ಮಂಡ್ಯ ಬಿಡುವ ಮಾತೇ ಇಲ್ಲ; ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸುಮಲತಾ ಹೇಳಿದ್ದೇನು?
ಮಂಡ್ಯ: ಇಂಡಿಯಾ ಲೋಕಸಭಾ ಚುನಾವಣೆಗೆ ಮುನ್ನ ಮಂಡ್ಯ ಭಾರಿ ಸದ್ದು ಮಾಡುತ್ತಿದೆ. ಹಾಲಿ ಸಂಸದೆ ಸುಮಲತಾ ಅವರ ಕಾರಣಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರ ಸದ್ಯ ಗಮನ ಸೆಳೆಯುತ್ತಿದ್ದು, ಯಾರೆಲ್ಲಾ ಸ್ಪರ್ಧೆ ಮಾಡುತ್ತಾರೆ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಜೆಡಿಎಸ್ ಎನ್ಡಿಎ ಒಕ್ಕೂಟ ಸೇರಿಕೊಂಡಿದ್ದು ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮಂಡ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಮಂಡ್ಯ ಸೀಟಿಗಾಗಿ ಬೇಡಿಕೆ ಇಟ್ಟಿದೆ ಎನ್ನುವ ವದಂತಿಗಳ ನಡುವೆ, ಬಿಜೆಪಿಗೆ ಬೆಂಬಲ ನೀಡಿರುವ ಸುಮಲತಾ ಅವರ ಸ್ಪರ್ಧೆ ಬಗ್ಗೆ ಚರ್ಚೆ ಜೋರಾಗಿದೆ.

ಸುಮಲತಾ ಬಿಜೆಪಿಯಿಂದ ಸ್ಪರ್ಧಿಸಲು ತೆರೆಮರೆಯಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಕಳೆದ ಚುನಾವಣೆಯಲ್ಲಿ ಮಂಡ್ಯದಲ್ಲಿ ಸುಮಲತಾ ಎದುರು ಮಗನನ್ನು ಕಣಕ್ಕಿಳಿಸಿ ಸೋತಿರುವ ಹೆಚ್ಡಿ ಕುಮಾರಸ್ವಾಮಿ ಜೆಡಿಎಸ್ ಸೀಟಿಗಾಗಿ ಪಟ್ಟು ಹಿಡಿದಿದ್ದು, ಬಿಜೆಪಿ ಒಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಂಡ್ಯ ಬಿಡುವ ಮಾತೇ ಇಲ್ಲ!
ಎಲ್ಲಾ ವದಂತಿಗಳ ನಡುವೆ ಸುಮಲತಾ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ ಮಂಡ್ಯ ಬಿಡುವ ಮಾತೇ ಇಲ್ಲ ಎಂದಿದ್ದಾರೆ. "ಮಂಡ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕೊನೆಯವರೆಗೂ ಹೋರಾಡುತ್ತೇನೆ. ಈಗ ಹರಿದಾಡುತ್ತಿರುವ ಸುದ್ದಿಗಳು ನಿಜವಲ್ಲ. ನಾನೇ ಸ್ಪರ್ಧೆ ಮಾಡುತ್ತೇನೆ" ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಬಲ ಹೆಚ್ಚಿಸಲು ಸಾಕಷ್ಟು ಕೆಲಸ ಮಾಡಿದ್ದೇನೆ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಟಿಕೆಟ್ ಅಂತಿಮವಾಗುವವರೆಗೂ ಕಾದು ನೋಡುತ್ತೇನೆ. ಬಳಿಕ ಈ ಬಗ್ಗೆ ಮಾತನಾಡುತ್ತೇನೆ. ಬಿಜೆಪಿಗೆ ಮಂಡ್ಯ ಕ್ಷೇತ್ರ ಸಿಗುವ ಸಾಧ್ಯತೆ ಇದೆ, ನನಗಾಗಿ ಟಿಕೆಟ್ ಕೇಳುತ್ತಿಲ್ಲ, ಮಂಡ್ಯ ಜನತೆಗಾಗಿ ಹೋರಾಡುತ್ತಿದ್ದೇನೆ ಎಂದು ಹೇಳಿದರು.
'ಕ್ಷೇತ್ರದಲ್ಲಿ ಕಲ್ಲು ಗಣಿಗಾರಿಕೆ ವಿರುದ್ಧ ಹೋರಾಡುವಾಗ ನನಗೆ ಪ್ರಾಣ ಬೆದರಿಕೆ ಇತ್ತು. ಹೋರಾಟ ನಿಲ್ಲಿಸುವಂತೆ ಹಲವರಿ ಬೆದರಿಕೆ ಹಾಕಿದ್ದರು. ಕೆಆರ್ ಎಸ್ ಉಳಿಸಲು ಸಾಕಷ್ಟು ಹೋರಾಟ ಮಾಡಿದ್ದೇನೆ ಅದರ ಫಲವಾಗಿ ಹೈಕೋರ್ಟ್ ಜಲಾಶಯದ 20 ಕಿ.ಮೀ. ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿದೆ ಎಂದು ಹೇಳಿದರು.
ಕರ್ನಾಟಕ ರಾಜಕೀಯದಲ್ಲಿ ಮಂಡ್ಯ ಕ್ಷೇತ್ರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಾಂಗ್ರೆಸ್ ಸದ್ಯ ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದು, ಬಿಜೆಪಿಯಿಂದ ಟಿಕೆಟ್ ಸಿಗದೇ ಇದ್ದರೆ ಸುಮಲತಾ ಅವರನ್ನು ಪಕ್ಷಕ್ಕೆ ಕರೆತರುವ ಯೋಜನೆ ಕೂಡ ಇದೆ ಎಂದು ಹೇಳಲಾಗುತ್ತಿದೆ. ಆದರೆ ಟಿಕೆಟ್ ಘೋಷಣೆಯಾದ ಬಳಿಕ ಜಿಲ್ಲಾ ರಾಜಕೀಯ ಮತ್ತಷ್ಟು ರಂಗೇರುವುದು ಮಾತ್ರ ಖಚಿತವಾಗಿದೆ.












Click it and Unblock the Notifications