ಪ್ರಧಾನಿಗೆ ಭದ್ರತಾ ವೈಫಲ್ಯ; ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕು; ಸಿಎಂ ಬೊಮ್ಮಾಯಿ
ಮಂಡ್ಯ, ಜನವರಿ 05: ಪ್ರಧಾನಿ ನರೇಂದ್ರ ಮೋದಿಯವರಿಗೆ ಸೂಕ್ತ ಭದ್ರತೆ ಒದಗಿಸಲು ಸಾಧ್ಯವಾಗದ ಪಂಜಾಬ್ ಸರ್ಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ. ಹೀಗಾಗಿ ಪಂಜಾಬ್ ಸರ್ಕಾರವನ್ನು ಕೂಡಲೇ ಬರಖಾಸ್ತು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತಾ ಲೋಪವಾಗಿರುವ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಪಂಜಾಬ್ ಗಡಿಯಲ್ಲಿ ಪಂಜಾಬ್ ಸರ್ಕಾರ ಪ್ರಧಾನಮಂತ್ರಿಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ದೇಶದ ಪ್ರಧಾನಮಂತ್ರಿಗಳು ಮುಕ್ತವಾಗಿ ಓಡಾಡಲು ವ್ಯವಸ್ಥೆಗಳನ್ನು ಮಾಡಿಕೊಡದೇ ಇರುವುದು ಬಹುತೇಕವಾಗಿ ದೇಶದಲ್ಲಿ ಖಂಡನೆಯಾಗುತ್ತಿದೆ. ಇದೊಂದು ಖಂಡಾನಾರ್ಹ ವಿಚಾರ. ಪ್ರಧಾನಮಂತ್ರಿಗಳಿಗೆ ಗೌರವ ಕೊಡುವುದು ಎಲ್ಲ ಸರ್ಕಾರಗಳ ಕರ್ತವ್ಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಈ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಪಂಜಾಬ್ ಸಿಎಂ ಬಂಧಿಸಲು ನಳಿನ್ ಕುಮಾರ್ ಕಟೀಲ್ ಆಗ್ರಹ
ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯ ವಿಚಾರದಲ್ಲಿ ವಿಫಲತೆಗೆ ಪಂಜಾಬ್ನ ಕಾಂಗ್ರೆಸ್ ಸರ್ಕಾರವೇ ಕಾರಣ. ಇದು ಉದ್ದೇಶಪೂರ್ವಕವಾದ ರಾಜಕೀಯದ ದುರುದ್ದೇಶದ ಕ್ರಮ. ನರೇಂದ್ರ ಮೋದಿಯವರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಪಂಜಾಬ್ ಸರ್ಕಾರವನ್ನು ಈ ಕೂಡಲೇ ವಜಾ ಮಾಡಿ ಅಲ್ಲಿನ ಮುಖ್ಯಮಂತ್ರಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ನ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿ ಆತಂಕದ ವಾತಾವರಣವನ್ನು ನಿರ್ಮಿಸಿದೆ. ಇದು ಅತ್ಯಂತ ಕೀಳುಮಟ್ಟದ ರಾಜಕೀಯ ಪ್ರದರ್ಶನವಾಗಿದೆ. ಪಂಜಾಬ್ನ ಕಾಂಗ್ರೆಸ್ ಸರ್ಕಾರವು ಈ ಮೂಲಕ ತನ್ನ ಕೀಳುಮಟ್ಟದ ರಾಜಕೀಯವನ್ನು ಅನಾವರಣಗೊಳಿಸಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ಪ್ರಧಾನಿಯವರು ಒಂದು ರಾಜ್ಯಕ್ಕೆ ಭೇಟಿ ನೀಡಿದಾಗ ಅವರ ರಕ್ಷಣೆಯ ಹೊಣೆ ಅದೇ ರಾಜ್ಯಕ್ಕೆ ಸೇರುತ್ತದೆ. ಆದರೆ, ಪಂಜಾಬ್ನ ಕಾಂಗ್ರೆಸ್ ಸರ್ಕಾರವು ಹೊಣೆಗೇಡಿಯಾಗಿ ವರ್ತಿಸಿದೆ. ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡ ಅಲ್ಲಿನ ಕಾಂಗ್ರೆಸ್ ಸರ್ಕಾರವು ದೇಶದ ರೈತರು ಪ್ರಧಾನಿಯವರ ವಿರುದ್ಧ ಇದ್ದಾರೆಂಬ ತೋರಿಸಲು ಈ ರೀತಿಯ ಪಿತೂರಿಯ ಕಾರ್ಯ ಮಾಡಿತ್ತು. ನಿಜಕ್ಕೂ ಇದು ಬಹಳ ಗಂಭೀರ ಸ್ವರೂಪದ್ದು. ಇದು ಸರ್ವದಾ ಖಂಡನಾರ್ಹ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
Recommended Video
ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಪ್ರಧಾನಿ ಮೋದಿ
ಪಂಜಾಬ್ನ ಫ್ಲೈಓವರ್ನಲ್ಲಿ ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಸಿಲುಕಿರುವ ಘಟನೆ ವರದಿಯಾಗಿದೆ.
ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫಿರೋಜ್ಪುರದಲ್ಲಿ ಸಮಾವೇಶ ರದ್ದು ಮಾಡಿದ್ದಾರೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.

ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿಮೀ ದೂರದಲ್ಲಿ, ಪ್ರಧಾನಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ಲೈಓವರ್ನಲ್ಲಿ ಸಿಲುಕಿದ್ದರು, ಬಳಿಕ ಬತಿಂಡಾದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಏರ್ಪೋರ್ಟ್ಗೆ ತೆರಳಿದರು. ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರ ಇರುವುದೇ ಈ ವೈಫಲ್ಯಕ್ಕೆ ಕಾರಣ ಎಂದು ಗೃಹ ಸಚಿವಾಲಯ ತಿಳಿಸಿದೆ.
ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳದಲ್ಲಿ ಹೆಲಿಕಾಪ್ಟರ್ನಲ್ಲಿ ಮೋದಿ ಆಗಮಿಸಬೇಕಿತ್ತು ಆದರೆ ವಾತಾವರಣ ಸರಿ ಇಲ್ಲದ ಕಾರಣ ಅನಿವಾರ್ಯವಾಗಿ ಕಾರಿನಲ್ಲಿ ಬರಬೇಕಾಯಿತು. ಮೆಮೋರಿಯಲ್ನಿಂದ 30 ಕಿ.ಮೀ ದೂರದಲ್ಲಿ ಫ್ಲೈಓವರ್ ಮೇಲೆ ಕಾನ್ವಾಯ್ ಬರುತ್ತಿದ್ದಂತೆ ಪ್ರತಿಭಟನಾಕಾರರು ಸುತ್ತುವರೆದರು.












Click it and Unblock the Notifications