್ಥಿಗಳು ಮೊಟ್ಟೆಯನ್ನು ಹಂಚಿಕೊಂಡು ತಿನ್ನುತ್ತಿದ್ದರು, ಅಂತಹ ಮಾನವೀಯ ಕ್ಷಣ ಶಾಲೆಗಳಲ್ಲಿ ಕಾಣಲಾಗಿತ್ತು, ಪರಿಸ್ಥಿತಿಯನ್ನು ಮುಖ್ಯಮಂತ್ರಿ ಜೊತೆ ವಿವರಿಸಿದಾಗ ಅವರು ಯಾವ ವಿದ್ಯಾರ್ಥಿಗಳಿಗೂ ತಾರತಮ್ಯ ಆಗಬಾರದು, ಒಂದರಿಂದ ಹತ್ತನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಮೊಟ್ಟೆ ವಿತರಣೆ ಮಾಡಲು ತೀರ್ಮಾನಿಸಿದ್ದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ದೊರೆತಿದೆ ಎಂದು ವಿವರಿಸಿದರು.
ನಮ್ಮದು ಮಾತು ತಪ್ಪದ ಸರ್ಕಾರ
ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷದ ಹೊರಡಿಸಿದ್ದ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಜಾರಿಗೊಳಿಸುವ ಮೂಲಕ ಮಾತು ತಪ್ಪದೇ ಸರ್ಕಾರ ಮುನ್ನೆಡೆದಿದೆ. ಪ್ರಣಾಳಿಕೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇರಲಿಲ್ಲ, ಆದರೂ ಸಹ ಯೋಜನೆ ಜಾರಿಗೊಳಿಸಿರುವುದು ಸರ್ಕಾರಕ್ಕೆ ಗೌರವ ತಂದಿದೆ ಎಂದು ಶ್ಲಾಘಿಸಿದರು.

ಕರ್ನಾಟಕ ರಾಜ್ಯದಲ್ಲಿ 1.20 ಕೋಟಿ ವಿದ್ಯಾರ್ಥಿಗಳಿದ್ದು, ಸಾಕಷ್ಟು ಸಮಸ್ಯೆಗಳಿವೆ, ಶಿಕ್ಷಕರು, ಶಾಲಾ ಕೊಠಡಿ ಕೊರತೆ ಸೇರಿ ಅನೇಕ ಸಮಸ್ಯೆಗಳ ಬಗ್ಗೆ ಚುನಾಯಿತ ಜನಪ್ರತಿನಿಧಿಗಳು ಸಹ ಬೆಳಕು ಚೆಲ್ಲಿದ್ದಾರೆ, ಮುಂದಿನ ದಿನಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಪಾರದರ್ಶಕ ವರ್ಗಾವಣೆ
ಪ್ರತಿ ಪಕ್ಷಗಳು ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಬೊಬ್ಬೆ ಹಾಕುತ್ತಿವೆ. ಆದರೆ ನಮ್ಮ ಇಲಾಖೆಯಲ್ಲಿ ಅಂತಹ ಅವಕಾಶವಿಲ್ಲ, ಕೌನ್ಸಿಲಿಂಗ್ ಮೂಲಕ ಶಿಕ್ಷಕರ ವರ್ಗಾವಣೆ ನಡೆದಿದೆ. ಎಲ್ಲವೂ ಪಾರದರ್ಶಕವಾಗಿ, ಮುಕ್ತವಾಗಿ ನಡೆದಿದೆ. ಯಾರೂ ಸಹ ನಮ್ಮ ಇಲಾಖೆಯ ಬಗ್ಗೆ ಬೊಟ್ಟು ಮಾಡಿ ತೋರಿಸುವ ಮಟ್ಟಕ್ಕೆ ಹೋಗಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ, ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಾಬು ಬಂಡಿಸಿದ್ದೇಗೌಡ, ಮಧು ಜಿ.ಮಾದೇಗೌಡ ಹಾಗೂ ಜಿಲ್ಲಾಧಿಕಾರಿ ಕುಮಾರ್ ಭಾಗವಹಿಸಿದ್ದರು.












Click it and Unblock the Notifications