ಮಂಡ್ಯದ ದೇವಸ್ಥಾನದಲ್ಲಿ ಮೂವರ ಬರ್ಬರ ಹತ್ಯೆ!
ಮಂಡ್ಯ, ಸೆ. 11: ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ಪ್ರಕರಣ ನಡೆದಿದೆ. ದೇವಾಲಯದಲ್ಲಿ ಮಲಗಿದ್ದವರನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ.
ದೇವಾಲಯದಲ್ಲಿ ಮಲಗಿದ್ದ ಮೂವರು ಕಾವಲುಗಾರರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಕೃತ್ಯ ಮಂಡ್ಯದ ಗುತ್ತಲಿನ ಅರ್ಕೇಶ್ವರ ದೇವಾಲಯದಲ್ಲಿ ನಡೆದಿದೆ.
ಅರ್ಕೇಶ್ವರ ದೇವಾಲಯದ ಮೂವರೂ ಕಾವಲುಗಾರರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಪ್ರಕಾಶ (34) ಆನಂದ (33) ಹಾಗೂ ಗಣಪತಿ (35) ಕೊಲೆಯಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಈ ಮೂವರು ದೇವಾಲಯದ ಕಾವಲುಗಾರಾಗಿ ಕೆಲಸ ಮಾಡುತ್ತಿದ್ದರು. ಈ ತ್ರಿವಳಿ ಕೊಲೆ ಸೇರಿದಂತೆ ಕಳೆದ ಒಂದು ವಾರದಲ್ಲಿ ಮಂಡ್ಯದಲ್ಲಿ ಒಟ್ಟು ಐದು ಜನರ ಕೊಲೆಯಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಮಂಡ್ಯದ ತೋಟದ ಮನೆಯಲ್ಲಿ ಕಾರ್ಮಿಕರ ಜೋಡಿ ಕೊಲೆ
ದೇವಸ್ಥಾನದ ಹುಂಡಿಯನ್ನು ಅನತಿ ದೂರದಲ್ಲಿ ಬಿಸಾಡಲಾಗಿದೆ. ಹೀಗಾಗಿ ಹುಂಡಿ ಕಳ್ಳತನಕ್ಕೆ ಮೂವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದೇವಾಲಯದಲ್ಲಿ ಕಳ್ಳತನ ನಡೆಸುವ ತಂಡದಿಂದ ವ್ಯವಸ್ಥಿತವಾಗಿ ದುಷ್ಕೃತ್ಯ ನಡೆದಿರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ.
Recommended Video
ಘಟನಾ ಸ್ಥಳಕ್ಕೆ ಮಂಡ್ಯ ಡಿವೈಎಸ್ಪಿ ನವೀನ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.