ಸಿಎಂ ಬಿ. ಎಸ್. ಯಡಿಯೂರಪ್ಪಗೆ ಎಸ್. ಎಂ. ಕೃಷ್ಣ ಪತ್ರ
Recommended Video
ಮಂಡ್ಯ, ಫೆಬ್ರವರಿ 16 : ಪುಲ್ವಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಎಚ್. ಗುರು ಎಂಬ ಯೋಧ ಹುತಾತ್ಮರಾಗಿದ್ದರು. ದಾಳಿ ನಡೆದು ಒಂದು ವರ್ಷ ಕಳೆದರೂ ಗುರು ಅವರ ಸ್ಮಾರಕ ನಿರ್ಮಾಣವಾಗಿಲ್ಲ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪಗೆ ಕೇಂದ್ರದ ಮಾಜಿ ಸಚಿವ ಎಸ್. ಎಂ. ಕೃಷ್ಣ ಪತ್ರ ಬರೆದಿದ್ದಾರೆ.
ಯೋಧನ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕಿದೆ. ಅದನ್ನು ಕಾರ್ಯರೂಪಕ್ಕೆ ಇಳಿಸಬೇಕಾದ ಜಿಲ್ಲಾಡಳಿತ ಮತ್ತು ಸರ್ಕಾರ ಕ್ರಮ ವಹಿಸದೆ ನಿರ್ಲಕ್ಷಿಸಿರುವುದು ಸಾರ್ವಜನಿಕರ ಅವಕೃಪೆಗೆ ಒಳಗಾಗಿದೆ.
ಯಾವುದೇ ಸರ್ಕಾರ ಇಂತಹ ವಿಷಯಗಳ ಬಗ್ಗೆ ತುರ್ತು ಗಮನ ವಹಿಸುವುದು ಅವಶ್ಯ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಮಂಡ್ಯ ಜಿಲ್ಲಾಡಳಿತ ಒಂದು ವರ್ಷವಾದರೂ ವೀರಯೋಧನ ಚಿತಾಭಸ್ಮವನ್ನು ವಿಸರ್ಜನೆ ಮಾಡಿಲ್ಲ. ಯಾವ ಕಾರಣಕ್ಕೆ ವಿಸರ್ಜಿಸಿಲ್ಲ ಎಂಬುದನ್ನು ಪತ್ತೆ ಹಚ್ಚಿ ಸಂಪ್ರದಾಯದ ಪ್ರಕಾರ ವಿಸರ್ಜನಾ ಕಾರ್ಯವನ್ನು ಕೈಗೊಳ್ಳಲು ತಾವು ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಬಿ. ಎಸ್. ಯಡಿಯೂರಪ್ಪನವರೇ, ಫೆ. 14, 2019ರಂದು ಕಾಶ್ಮೀರದ ಫುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಶ್ರೀ ಹೆಚ್. ಗುರು ಎಂಬ ವೀರ ಯೋಧ ಹುತಾತ್ಮರಾಗಿದ್ದಾರೆ.
ಒಂದು ವರ್ಷ ಕಳೆದರೂ ಸದರಿ ಯೋಧರ ಚಿತಾಭಸ್ಮವನ್ನು ವಿಸರ್ಜಿಸದೆ, ಅವರ ಸ್ಮಾರಕವನ್ನೂ ನಿರ್ಮಿಸದೆ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ದುರಾದೃಷ್ಠಕರ ಸಂಗತಿಯಾಗಿದೆ. ಪುಲ್ವಾಮಾದ ದಾಳಿ ಅತ್ಯಂತ ಘೋರ ಕೃತ್ಯವಾಗಿದ್ದು, ಇಡೀ ರಾಷ್ಟ್ರ ಸದರಿ ದಾಳಿಯ ಬಗ್ಗೆ ಕಂಬನಿ ಮಿಡಿದಿತ್ತು.
ಇಂತಹ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಕರ್ನಾಟಕದ ಯೋಧನ ಸ್ಮಾರಕ ನಿರ್ಮಾಣದ ಬಗ್ಗೆ ಯಾವುದೇ ಕ್ರಮ ವಹಿಸದೆ ಆಡಳಿತ ವರ್ಗ ನಿರ್ಲಕ್ಷ್ಯ ವಹಿಸಿರುವುದು ಅತ್ಯಂತ ಖಂಡನೀಯ. ಸದರಿ ಯೋಧನ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕಿದ್ದು, ಅದನ್ನು ಕಾರ್ಯರೂಪಕ್ಕೆ ಇಳಿಸಬೇಕಾದ ಜಿಲ್ಲಾಡಳಿತ ಮತ್ತು ಸರ್ಕಾರ ಕ್ರಮ ವಹಿಸದೆ ನಿರ್ಲಕ್ಷಿಸಿರುವುದು ಸಾರ್ವಜನಿಕರ ಅವಕೃಪೆಗೆ ಒಳಗಾಗಿದೆ.
ಯಾವುದೇ ಆಡಳಿತ ಸರ್ಕಾರ ಇಂತಹ ವಿಷಯಗಳ ಬಗ್ಗೆ ತುರ್ತು ಗಮನ ವಹಿಸುವುದು ಅವಶ್ಯವಿದ್ದು, ನಾನು ಮುಖ್ಯಮಂತ್ರಿಯಾಗಿದ್ದಾಗ ಸ್ಥಾಪನೆಗೊಂಡ ಕಾವೇರಿ ನೀರಾವರಿ ನಿಗಮದ ಮೂಲಕ ತುರ್ತಾಗಿ ಸದರಿ ವೀರ ಯೋಧನ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸಿ ಅದರ ನಿರ್ವಹಣೆಯನ್ನೂ ಕಾವೇರಿ ನೀರಾವರಿ ನಿಗಮದ ಮೂಲಕ ನಿರ್ವಹಿಸಿ ಯೋಧನ ಬಲಿದಾನವನ್ನು ನೆನೆಯುವಂತಹ ಕಾರ್ಯ ತಮ್ಮಿಂದ ಆಗಲಿ ಎಂದು ಆಶಿಸುತ್ತೇನೆ.
ಈ ಕೂಡಲೇ ಮಂಡ್ಯ ಜಿಲ್ಲಾಡಳಿತ ಒಂದು ವರ್ಷವಾದರೂ ವಿಸರ್ಜನೆಯಾಗದೆ ನಿರ್ಲಕ್ಷ್ಯಕ್ಕೊಳಗಾಗಿರುವ ವೀರ ಯೋಧ ಗುರುವಿನ ಚಿತಾಭಸ್ಮವನ್ನು ಯಾವ ಕಾರಣಕ್ಕೆ ವಿಸರ್ಜಿಸಿಲ್ಲ ಎಂಬುದನ್ನು ಪತ್ತೆ ಹಚ್ಚಿ ಸಂಪ್ರದಾಯದಂತೆ ವಿಸರ್ಜನಾ ಕಾರ್ಯವನ್ನು ಕೈಗೊಳ್ಳಲು ತಾವು ಸೂಕ್ತ ನಿರ್ದೇಶನ ನೀಡುವಂತೆ ಕೋರುತ್ತೇನೆ.
ಈ ಬಗ್ಗೆ ತಾವು ತಕ್ಷಣ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ವೀರ ಯೋಧನ ಆತ್ಮಕ್ಕೆ ಶಾಂತಿ ಮತ್ತು ಅವರ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ.












Click it and Unblock the Notifications