ಕಾವೇರಿ ನದಿಗೆ ಹೆಚ್ಚುವರಿ ನೀರು: ಮುಳುಗುವ ಭೀತಿಯಲ್ಲಿ ನಡುಗಡ್ಡೆಗಳು
ಶ್ರೀರಂಗಪಟ್ಟಣ,ಜೂ,11: ಕೊಡಗಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅವಧಿಗೂ ಮುನ್ನ ಕೆ. ಆರ್. ಎಸ್ ಜಲಾಶಯ ತುಂಬಿದ್ದುಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಅಣೆಕಟ್ಟೆಯ ಕೆಳ ಭಾಗದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿರುವ ಕಾರಣ ಅಗ್ನಿಶಾಮಕ ದಳದ ಅಧಿಕಾರಿಗಳು ವಿಪತ್ತು ಎದುರಿಸಲು ಪರಿಶೀಲನೆ ನಡೆಸಿದರು.
ಜಿಲ್ಲಾಡಳಿತವೂ ಸಹ ಈಗಾಗಲೇ ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಎಚ್ಚರಿ ನೀಡಿದ್ದು. ಈ ಹಿನ್ನೆಲೆಯಲ್ಲಿ ಮುಳುಗಡೆ ಭೀತಿ ಎದುರಿಸುತ್ತಿರುವ ಪ್ರದೇಶಗಳಿಗೆ ಮೈಸೂರು ಅಗ್ನಿ ಶಾಮಕ ದಳದ ಅಧಿಕಾರಿ ಜಯರಾಂ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ನಿರಂತರ ಮಳೆಯಿಂದ ನದಿಯ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಅವಘಡ ನಡೆಯುವುದಕ್ಕೂ ಮುನ್ನ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾವೇರಿ ನದಿ ಪಾತ್ರದ ಕೆ. ಆರ್. ಎಸ್, ಬಲಮುರಿ, ಎಡಮುರಿ, ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಗಂಜಾಂ ನಿಮಿಷಾಂಭ, ತಿ. ನರಸೀಪುರ, ಕೊಳ್ಳೇಗಾಲ, ದಾಸನಪುರ, ಮುಳ್ಳೂರು ಸೇರಿದಂತೆ ವಿವಿಧ ಸೂಕ್ಷ್ಮ ವಲಯ ಎಂದು ಪರಿಗಣಿಸಿದ್ದು, ಅಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ನಡುಗಡ್ಡೆಗಳ ಮುಳುಗಡೆ; ಕೃಷ್ಣರಾಜಸಾಗರ ಜಲಾಶಯದಿಂದ ಸದ್ಯ 50 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಹೊರ ಹರಿವಿನ ಪ್ರಮಾಣ 1 ಲಕ್ಷ ದಾಟಿದಲ್ಲಿ ಈ ಭಾಗದಲ್ಲಿರುವ ಹಲವಾರು ನಡುಗಡ್ಡೆಗಳು ಮುಳುಗುವ ಭೀತಿಯಲ್ಲಿವೆ. ಈಗಾಗಲೇ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ.
ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ; ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಸದ್ಯಕ್ಕೆ ಇರುವ ಪಕ್ಷಿ ಸಂಕುಲಗಳಿಗೆ ತೊಂದರೆಯಾಗಿಲ್ಲ.
ಒಂದು ವೇಳೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಲ್ಲಿ ಮಾತ್ರ ತೊಂದರೆ ಆಗಬಹುದು ಎಂದು ಅಂದಾಜಿಸಲಾಗಿದೆ. ಒಟ್ಟಾರೆ ಅಪಾಯ ಸಂಭವಿಸುವುಕ್ಕೂ ಮುನ್ನವೇ ಎಲ್ಲಾ ಸುರಕ್ಷತಾ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದ್ದು, ಪರಿಸ್ಥಿತಿಯನ್ನು ಅರಿತು ಕಾರ್ಯೋನ್ಮಖವಾಗಲೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.












Click it and Unblock the Notifications