ಮಂಡ್ಯ : ಪರೀಕ್ಷೆಯಲ್ಲಿ ಕಡಿಮೆ ಅಂಕ, ವಿದ್ಯಾರ್ಥಿನಿ ಆತ್ಮಹತ್ಯೆ
ಮಂಡ್ಯ, ಜುಲೈ 19 : ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದುಕೊಂಡಿದ್ದಕ್ಕೆ ಶಿಕ್ಷಕರು ಬೈದಿದ್ದರಿಂದ ನೊಂದ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕೋಡಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚೈತನ್ಯ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಸಂಗೀತಾ (14) ಆತ್ಮಹತ್ಯೆ ಮಾಡಿಕೊಂಡವರು. ಸಂಗೀತಾ ತಾಲೂಕಿನ ಕಳ್ಳನಕೆರೆ ಗ್ರಾಮದ ಪಂಕಜರವರ ಪುತ್ರಿ. ತರಗತಿಯಲ್ಲಿ ನಡೆಸಿದ ಕಿರು ಪರೀಕ್ಷೆಯಲ್ಲಿ ಸಂಗೀತ ಕಡಿಮೆ ಅಂಕಗಳನ್ನು ಪಡೆದಿದ್ದಳು.
ಶಿಕ್ಷಕರು ನೀನು ಈಗಿನಿಂದಲೇ ಚೆನ್ನಾಗಿ ಓದಬೇಕು. ಇಲ್ಲದಿದ್ದರೆ ಮುಂದಿನ ವರ್ಷ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲಾದರೆ ಶಾಲೆಗೆ ದೊರೆಯುವ ಶೇ.100ಕ್ಕೆ 100ರಷ್ಟು ಫಲಿತಾಂಶಕ್ಕೆ ಧಕ್ಕೆ ಬರಲಿದೆ, ಶಾಲೆಯ ಗೌರವ ಹಾಳಾಗುತ್ತದೆ ಎಂದು ಹೇಳಿದ್ದರು.
ಈಗಿನಿಂದಲೇ ಚೆನ್ನಾಗಿ ಓದಬೇಕು ಇಲ್ಲದಿದ್ದರೆ ಟಿಸಿ ಕೊಟ್ಟು ಬೇರೆ ಶಾಲೆಗಳು ಕಳುಹಿಸಬೇಕಾಗುತ್ತದೆ ಎಂದು ಶಿಕ್ಷಕರು ಹೇಳಿದ್ದರು ಎಂದು ತಿಳಿದುಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೋಷಕರು ಕಿಕ್ಕೇರಿ ಪೊಲೀಸರಿಗೆ ಶಿಕ್ಷಕರ ವಿರುದ್ಧ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕ್ಷೇತ್ರಶಿಕ್ಷಣಾಧಿಕಾರಿ ಬೆಟ್ಟನಾಯಕ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಹೆಚ್.ಬಿ.ವೆಂಕಟೇಶಯ್ಯ, ಕಿಕ್ಕೇರಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆರ್.ಸಿದ್ಧರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.