ಮಂಡ್ಯ ಜಿಲ್ಲೆಯತ್ತ ಸರ್ಕಾರದ ಚಿತ್ತ; ಕೆರೆ ತುಂಬಿಸುವ ಯೋಜನೆಗೆ ಸಂಪುಟ ಅಸ್ತು!
ಬೆಂಗಳೂರು, ನ. 08: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಹತ್ತಿರ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಕುಡಿಯುವ ನೀರಿಗಾಗಿ 11 ಕೆರೆಗಳನ್ನು ತುಂಬಿಸುವ ಕಾಮಗಾರಿಯ (ರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ ಹಂತ 2) 22.5 ಕೋಟಿ ರೂ. ಮೊತ್ತದ ಯೋಜನಾ ವರದಿಗೆ ರಾಜ್ಯ ಸಚಿವ ಸಂಪುಟ ಸೋಮವಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಭಾಗಶಃ ಪ್ರದೇಶವು ಮಳೆಯಾಶ್ರಿತ ಪ್ರದೇಶವಾಗಿದ್ದು, ಯಾವುದೇ ನೀರಾವರಿ ಸೌಲಭ್ಯವಿಲ್ಲದೇ ಬರಡು ಪ್ರದೇಶವಾಗಿದೆ. ಈ ಹೋಬಳಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ನಡೆಸಲು ಮಳೆಯ ನೀರಿಗೆ ಅವಲಂಬಿತರಾಗಿದ್ದಾರೆ.
ಅಕ್ಕಿಹೆಬ್ಬಾಳು ಹೋಬಳಿಯ ಸುಮಾರು 11 ಕೆರೆಗಳು ಸಕಾಲದಲ್ಲಿ ಮಳೆಯಾದರೆ ಮಾತ್ರ ತುಂಬುತ್ತವೆ. ಈ ನಿಟ್ಟಿನಲ್ಲಿ ಸದರಿ ಕೆರೆಗಳು ತುಂಬಿ ಬಹಳ ವರ್ಷಗಳೇ ಕಳೆದಿವೆ. ಈ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಅಂತರ್ಜಲ ಮಟ್ಟವು ಸುಮಾರು 600 ರಿಂದ 700 ಅಡಿಗಳವರೆಗೆ ಕುಸಿದಿರುತ್ತದೆ. ಈ ಹಿನ್ನೆಲೆಯಲ್ಲಿ ಕೆ.ಆರ್. ಪೇಟೆ ತಾಲ್ಲೂಕಿನ 11 ಕೆರೆಗಳಿಗೆ ನೀರು ತುಂಬಿಸುವುದರಿಂದ ಈ ಕೆರೆಗಳ ಸುತ್ತಮುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಗ್ರಾಮದ ಜನರಿಗೆ ಹಾಗೂ ದನಕರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಈ ಭಾಗದ ಅಂತರ್ಜಲ ಮಟ್ಟ ಏರಿಕೆಯಾಗುವುದರಿಂದ 22.5 ಕೋಟಿ ರೂ. ಮೊತ್ತದ ಯೋಜನಾ ವರದಿಗೆ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ.
ಹೇಮಾವತಿ ನದಿ ನೀರು ತುಂಬಿಸುವ 11 ಕೆರೆಗಳು ಹೀಗಿವೆ
1. ಗದ್ದೆಹೊಸೂರು ಕೆರೆ
2. ಹೊನ್ನೆನಹಳ್ಳಿ ಕೆರೆ
3. ಮುದ್ದನಹಳ್ಳಿ ಕೆರೆ
4. ಕ್ಯಾಥನಹಳ್ಳಿ ಕೆರೆ
5. ಚೌಡಸಮುದ್ರ ಕೆರೆ
6. ಬೀರುವಳ್ಳಿ ಕೆರೆ
7. ಹಂಗರ ಮುದ್ದನಹಳ್ಳಿ ಕೆರೆ
8. ಬೀಕನಹಳ್ಳಿ ಕೆರೆ
9. ಅರೇನಹಳ್ಳಿ ಕೆರೆ
10. ಗುಬ್ಬಳ್ಳಿ ಕೆರೆ
11. ಸಾಕ್ಷಿಬೀಡು ಕೆರೆ
ಅದರ ಜೊತೆಗೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಹಳ್ಳಿ ಗ್ರಾಮದಲ್ಲಿ ಹಳ್ಳಕ್ಕೆ ಸರಣಿ ಚೆಕ್ ಡ್ಯಾಂ ನಿರ್ಮಾಣಕ್ಕೆ 11.34 ಕೋಟಿ ರೂಪಾಯಿ ವೆಚ್ಚದ ಪರಿಷ್ಕೃತ ಮೊತ್ತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಆಲೂರು ಪಿಟ್ಲಹಳ್ಳಿ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟದ ಅನುಮೋದನೆ: ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ-ಆಲೂರು ಪಿಟ್ಲಳ್ಳಿ ಗ್ರಾಮಗಳ ಮಧ್ಯೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ಕಾಮಗಾರಿಯ ರೂ.15.66 ಕೋಟಿ ಮೊತ್ತದ ವಿವರವಾದ ಯೋಜನಾ ವರದಿಗೆ ರಾಜ್ಯ ಸಚಿವರ ಸಂಪುಟ ಸೋಮವಾರ ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆಲೂರು-ಪಿಟ್ಲಳ್ಳಿ ಗ್ರಾಮಗಳ ಮಧ್ಯೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.15.66 ಕೋಟಿ ಕಾಮಗಾರಿಯನ್ನು ವಿಶೇಷ ಅಭಿವೃದ್ಧಿ ಯೋಜನೆಯಡಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಆಲೂರು ಪಿಟ್ಲಳ್ಳಿ ಗ್ರಾಮಗಳ ಮಧ್ಯೆ ಬ್ರಿಡ್ಜ್ ಕಂ ಬ್ಯಾರೇಜ್ನ ನಿರ್ಮಾಣದಿಂದಾಗಿ ಸದರಿ ಪ್ರದೇಶದ ಅಂತರ್ಜಲ ಮರು ಪೂರ್ಣಗೊಳಿಸಲು, ಬ್ಯಾರೇಜ್ ಸುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಸಹಾಯವಾಗಲಿದೆ. ಜೊತೆಗೆ ಆಲೂರು, ಪಿಟ್ಲಳ್ಳಿ ನಂದಿಹಳ್ಳಿ ಆದಿವಾಲ ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ಸಹಾಯವಾಗುವಂತೆ ಯೋಜನೆಗೆ ಅನುಮೋದನೆ ನೀಡಲಾಗಿದೆ.