ಕಾವೇರಿ ವಿವಾದ: ಮಂಡ್ಯ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್!
ಮಂಡ್ಯ, ಜುಲೈ 11 : ಕಾವೇರಿ ನೀರು ಹಂಚಿಕೆ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಒಂದೆಡೆ ವಿಚಾರಣೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮಂಡ್ಯ ನಗರ ಸೇರಿದಂತೆ ಕೆಆರ್ ಎಸ್ ಜಲಾಶಯದ ಬಳಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲೆಡೆ ಖಾಕಿಮಯವಾಗಿದೆ. ಅಷ್ಟೇ ಅಲ್ಲದೆ ಮಂಡ್ಯದಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಎಚ್ಚರಿಕೆ ನೀಡಿದರು.
ಕಾವೇರಿ ಹೋರಾಟಗಾರರ ರಸ್ತೆಗಿಳಿದು ಪ್ರತಿಭಟನೆ ನಡೆಸುವುದಲ್ಲದೆ, ಆಕ್ರೋಶಗೊಂಡು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಲ್ಲಿ ಅಂತಹವರ ವಿರುದ್ಧ 107 ಸಿಆರ್ ಪಿಸಿಯಡಿಯಲ್ಲಿ ಮೊಕದ್ದಮೆ ದಾಖಲು ಮಾಡಲು ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿರುವುದಾಗಿ ತಿಳಿದು ಬಂದಿದೆ.
ಒಂದು ವೇಳೆ ಆಕ್ರೋಶಿತರು ಮಂಡ್ಯ ನಗರದಲ್ಲಿರುವ ತಮಿಳು ಕಾಲೋನಿಗೆ ನುಗ್ಗಿ ತೊಂದರೆ ಕೊಡಬಹುದು ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಕಾಲೋನಿಯಾದ್ಯಂತ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.
ಈ ನಡುವೆ ಜಿಲ್ಲೆಯ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ರೈತರು, ಹೋರಾಟಗಾರರ ಸಭೆ ನಡೆಸಲಾಗಿದ್ದು, ಸಾರ್ವಜನಿಕ, ಖಾಸಗಿ ಆಸ್ತಿ-ಪಾಸ್ತಿಗಳನ್ನು ನಾಶಪಡಿಸದಂತೆ ಹೋರಾಟಗಾರರಿಗೆ ಸೂಚಿಸಲಾಗಿದೆ.
ಮತ್ತೊಂದೆಡೆ ಕೆಆರ್ ಎಸ್ ಬೃಂದಾವನಕ್ಕೆ ಪ್ರವಾಸಿಗರನ್ನು ಬಿಡಲಾಗುತ್ತಿದೆಯಾದರೂ ಯಾವುದೇ ವೇಳೆಯಲ್ಲಿ ಪ್ರವೇಶವನ್ನು ನಿರ್ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬೇರೆಡೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆಯಿಸಿ ಬಂದೋಬಸ್ತ್ ಮಾಡಲಾಗಿದೆ.
ಮಂಡ್ಯದಲ್ಲಿ 10 ರಾಜ್ಯ ಸಶಸ್ತ್ರ ಮೀಸಲು ಪಡೆ ತುಕಡಿ, 25 ಜಿಲ್ಲಾ ಸಶಸ್ತ್ರ ಮೀಸಲು ಪಡೆ ತುಕಡಿ, 400 ಗೃಹ ರಕ್ಷಕ ದಳದ ಸಿಬ್ಬಂದಿ, 2 ಸಾವಿರ ಅಧಿಕಾರಿ ಮತ್ತು ಸಿಬ್ಬಂದಿ, 500 ಹೊರ ಜಿಲ್ಲೆ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಇನ್ನು ಕೆಆರ್ ಎಸ್ ಬಳಿ 6 ರಾಜ್ಯ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆ, 100ಕ್ಕೂ ಹೆಚ್ಚು ಮಂದಿ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದು, ಒಳಗಡೆ ಪ್ರವೇಶಿಸದಂತೆ ಬ್ಯಾರಿಕೇಡ್ ಹಾಕಿ ಕಾವಲು ಕಾಯಲಾಗುತ್ತಿದೆ.