ಅಪರಾಧಿಗಳಿಗೆ ಪ್ರೋತ್ಸಾಹ ಕೊಡುವ ಪಕ್ಷದಿಂದ ದೇಶದ ಉದ್ಧಾರ ಅಸಾಧ್ಯ- ಕಾಂಗ್ರೆಸ್ ವಿರುದ್ಧ ಅಮಿತ್ ಶಾ ಕಿಡಿ
ಮಂಡ್ಯ, ಡಿಸೆಂಬರ್ 31: ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳು ಜಾತಿವಾದಿ, ಅಪರಾಧಿಗಳಿಗೆ ಪ್ರೋತ್ಸಾಹ ಕೊಡುವ ಪಕ್ಷಗಳಾಗಿವೆ. ಇವುಗಳಿಂದ ದೇಶದ ಉದ್ಧಾರ ಹೇಗೆ ಸಾಧ್ಯ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಪ್ರಶ್ನಿಸಿದರು.
ಬಿಜೆಪಿ ವತಿಯಿಂದ ನಗರದ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಎರಡು ಪಕ್ಷಗಳು ಪಾಲು ಪಡೆದಿವೆ. ಕುಟುಂಬವಾದ ಮತ್ತು ಭ್ರಷ್ಟಾಚಾರ ಮುಕ್ತತೆಗಾಗಿ ಬಿಜೆಪಿಗೆ ಪೂರ್ಣ ಬಹುಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಕಿಸಾನ್ ಸಮ್ಮಾನ್ ನಿಧಿ ಮೂಲಕ ರೈತರಿಗೆ ಆರು ಸಾವಿರವನ್ನು ಮೋದಿ ಕೊಟ್ಟರು. ಅದಕ್ಕೆ ₹4ಸಾವಿರವನ್ನು ಯಡಿಯೂರಪ್ಪ ಅವರು ಸೇರಿಸಿ ಕೊಡುತ್ತಿದ್ದಾರೆ. ರಾಜ್ಯದ 50 ಲಕ್ಷ ರೈತರಿಗೆ ₹12 ಸಾವಿರ ಕೋಟಿ ರೂಪಾಯಿ ನೀಡಲಾಗಿದೆ. ನೀರಾವರಿ ಯೋಜನೆಯಿಂದ 3 ಲಕ್ಷ ಹೆಕ್ಟೇರ್ ಭೂಮಿಗೆ ಇದರಿಂದ ಪ್ರಯೋಜನವಾಗಿದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರ ಸರ್ಕಾರಗಳು ₹13 ಸಾವಿರ ಕೋಟಿ ಮೊತ್ತವನ್ನು ವಿನಿಯೋಗ ಮಾಡಿದ್ದಾರೆ ಎಂದು ಅಮಿತ್ ಶಾ ರೈತರಿಗೆ ವಿವರಿಸಿದರು.

ನೀತಿ ಆಯೋಗದ ಬಹುಮಾವನ್ನೂ ಕರ್ನಾಟಕ ಪಡೆಯುತ್ತಿದೆ
ಮಾತು ಮುಂದುವರಿಸಿದ ಅವರು, ಕೇಂದ್ರದ ನೆರವಿನಿಂದ ಇಲ್ಲಿ ಔದ್ಯೋಗಿಕ ವಿಕಾಸವೂ ಆಗಿದೆ. ನೀತಿ ಆಯೋಗದ ಬಹುಮಾವನ್ನೂ ಕರ್ನಾಟಕ ಪಡೆಯುತ್ತಿದೆ. 8 ಸಾವಿರ ಕೋಟಿ ರೂಪಾಯಿ ಬೆಂಗಳೂರು ಮೈಸೂರು ಹೆದ್ದಾರಿ, ಬೆಂಗಳೂರು- ಹೈದರಾಬಾದ್ ಎಕ್ಸ್ಪ್ರೆಸ್ ಹೆದ್ದಾರಿ, ಬೆಂಗಳೂರು ವಿಮಾನ ನಿಲ್ದಾಣ ಎರಡನೇ ಟರ್ಮಿನಲ್ಗೆ 5 ಸಾವಿರ ಕೋಟಿ ರೂಪಾಯಿಯನ್ನು ವಿನಿಯೋಗಿಸಿದ್ದೇವೆ ಎಂದು ಅಮಿತ್ ಶಾ ತಿಳಿಸಿದರು.

ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಗಾಲು ಹಾಕಿತ್ತು
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡಿ ಭಾರತವನ್ನು ಕೋವಿಡ್ ಮುಕ್ತ ಮಾಡಿದ್ದಾರೆ. 80 ಕೋಟಿ ಜನರಿಗೆ ಉಚಿತ ಪಡಿತರ ಕೊಟ್ಟಿದ್ದಾರೆ. ಬೆಟ್ಟ ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲಾಗಿದೆ. 2019ರಲ್ಲಿ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದರು. ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಗಾಲು ಹಾಕಿತ್ತು. 2024ರಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ ಆಗಲಿದೆ. ಕಾಶಿ ವಿಶ್ವನಾಥ, ಕೇದಾರನಾಥ ಕ್ಷೇತ್ರ ಅಭಿವೃದ್ಧಿಯೂ ಆಗಿದೆ ಎಂದರು.

ಕಾಂಗ್ರೆಸ್- ಜೆಡಿಎಸ್ ಭ್ರಷ್ಟತೆಯಿಂದ ಕೂಡಿವೆ
ಬಿಜೆಪಿ ಅಧಿಕಾರಕ್ಕೆ ಬಂದಾಗ ಇಬ್ಬರು ದಲಿತರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದೆ. ದಲಿತರು, ಆದಿವಾಸಿಗಳು, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಜನ್ ದನ್ ಮೂಲಕ ಬ್ಯಾಂಕ್ ಖಾತೆ, ಕಿಸಾನ್ ಸಮ್ಮಾನ್ ಮೂಲಕ ಹಣ ನೀಡಿದ್ದೇವೆ. ಮನೆ ಮನೆಗೆ ವಿದ್ಯುತ್, ಶೌಚಾಲಯ, ಒದಗಿಸಿದ್ದೇವೆ. ಆದರೆ ಕಾಂಗ್ರೆಸ್- ಜೆಡಿಎಸ್ ಕುಟುಂಬದ ರಾಜಕೀಯ ಪಕ್ಷಗಳು. ಅವು ಭ್ರಷ್ಟತೆಯಿಂದ ಕೂಡಿವೆ. ಕಾಂಗ್ರೆಸ್ ಬಂದಾಗ ದೆಹಲಿ ಎಟಿಎಂ ಆಗುತ್ತದೆ. ಜೆಡಿಎಸ್ ಬಂದರೆ ಕುಟುಂಬದ ಎಟಿಎಂ ಆಗುತ್ತದೆ. ರಾಜ್ಯದ ಜನರು ಇವೆರಡು ಪಕ್ಷಗಳಿಂದ ಬೇಸತ್ತಿದ್ದಾರೆ ಎಂದು ಹೇಳಿದರು.

ನಾವು ಪಿಎಫ್ಐಯನ್ನು ಬ್ಯಾನ್ ಮಾಡಿದ್ದೇವೆ
ಕಾಂಗ್ರೆಸ್, ಜೆಡಿಎಸ್ ಈ ಭಾಗದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಆದರೆ ಬಿಜೆಪಿ ಎಕ್ಸ್ಪ್ರೆಸ್ ವೇ, ರೈಲು ಮಾರ್ಗಗಳ ವಿದ್ಯುದೀಕರಣ, ಹೆದ್ದಾರಿ ನಿರ್ಮಾಣ ಕಾರ್ಯವನ್ನು ಮಾಡಿದೆ. ಮೈಶುಗರ್ ಕಾರ್ಖಾನೆ ಬಂದ್ ಆಗಿತ್ತು. ಅದರ ಪುನರಾರಂಭಕ್ಕಾಗಿ ಬೊಮ್ಮಾಯಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
2024ರ ಲೋಕಸಭಾ ಚುನಾವಣೆಗೂ ಮೊದಲು ಕರ್ನಾಟಕದ ವಿಧಾನಸಭಾ ಚುನಾವಣೆ ಇದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ. ಕರ್ನಾಟಕ ಹಾಗೂ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಮತ್ತು ಸುರಕ್ಷಿತವಾಗಿರಲು ನೆರವಾಗಿ. ಪಿಎಫ್ಐ ಕೇಸನ್ನು ಸಿದ್ದರಾಮಯ್ಯ ಸರ್ಕಾರ ಹಿಂದಕ್ಕೆ ಪಡೆದಿತ್ತು. ಆದರೆ, ನಾವು ಪಿಎಫ್ಐಯನ್ನು ಬ್ಯಾನ್ ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಕೆ.ಗೋಪಾಲಯ್ಯ, ಡಾ. ಅಶ್ವತ್ಥ್ ನಾರಾಯಣ್, ಕೆ.ಸಿ. ನಾರಾಯಣಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ಕುಮಾರ್ ಸುರಾನ, ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications