ಕೇಂದ್ರೀಯ ವಿದ್ಯಾಲಯಗಳಿಗೆ ಖಾಯಂ ಶಿಕ್ಷಕರ ನೇಮಕಕ್ಕೆ ಕ್ರಮ; ಸಂಸದೆ ಸುಮಲತಾ ಭರವಸೆ
ಮಂಡ್ಯ, ಸೆಪ್ಟೆಂಬರ್, 14: ಕೇಂದ್ರೀಯ ವಿದ್ಯಾಲಯಕ್ಕೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವುದಕ್ಕೆ ಶೀಘ್ರ ಕ್ರಮ ವಹಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ ತಿಳಿಸಿದರು.
ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಂಡ್ಯ ಕೇಂದ್ರೀಯ ವಿದ್ಯಾಲಯವೊಂದರಲ್ಲೇ ಮಾತ್ರವಲ್ಲ. ರಾಜ್ಯದ ಎಲ್ಲಾ ಕೇಂದ್ರೀಯ ವಿದ್ಯಾಲಯಗಳಲ್ಲೂ ಖಾಯಂ ಶಿಕ್ಷಕರ ಕೊರತೆ ಇದೆ. ಸದ್ಯದಲ್ಲೇ ಕೇಂದ್ರ ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಕನಿಷ್ಠ 4ರಿಂದ 5 ಖಾಯಂ ಶಿಕ್ಷಕರನ್ನು ತುರ್ತಾಗಿ ವರ್ಗಾಯಿಸುವಂತೆ ಮನವಿ ಮಾಡುತ್ತೇನೆ. ಕೇಂದ್ರೀಯ ವಿದ್ಯಾಲಯಕ್ಕೆ ಉತ್ತರ ಭಾರತದಿಂದ ಹೆಚ್ಚಿನ ಶಿಕ್ಷಕರು ನೇಮಕಗೊಂಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಆಯಾ ರಾಜ್ಯಕ್ಕೆ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ಬೇರೆಯವರನ್ನು ಇಲ್ಲಿಗೆ ವರ್ಗಾವಣೆ ಮಾಡಿದರೂ ಮೂಲ ಸೌಲಭ್ಯಗಳಿಲ್ಲದ ಕಾರಣ ವರ್ಗಾವಣೆಗೊಂಡ ಶಿಕ್ಷಕರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದರು.
ನೂತನ ಕಟ್ಟಡ ನಿರ್ಮಾಣ ಆದರೆ ಸುಸಜ್ಜಿತ ಕ್ವಾಟ್ರಸ್ ನಿರ್ಮಾಣ ಆಗುತ್ತದೆ. ಆಗ ಖಾಯಂ ಶಿಕ್ಷಕರ ಕೊರತೆ ಆಗುವುದಿಲ್ಲ. ಈಗಾಗಲೇ ಕೇಂದ್ರೀಯ ವಿದ್ಯಾಲಯ ನೂತನ ಕಟ್ಟಡ ನಿರ್ಮಾಣಕ್ಕೆ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದೆ. ಶೀಘ್ರದಲ್ಲೇ ಭವ್ಯ ಕಟ್ಟಡ ನಿರ್ಮಾಣ ಆಗಲಿದೆ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಕೇಂದ್ರೀಯ ವಿದ್ಯಾಲಯದಲ್ಲಿರುವ ಸಮಸ್ಯೆಗಳನ್ನು ಗಮನಿಸಿದ್ದೇನೆ. ನೂತನ ಕಟ್ಟಡ ಕಾಮಗಾರಿ ಪೂರ್ಣಗೊಂಡರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅದನ್ನು ಸಂಪೂರ್ಣ ಮಾಡುತ್ತೇನೆ. ಉಳಿಗೆ 5 ಲಕ್ಷ ರೂಪಾಯಿ ಅನುದಾನವನ್ನು ಎಂಪಿ ನಿಧಿ ಬಳಸಿಕೊಂಡು ತ್ವರಿತವಾಗಿ ಕಾಮಗಾರಿ ಪೂರೈಸಲು ಸೂಚಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.
ಕೇಂದ್ರೀಯ ವಿದ್ಯಾಲಯ ಕಟ್ಟಡಕ್ಕೆ ಅನುದಾನ
ಜಿಲ್ಲೆಯಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲ ಆಗುವಂತೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈಶುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಹಾಗೂ ಶಾಲೆಯ ಪ್ರಗತಿ ಕುರಿತು ಜಿಲ್ಲಾಕಾರಿ ಎಸ್.ಅಶ್ವತಿ, ಮಂಡ್ಯ ಉಪವಿಭಾಗಾಧಿಕಾರಿ ಐಶ್ವರ್ಯ ಅವರಿಂದ ಮಾಹಿತಿ ಪಡೆದರು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರಿಂದ 3 ಲಕ್ಷ ರೂಪಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರಿಂದ 2.50 ಲಕ್ಷ ರೂಪಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂಪಾಯಿ ಅನುದಾನ ಬಂದಿದೆ. ಮೈಷುಗರ್ ಪ್ರೌಢಶಾಲೆ ದುರಸ್ತಿ ಕಾರ್ಯಕ್ಕೆ 5 ಲಕ್ಷ ರೂಪಾಯಿ ಕೊರತೆ ಇರುವುದಾಗಿ ಇಂಜಿನಿಯರ್ ತಿಳಿಸಿದ್ದಾರೆ ಎಂದರು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊಠಡಿ ನಿರ್ಮಾಣ
ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈಶುಗರ್ ಪ್ರೌಢಶಾಲೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗುವುದು. ನಂತರ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಪ್ರೌಢಶಾಲೆಯಲ್ಲಿ ಶೌಚಾಲಯ ಹಾಗೂ ಶಾಲೆಯ ಕೊಠಡಿಗಳಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚುವರಿ ಅನುದಾನದ ಅವಶ್ಯಕತೆ ಇದೆ ಎಂದು ಜಿಲ್ಲಾಕಾರಿ ಎಸ್.ಅಶ್ವತಿ ತಿಳಿಸಿದರು.
ಪಿಯು ತರಗತಿಗಳನ್ನು ನಡೆಸಲು ಅಸಾಧ್ಯ
ಪ್ರಾಂಶುಪಾಲ ಸುಧೀರ್ ಶರ್ಮಾ ಪ್ರತಿಕ್ರಿಯಿಸಿ ಕೊಠಡಿಗಳ ಸಮಸ್ಯೆಯಿಂದಾಗಿ ಪಿಯು ತರಗತಿಗಳನ್ನು ಮಾಡಲು ಸಾಧ್ಯವಾಗಿಲ್ಲ. ನೂತನ ಕಟ್ಟಡ ನಿರ್ಮಾಣವಾದ ನಂತರ ಪಿಯು ತರಗತಿಗಳನ್ನು ಪ್ರಾರಂಭ ಮಾಡಲಾಗುವುದು. ಸ್ಥಳೀಯ ಪ್ರಾದೇಶಿಕ ಭಾಷೆಯನ್ನು ಒಂದು ವಿಷಯವಾಗಿ ಮಾಡಲು ಅವಕಾಶ ಇದೆ. ಆದರೂ ಮಂಡ್ಯ ಕೇಂದ್ರೀಯ ವಿದ್ಯಾಲಯ ಆಡಳಿತ ಮಂಡಳಿ ತಲೆ ಕೆಡಿಸಿಕೊಳ್ಳುತ್ತಿಲ್ಲ. ಮಂಡ್ಯದಂತಹ ಜಿಲ್ಲೆಯಲ್ಲಿ ಕನ್ನಡ ಭಾಷೆ ಕಲಿಸುತ್ತಿಲ್ಲ ಎಂದರೆ ಏನರ್ಥ ಎಂದು ಪೋಷಕರು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರಾಂಶುಪಾಲರು ಪ್ರತಿಕ್ರಿಯಿಸಿ ಇದಕ್ಕೆ ಸಂಬಂಸಿದಂತೆ ಗುತ್ತಿಗೆ ಆಧಾರ ಮೇಲೆ ಕನ್ನಡ ಶಿಕ್ಷಕರನ್ನು ತೆಗೆದುಕೊಳ್ಳಲಾಗಿದೆ. ಇಂದಿನಿಂದಲೇ ಮಕ್ಕಳಿಗೆ ಕನ್ನಡ ಪಾಠ-ಪ್ರವಚನಗಳನ್ನು ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಶಾಶ್ವತ ಹುದ್ದೆಯಲ್ಲಿರುವ 3 ಜನ ಶಿಕ್ಷಕರು
ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ 23 ಜನ ಶಿಕ್ಷಕರ ಅವಶ್ಯಕತೆ ಇದ್ದು, ಈ ಪೈಕಿ ಕೇವಲ 3 ಜನ ಶಿಕ್ಷಕರು ಶಾಶ್ವತ ಹುದ್ದೆಯವರಾಗಿದ್ದಾರೆ. ಉಳಿದ 20 ಜನ ಶಿಕ್ಷಕರು ಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರದ ಮೂಲಕ ಗಮನಕ್ಕೆ ತರುತ್ತೇನೆ. ಹಾಗೂ ಈ ಬಾರಿಯ ಸಂಸತ್ ಅವೇಶನದಲ್ಲಿ ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ವಿದ್ಯಾಲಯ ಪೋಷಕರ ಸಂಘದ ಪದಾಧಿಕಾರಿಗಳಾದ ಬಿ.ಜೆ.ಸೋಮಶೇಖರ್, ರೂಪಲಕ್ಷ್ಮೀ ನಂದಿನಿ, ಮದನ್ ಗೌಡ ಹಾಗೂ ಶ್ವೇತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.