ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ: ಎದೆ ಝಲ್ ಎನಿಸುವ ವಿಡಿಯೋ ವೈರಲ್
ಮಂಡ್ಯ, ಜುಲೈ 21: ಕಳೆದ ಹದಿನೈದು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರಮುಖ ನದಿಗಳಾದ ಕಾವೇರಿ, ತುಂಗಾ ಭದ್ರಾ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದೆ. ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾದ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತಟದ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಸ್ಥಳಾಂತರ ಮಾಡಲಾಗುತ್ತಿದ್ದು, ತಗ್ಗು ಹಾಗೂ ನದಿ ತಟದ ಪ್ರದೇಶಗಳಿಗೆ ಯಾರೂ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಇಷ್ಟೆಲ್ಲಾ ಮುನ್ನೆಚ್ಚರಿಕೆಯ ನಡುವೆಯೂ ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವಿಡಿಯೋವೊಂದು ವೈರಲ್ ಆಗುತ್ತಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಬಿನಿ ಹಾಗೂ ಕೆಆರ್ಎಸ್ ಜಲಾಶಯದಿಂದ ನೀರು ಬಿಡುಗಡೆಯಾದ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಏಕಾಏಕಿ ನೀರು ಉಕ್ಕಿ ಯುವ ಸಿಲುಕಿಕೊಂಡಿದ್ದಾನೆ. ಯುವಕ ದಡ ಸೇರಲಾಗದೆ ನೋಡನೋಡುತ್ತಿದ್ದಂತೆ ಕಿಲೋ ಮೀಟರ್ಗಟ್ಟಲೆ ಕೊಚ್ಚಿ ಹೋಗಿದ್ದಾನೆ.
ಈ ದೃಶ್ಯ ಕಂಡ ಸ್ಥಳೀಯರು ದೃಶ್ಯವನ್ನು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಕೆಆರ್ಎಸ್ ತುಂಬಲು ಕೆಲವೇ ಅಡಿ ಬಾಕಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಡ್ಯಾಂ ಭರ್ತಿಗೆ ಇನ್ನು ಕೆಲವೇ ಅಡಿ ಬಾಕಿ ಇದೆ. ಕೆಆರ್ಎಸ್ ಅಣೆಕಟ್ಟಿಗೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಕೆಆರ್ಎಸ್ ಡ್ಯಾಂಗೆ ಕನಿಷ್ಠ 44,617 ಕ್ಯುಸೆಕ್ ನೀರು ಬರುತ್ತಿದೆ 124.80 ಅಡಿ ಗರಿಷ್ಠ ಅಡಿಯ ಕೆಆರ್ಎಸ್ ಡ್ಯಾಂ 116.60 ಅಡಿ ಭರ್ತಿಯಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಕೆಆರ್ಎಸ್ ಡ್ಯಾಂ ತುಂಬಲು 7-8 ಅಡಿಯಷ್ಟೇ ಬಾಕಿ ಇದೆ.












Click it and Unblock the Notifications