ಕೆಆರ್ ಎಸ್ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಮಂಡ್ಯ, ಆಗಸ್ಟ್ 10 : ಕೇವಲ ಒಂದೇ ದಿನದ ಅವಧಿಯಲ್ಲಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 10 ಅಡಿ ಏರಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಕಾವೇರಿ ಜಲಾನಯನ ಭಾಗದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ತಲುಪಿದೆ. ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ.
ಕೆಆರ್ಎಸ್ಗೆ ಭಾರಿ ನೀರು; 100 ಅಡಿ ತಲುಪಿದ ನೀರಿನ ಮಟ್ಟ
ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದ್ದು. ಕೃಷ್ಣರಾಜಸಾಗರ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ.
ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೇಮಾವತಿ ಜಲಾಶಯದಿಂದ 79 ಸಾವಿರ ಕ್ಯೂಸೆಕ್ ನೀರು ಹಾಗೂ ಹಾರಂಗಿ ಜಲಾಶಯದಿಂದ 16 ಸಾವಿರಕ್ಕೂ ಹೆಚ್ಚು ನೀರನ್ನು ಬಿಡಲಾಗುತ್ತಿದೆ. ಇದರಿಂದ ಕೆಆರ್ ಎಸ್ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ಗರಿಷ್ಠ 124.80 ಅಡಿ ಸಾಮರ್ಥ್ಯದ ಕೆಆರ್ ಎಸ್ ಸದ್ಯದಲ್ಲೇ ಪೂರ್ಣ ಪ್ರಮಾಣದಲ್ಲಿ ತುಂಬುವ ಸಾಧ್ಯತೆಗಳಿವೆ ಎನ್ನಲಾಗಿದೆ.












Click it and Unblock the Notifications