ಮಂಡ್ಯ; ದೇವಾಲಯದಲ್ಲಿ ಪ್ರಸಾದ ವಿತರಣೆಗೆ ತಡೆ
ಮಂಡ್ಯ, ಅಕ್ಟೋಬರ್ 29 : "ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಯಾವುದೇ ದೇವಾಲಯಗಳಲ್ಲಿ ಪ್ರಸಾದ ವಿತರಣೆಯನ್ನು ಮಾಡಬಾರದು" ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ನಿರ್ದೇಶನ ನೀಡಿದ್ದಾರೆ.
ಗುರುವಾರ ಜಿಲ್ಲಾಧಿಕಾರಿಗಳು ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಲಿಂಗಪಟ್ಟಣ ಗ್ರಾಮಕ್ಕೆ ಭೇಟಿ ನೀಡಿದರು. ಗ್ರಾಮದ ಮಾರಮ್ಮನ ದೇವಾಲಯದಲ್ಲಿ ವಿತರಣೆ ಮಾಡಿದ ಪ್ರಸಾದ ಸೇವಿಸಿ ಬುಧವಾರ 70 ಜನರು ಅಸ್ವಸ್ಥಗೊಂಡಿದ್ದರು.
ಮಂಗಳವಾರ ರಾತ್ರಿ ಪೂಜೆಯ ನಂತರ ಪ್ರಸಾದ ವಿತರಣೆ ಮಾಡಲಾಗಿತ್ತು. ಪ್ರಸಾದ ಸೇವಿಸಿದ 70 ಮಂದಿ ಅಸ್ವಸ್ಥರಾಗಿದ್ದರು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಲಿಂಗಪಟ್ಟಣ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

"ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ದೇವಾಲಯದಲ್ಲಿ ಪ್ರಸಾದ ವಿತರಣೆಯನ್ನು ಮಾಡಬಾರದು. ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರನ್ನು ಸೇರಿಸಿ ಗ್ರಾಮದ ಎಲ್ಲಾ ಜನರಿಗೂ ಕೋವಿಡ್ ಪರೀಕ್ಷೆ ಮಾಡಿಸಬೇಕು" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಜನರ ಮನೆಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಆರೋಗ್ಯ ವಿಚಾರಿಸಿದರು. ಗ್ರಾಮದಲ್ಲಿ ಆಚರಿಸುವ ಧಾರ್ಮಿಕ ಆಚರಣೆಗಳನ್ನು ತಮ್ಮ ಮನೆಯಲ್ಲಿಯೇ ಆಚರಿಸುವಂತೆ ಗ್ರಾಮದ ಜನರಿಗೆ ಸೂಚಿಸಿದರು.
ದೇವಾಲಯವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವಂತೆ ಸೂಚನೆ ನೀಡಿದರು. ಈ ಭೇಟಿಯ ಸಂದರ್ಭದಲ್ಲಿ ತಹಶೀಲ್ದಾರ್ ಚಂದ್ರಮೌಳಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಮುಂತಾದವರು ಜೊತೆಗಿದ್ದರು.
ದೇವಾಲಯದ ಪ್ರಸಾದ ತಿಂದು 17 ಜನರು ಮೃತಪಟ್ಟ ಘಟನೆ ಚಾಮರಾಜನಗರದ ಸುಳ್ವಾಡಿಯಲ್ಲಿ ನಡೆದಿತ್ತು. ಈ ಘಟನೆ ನಡೆದ ಒಂದು ವರ್ಷದ ಬಳಿಕ ದೇವಾಲಯವನ್ನು ಪುನಃ ತೆರೆಯಲಾಗಿದೆ.












Click it and Unblock the Notifications