ಮಂಡ್ಯದಲ್ಲಿ ಮತ್ತೊಂದು ದುರಂತ: ವಿಸಿ ನಾಲೆಗೆ ಕಾರು ಬಿದ್ದು ಓರ್ವ ಸಾವು, ಇಬ್ಬರು ನಾಪತ್ತೆ
ಮಂಡ್ಯ, ಫೆಬ್ರವರಿ 03: ತಡೆಗೋಡೆ ಇಲ್ಲದ ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನರಿದ್ದು, ಕಾರು ಮಾಲೀಕ ಫಯಾಜ್ ಸಾವನ್ನಪ್ಪಿದ್ದಾರೆ. ಉಳಿದ ಮೂವರಲ್ಲಿ ಒಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಮತ್ತೆ ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ನಾಲ್ವರು ಪಾಂಡವಪುರದಿಂದ ಮಂಡ್ಯಕ್ಕೆ ಬರುವ ವೇಳೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ತಡೆಗೋಡೆ ಇಲ್ಲದ ಹಿನ್ನೆಲೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದಿದೆ. ಸದ್ಯ ಸ್ಥಳದಲ್ಲಿ ಶಿವಳ್ಳಿ ಠಾಣೆ ಪೊಲೀಸರು ಹಾಗೂ ಮಂಡ್ಯ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಇಬ್ಬರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನೀರಿನ ರಭಸಕ್ಕೆ ಕಾರು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಅಲ್ಲದೇ ನೀರಿನ ರಭಸದಿಂದ ಉಳಿದ ಇಬ್ಬರ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ.

ಇನ್ನು ಕಾರು ಬಿದ್ದ ಸ್ಥಳಕ್ಕೆ ಕ್ರೇನ್ ಆಗಮಿಸಿದ್ದು, ಕ್ರೇನ್ ಮೂಲಕ ಕಾರು ಮೇಲೆತ್ತುವ ಕಾರ್ಯಾಚರಣೆ ಆರಂಭವಾಗಿದೆ. ಸ್ಥಳದಲ್ಲಿ ನೂರಾರು ಜನರು ಜಮಾವಣೆ ಆಗಿದ್ದು, ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲೇ ಪ್ರತಿಭಟನೆ ಕುಳಿತ ಜನರು ಸ್ಥಳಕ್ಕೆ ಸಚಿವರು, ಶಾಸಕರು, ಅಧಿಕಾರಿಗಳು ಬರಲಿ ಹಾಗೂ ನಾಲೆಗೆ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ನಿರ್ಲಕ್ಷ್ಯ ತೋರಿದ ಜಿಲ್ಲಾಡಳಿತ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ದುರಂತ ನಡೆದ ಸ್ಥಳಕ್ಕೆ ಬಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿ ಇಂಜಿನಿಯರ್ ಜಗದೀಶ್ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮಿಂದಲೇ ದುರಂತ, ಕಾರಣವೇ ನೀವು ಎಂದು ಕಿಡಿಕಾರಿರುವ ಸ್ಥಳೀಯರು ಕೂಡಲೇ ತಡೆಗೋಡೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.












Click it and Unblock the Notifications